ದೆಹಲಿ ಚಲೋ ಪ್ರತಿಭಟನೆ: ರೈತರ ಆಸ್ತಿ ವಶಪಡಿಸಿಕೊಳ್ಳಲು ಮುಂದಾದ ಹರಿಯಾಣ ಪೊಲೀಸರು!
ದೆಹಲಿ ಫೆಬ್ರವರಿ 23: ದೆಹಲಿ ಚಲೋ ಪ್ರತಿಭಟನೆ ನಡೆಸುತ್ತಿರುವ ರೈತರ ಆಸ್ತಿಯನ್ನು ವಶಪಡಿಸಿಕೊಳ್ಳಲು ಹರಿಯಾಣ ಪೊಲೀಸರು ಮುಂದಾಗಿದ್ದಾರೆ.
ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರಕ್ಕೆ ಒತ್ತಾಯಿಸಿ ಕಳೆದ ಕೆಲ ದಿನಗಳಿಂದ ರೈತರು ದೆಹಲಿ ಗಡಿ ಭಾಗದಲ್ಲಿ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಈ ವೇಳೆ ಕೇಂದ್ರದೊಂದಿಗೆ ಕೆಲ ಸುತ್ತಿನ ಮಾತುಕತೆಗಳು ನಡೆದಿದ್ದರೂ ಪ್ರಯೋಜನವಾಗಿಲ್ಲ. ಜೊತೆಗೆ ದೆಹಲಿ ಪೊಲೀಸರು ಗಡಿ ಭಾಗದಲ್ಲಿ ರೈತರನ್ನು ತಡೆಯಲು ತಡೆಗೋಡೆಗಳನ್ನು ನಿರ್ಮಿಸಿದ್ದಾರೆ. ಅಶ್ರುವಾಯು ಸಿಡಿಸುವ ಮೂಲಕ ರೈತರನ್ನು ಚದುರಿಸುವುದು ಮಾತ್ರವಲ್ಲದೆ ಈಗ ಅವರ ಆಸ್ತಿ ವಶಪಡಿಸಿಕೊಳ್ಳಲೂ ಮುಂದಾಗಿದ್ದಾರೆ.

ಹೌದು... 'ದಿಲ್ಲಿ ಚಲೋ' ಪ್ರತಿಭಟನಾ ಮೆರವಣಿಗೆ ವೇಳೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದ ರೈತರ ಆಸ್ತಿಯನ್ನು ವಶಪಡಿಸಿಕೊಳ್ಳಲು ಹರಿಯಾಣ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಪಂಜಾಬ್-ಹರಿಯಾಣ ಗಡಿಯಲ್ಲಿ ಹಾಕಲಾಗಿರುವ ಬ್ಯಾರಿಕೇಡ್ಗಳನ್ನು ಹತ್ತಿಕ್ಕಲು ಮತ್ತು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುವ ಮೂಲಕ ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸಲು ರೈತರಿಂದ ನಿರಂತರ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಫೆಬ್ರವರಿ 13 ರಂದು ರೈತರು ತಮ್ಮ ಪ್ರತಿಭಟನೆಯನ್ನು ಪ್ರಾರಂಭಿಸುವ ಮೊದಲು, ಹರ್ಯಾಣ ಪೊಲೀಸರು ತಮ್ಮ ಆಂದೋಲನದ ಸಮಯದಲ್ಲಿ ಸಾರ್ವಜನಿಕ ಆಸ್ತಿಯನ್ನು ಹಾನಿಗೊಳಿಸಿದರೆ ಅವರ ಆಸ್ತಿಯನ್ನು ವಶಪಡಿಸಿಕೊಳ್ಳುವುದಾಗಿ ಬೆದರಿಕೆ ಹಾಕುವ ಮೂಲಕ ಸಂಘಗಳಿಗೆ ನೋಟಿಸ್ ಕಳುಹಿಸಿದ್ದರು.

ಪ್ರತಿಭಟನೆಯ ವೇಳೆ ಸಾರ್ವಜನಿಕ ಆಸ್ತಿಗೆ ಹಾನಿಯಾದರೆ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗುವುದು ಮತ್ತು ನಷ್ಟವನ್ನು ಸರಿದೂಗಿಸಲು ಆಸ್ತಿಗಳನ್ನು ವಶಪಡಿಸಿಕೊಳ್ಳಲಾಗುವುದು ಎಂದು ರೈತ ಮುಖಂಡರಿಗೆ ನೋಟಿಸ್ನಲ್ಲಿ ತಿಳಿಸಲಾಗಿತ್ತು. ರೈತರ ಪ್ರತಿಭಟನೆಯ ವೇಳೆ ಅಂಬಾಲಾ ಜಿಲ್ಲೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದು 30 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಹರಿಯಾಣ ಪೊಲೀಸರು ಗುರುವಾರ ತಿಳಿಸಿದ್ದಾರೆ.
ಈ ನಿಯಮಗಳನ್ನು ಉಲ್ಲಂಘಿಸಿದರೆ ಪ್ರತಿಭಟನಾ ನಿರತ ರೈತ ಮುಖಂಡರ ವಿರುದ್ಧ 1980ರ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಅಡಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಆರಂಭದಲ್ಲಿ ಹೇಳಿದ್ದರು. ನಂತರ ಆದೇಶವನ್ನು ಹಿಂಪಡೆಯಲಾಯಿತು.
'ದಿಲ್ಲಿ ಚಲೋ' ಮೆರವಣಿಗೆಯ ಭಾಗವಾಗಿ ಶಂಭು ಗಡಿಯಲ್ಲಿ ನಿರ್ಮಿಸಲಾದ ತಡೆಗೋಡೆಗಳನ್ನು ಕೆಡವಲು ರೈತರು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಅಂಬಾಲಾ ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಪ್ರತಿಭಟನಾಕಾರರು ಅಧಿಕಾರಿಗಳ ಮೇಲೆ ಕಲ್ಲು ತೂರಾಟ, ಸಾರ್ವಜನಿಕ ಮತ್ತು ಸರ್ಕಾರಿ ಆಸ್ತಿ ನಾಶ, ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನಗಳ ಘಟನೆಗಳನ್ನು ಪೊಲೀಸರು ವರದಿ ಮಾಡಿದ್ದಾರೆ.
ಘರ್ಷಣೆಗಳಿಂದಾಗಿ ಸುಮಾರು 30 ಅಧಿಕಾರಿಗಳಿಗೆ ಗಾಯಗಳಾಗಿವೆ. ಇದರಲ್ಲಿ ಒಬ್ಬರು ಮೆದುಳಿನಲ್ಲಿ ರಕ್ತಸ್ರಾವ ಮತ್ತು ಇಬ್ಬರು ಜೀವಗಳನ್ನು ಕಳೆದುಕೊಂಡಿದ್ದಾರೆ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ.
ಸಾಮರಸ್ಯವನ್ನು ಕದಡುವ ಉದ್ದೇಶದಿಂದ ಪ್ರಚೋದನಕಾರಿ ವಿಷಯವನ್ನು ಹರಡಲು ಕೆಲವು ರೈತ ಮುಖಂಡರು ವಾಟ್ಸಾಪ್, ಫೇಸ್ಬುಕ್, ಟೆಲಿಗ್ರಾಮ್ ಮತ್ತು ಇನ್ಸ್ಟಾಗ್ರಾಮ್ನಂತಹ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳನ್ನು ಬಳಸುತ್ತಿದ್ದಾರೆ. ಹೀಗಾಗಿ ಈ ಬಗ್ಗೆ ಕಳವಳವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಗಡಿ ಭಾಗದಲ್ಲಿ ಇಂದಿಗೂ ರೈತರು ಸಾವಿರಾರು ಸಂಖ್ಯೆಯಲ್ಲಿ ನೆಲೆಗೊಂಡು ಪ್ರತಿಭಟನೆ ಮುಂದುವರೆಸಿದ್ದಾರೆ. ಹೀಗಾಗಿ ಗಡಿಭಾಗದಲ್ಲಿ ಖಾಕಿ ಕಣ್ಗಾವಲು ಹಾಕಲಾಗಿದೆ.












Click it and Unblock the Notifications