Delhi Elections 2025: ಬಿಜೆಪಿಯಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ: ಕರ್ನಾಟಕದಿಂದ ಯಾರೂ ಇಲ್ಲ
ನವದೆಹಲಿ, ಜನವರಿ 16: ದೆಹಲಿ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಯ ಬೆನ್ನಲ್ಲೇ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದೆ. ದೆಹಲಿಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಎಎಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಮೂರು ಪಕ್ಷಗಳಲ್ಲೂ ಮತದಾರರನ್ನ ಸೆಳೆಯಲು ಗ್ಯಾರಂಟಿ ಯೋಜನೆಯನ್ನ ಅಸ್ತ್ರವನ್ನಾಗಿ ಮಾಡಿಕೊಂಡಿದೆ. ಈ ಬಾರಿ ದೆಹಲಿಯಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು ಬಿಜೆಪಿ ಭರ್ಜರಿ ಸಿದ್ದತೆ ನಡೆಸಿದ್ದು, ಸ್ಟಾರ್ ಪ್ರಚಾರಕರ ಪಟ್ಟಿಯನ್ನ ಬಿಡುಗಡೆ ಮಾಡಿದೆ.
ದೆಹಲಿ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ 40 ಸ್ಟಾರ್ ಪ್ರಚಾರಕರನ್ನು ಬುಧವಾರ ಹೆಸರಿಸಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಏಳು ಮುಖ್ಯಮಂತ್ರಿಗಳು ಪಟ್ಟಿಯಲ್ಲಿ ಇದ್ದಾರೆ. ಆದರೆ, ಕರ್ನಾಟಕದಿಂದ ಯಾರು ಸಹ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ. ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಶಿವರಾಜ್ ಸಿಂಗ್ ಚೌಹಾಣ್, ಮನೋಹರ್ ಲಾಲ್ ಖಟ್ಟರ್, ಪಿಯೂಷ್ ಗೋಯಲ್, ಧರ್ಮೇಂದ್ರ ಪ್ರಧಾನ್, ಹರ್ದೀಪ್ ಸಿಂಗ್ ಪುರಿ ಮತ್ತು ಗಿರಿರಾಜ್ ಸಿಂಗ್ ಅವರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

ಭೋಜ್ಪುರಿ ತಾರೆಯರು, ಸಂಸದರಾದ ಮನೋಜ್ ತಿವಾರಿ ಮತ್ತು ರವಿ ಕಿಶನ್, ಮತ್ತು ದಿನೇಶ್ ಲಾಲ್ ಯಾದವ್ ನಿರಾಹುವಾ ಸೇರಿದಂತೆ ಪೂರ್ವಾಂಚಲಿ ನಾಯಕರೂ ಇದ್ದಾರೆ. ಪೂರ್ವ ಉತ್ತರ ಪ್ರದೇಶ ಮತ್ತು ಬಿಹಾರದ ಜನರು ರಾಷ್ಟ್ರ ರಾಜಧಾನಿಯಲ್ಲಿ ಗಣನೀಯ ಮತಬ್ಯಾಂಕ್ ಆಗಿದ್ದಾರೆ. ದೆಹಲಿಯಲ್ಲಿ ಪ್ರಚಾರ ಮಾಡಲಿರುವ ಏಳು ಮುಖ್ಯಮಂತ್ರಿಗಳೆಂದರೆ ದೇವೇಂದ್ರ ಫಡ್ನವಿಸ್, ಹಿಮಂತ ಬಿಸ್ವಾ ಶರ್ಮಾ, ಪುಷ್ಕರ್ ಸಿಂಗ್ ಧಾಮಿ, ಯೋಗಿ ಆದಿತ್ಯನಾಥ್, ಭಜನ್ ಲಾಲ್ ಶರ್ಮಾ, ನಯಾಬ್ ಸಿಂಗ್ ಸೈನಿ ಮತ್ತು ಮೋಹನ್ ಯಾದವ್ ಪಟ್ಟಿಯಲ್ಲಿದ್ದಾರೆ.
ದೆಹಲಿಯ ಎಲ್ಲಾ ಏಳು ಸಂಸದರು, ದೆಹಲಿ ಬಿಜೆಪಿ ಉಸ್ತುವಾರಿ ಬೈಜಯಂತ್ ಪಾಂಡಾ, ಸಹ-ಪ್ರಭಾರಿ ಅಲ್ಕಾ ಗುರ್ಜಾರ್ ಮತ್ತು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ವೀರೇಂದ್ರ ಸಚ್ದೇವ ಅವರು ಚುನಾವಣೆಯ ಸ್ಟಾರ್ ಪ್ರಚಾರಕರಾಗಿದ್ದಾರೆ. ಕರ್ನಾಟಕದ ಮೂಲದ ಯಾವುದೇ ನಾಯಕರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಇಲ್ಲ.
ಇನ್ನೂ ದೆಹಲಿ ವಿಧಾನಸಭಾ ಚುನಾವಣೆ ಫೆಬ್ರವರಿ 5 ರಂದು ದೆಹಲಿ ಚುನಾವಣೆ ನಡೆಯಲಿದ್ದು, ಫೆಬ್ರವರಿ 8 ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ದೆಹಲಿ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿಲಿದ್ದು, ಪ್ರಧಾನಿ ನರೇಂದ್ರ ಮೋದಿ ನಗರದಲ್ಲಿ ಎರಡು-ಮೂರು ರ್ಯಾಲಿಯ ಉದ್ದೇಶಿಸಿ ಮಾತನಾಡುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಗರದ ಪ್ರತಿಯೊಂದು ಲೋಕಸಭಾ ಕ್ಷೇತ್ರಗಳಲ್ಲಿ ಏಳು ಚುನಾವಣಾ ರ್ಯಾಲಿಯ ಉದ್ದೇಶಿಸಿ ಮಾತನಾಡಲಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ರೋಡ್ಶೋಗಳಿಗೆ ಬೇಡಿಕೆ ಇದೆ, ಆದರೆ ಪಕ್ಷದ ಉನ್ನತ ನಾಯಕತ್ವ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಬಿಜೆಪಿ ಪದಾಧಿಕಾರಿಯೊಬ್ಬರು ಹೇಳಿದರು.












Click it and Unblock the Notifications