Delhi Election 2025 Result: ದೆಹಲಿ ಮೊದಲ ಟ್ರೆಂಡ್, ಬಿಜೆಪಿಗೆ ಮುನ್ನಡೆ
ನವದೆಹಲಿ, ಫೆಬ್ರವರಿ 08: ದೆಹಲಿ ವಿಧಾನಸಭೆ ಚುನಾವಣೆ 2025ರ ಮತ ಎಣಿಕೆ ಆರಂಭವಾಗಿದೆ. ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ 16 ಸೀಟುಗಳಲ್ಲಿ ಮುನ್ನಡೆಯನ್ನು ಪಡೆದುಕೊಂಡಿದೆ. ರಾಜ್ಯದ ಆಡಳಿತ ಪಕ್ಷ ಎಎಪಿ 14 ಸೀಟುಗಳಲ್ಲಿ ಮುನ್ನಡೆಯಲ್ಲಿದೆ. 70 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ 5ರ ಬುಧವಾರ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. 699 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 36.
ದೆಹಲಿ ವಿಧಾನಸಭೆ ಚುನಾವಣೆ ಮತ ಎಣಿಕೆ ಶನಿವಾರ ನಡೆಯುತ್ತಿದೆ. ಆರಂಭಿಕ ಟ್ರೆಂಡ್ ಪ್ರಕಾರ ಬಿಜೆಪಿ 16, ಎಎಪಿ 14 ಮತ್ತು ಕಾಂಗ್ರೆಸ್ 1 ಸೀಟುಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಚುನಾವಣೆಯಲ್ಲಿ ಎಎಪಿ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿಯನ್ನು ನಿರೀಕ್ಷೆ ಮಾಡಲಾಗಿದೆ.

ಶನಿವಾರ 19 ಎಣಿಕಾ ಕೇಂದ್ರದಲ್ಲಿ ಮತ ಎಣಿಕೆ ಆರಂಭವಾಗಿದೆ. 11 ಗಂಟೆಯ ವೇಳೆಗೆ ಯಾವ ಪಕ್ಷ ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರ ಪಡೆಯಲಿದೆ? ಎಂಬ ಸ್ಪಷ್ಟ ಚಿತ್ರಣ ಲಭ್ಯವಾಗುವ ನಿರೀಕ್ಷೆ ಇದೆ. 27 ವರ್ಷಗಳ ಬಳಿಕ ಅಧಿಕಾ ಪಡೆಯವ ಉತ್ಸಾಹ ಬಿಜೆಪಿಯಲ್ಲಿದೆ, 4ನೇ ಬಾರಿಗೆ ಸರ್ಕಾರ ರಚನೆ ಮಾಡಲಿದ್ದೇವೆ ಎಂದು ಎಎಪಿ ವಿಶ್ವಾಸದಲ್ಲಿದೆ. ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂಬುದು ಪ್ರಚಾರದ ವೇಳೆಯೇ ತಿಳಿದುಬಂದಿತ್ತು.
ಸದ್ಯ 8.30ರ ಮಾಹಿತಿ ಪ್ರಕಾರ ಬಿಜೆಪಿ ಮುನ್ನಡೆಯಲ್ಲಿದೆ. ದೆಹಲಿ ಮುಖ್ಯಮಂತ್ರಿ ಅತಿಶಿ ಮರ್ಲೆನಾ ಕಲ್ಕಾಜಿ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸಿದ್ದು, ಬಿಜೆಪಿಯ ರಮೇಶ್ ಬಿಧೂರಿ ಮುನ್ನಡೆ ಸಾಧಿಸಿದ್ದಾರೆ.
ನವದೆಹಲಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಮುನ್ನಡೆ ಪಡೆದುಕೊಂಡಿದ್ದಾರೆ. ಕೇಜ್ರಿವಾಲ್ ಮೂರು ಬಾರಿ ನವದೆಹಲಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು, 4ನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ಹಿನ್ನಡೆ ಅನುಭವಿಸಿದ್ದಾರೆ. ಪ್ರಾಥಮಿಕ ಟ್ರೆಂಡ್ಗಳು ಬಿಜೆಪಿ ಪರವಾಗಿ ಬರುತ್ತಿದ್ದು, ಎಎಪಿ ನಾಯಕರು ಫಲಿತಾಂಶ ಬದಲಾಗುವ ನಿರೀಕ್ಷೆಯಲ್ಲಿದ್ದಾರೆ. ದೆಹಲಿಯ ಜನರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅತಿಶಿ ಮರ್ಲೆನಾ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಬುಧವಾರ ಮತದಾನ ಪೂರ್ಣಗೊಂಡ ಬಳಿಕ ಪ್ರಕಟವಾಗಿದ್ದ ಮತದಾನೋತ್ತರ ಸಮೀಕ್ಷೆಗಳು ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತದ ಸರ್ಕಾರ ರಚನೆ ಮಾಡಲಿವೆ ಎಂದು ಅಂದಾಜಿಸಿದ್ದವು. ಮತ ಎಣಿಕೆಯ ಪ್ರಾಥಮಿಕ ಚಿತ್ರಣ ಬಿಜೆಪಿ ಪರವಾಗಿ ಬಂದಿದ್ದು, ಪಕ್ಷದ ನಾಯಕರ ಉತ್ಸಾಹ ಹೆಚ್ಚಿಸಿದೆ.
ಕಾಂಗ್ರೆಸ್ 2013ರಲ್ಲಿ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡಿತ್ತು. 2015, 2020ರಲ್ಲಿ ಕಾಂಗ್ರೆಸ್ ಒಂದು ಸೀಟುಗಳನ್ನು ಪಡೆಯಲು ಸಹ ವಿಫಲವಾಗಿತ್ತು. ಈ ಬಾರಿ 0-1 ಸೀಟುಗಳಲ್ಲಿ ಪಕ್ಷ ಜಯಗಳಿಸಲಿದೆ ಎಂದು ಸಮೀಕ್ಷೆಗಳು ಅಂದಾಜಿಸಿವೆ.
ದೆಹಲಿಯಲ್ಲಿ ಕಾಂಗ್ರೆಸ್ನ ಕೊನೆಯ ಮುಖ್ಯಮಂತ್ರಿ ಶೀಲಾ ದೀಕ್ಷಿತ್. ಶೀಲಾ ದೀಕ್ಷಿತ್ ಪುತ್ರ ಸಂದೀಪ್ ದೀಕ್ಷಿತ್ ನವದೆಹಲಿ ಕ್ಷೇತ್ರದಲ್ಲಿ ಈ ಬಾರಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಎದುರಾಳಿಯಾಗಿ ಕಾಂಗ್ರೆಸ್ನಿಂದ ಕಣಕ್ಕಿಳಿದಿದ್ದಾರೆ. ಕಾಂಗ್ರೆಸ್ ಕೆಲವು ಸೀಟುಗಳಲ್ಲಿ ಜಯಗಳಿಸಿ ರಾಜ್ಯದಲ್ಲಿ ತನ್ನ ಅಸ್ತಿತ್ವ ಸಾಬೀತು ಮಾಡಲಿದೆ ಎಂದು ಅಂದಾಜಿಸಲಾಗಿದ್ದು, ಫಲಿತಾಂಶ ಬಂದ ಬಳಿಕ ಪಕ್ಷಕ್ಕೆ ಎಷ್ಟು ಸೀಟು ಎಂಬುದು ತಿಳಿಯಲಿದೆ.












Click it and Unblock the Notifications