Delhi Assembly Election 2025: ಸಿಎಂ ಅತಿಶಿ ಮರ್ಲೆನಾ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ
ನವದೆಹಲಿ, ಜನವರಿ 04: ದೆಹಲಿ ವಿಧಾನಸಭೆ ಚುನಾವಣೆ-2025 ಕಾವು ಪಡೆಯುತ್ತಿದೆ. ಆಮ್ ಆದ್ಮಿ ಪಕ್ಷಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಎದುರಾಳಿಗಳು. ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಅತಿಶಿ ಮರ್ಲೆನಾ ವಿರುದ್ಧ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಸಿಎಂ ವಿರುದ್ಧ ಮಹಿಳಾ ಅಭ್ಯರ್ಥಿಯನ್ನೇ ಪಕ್ಷ ಕಣಕ್ಕಿಳಿಸಿದೆ. ಲೋಕಸಭೆ ಚುನಾವಣೆ 2024ರಲ್ಲಿ 'ಇಂಡಿಯಾ' ಮೈತ್ರಿಕೂಟದಲ್ಲಿ ಒಟ್ಟಾಗಿದ್ದ ಕಾಂಗ್ರೆಸ್-ಎಎಪಿ ದೆಹಲಿ ಚುನಾವಣೆಯನ್ನು ಪ್ರತ್ಯೇಕವಾಗಿ ಎದುರಿಸುತ್ತಿವೆ.
ಕಾಂಗ್ರೆಸ್ ಪಕ್ಷ ಕಲ್ಕಾಜಿ ವಿಧಾನಸಭಾ ಕ್ಷೇತ್ರಕ್ಕೆ ಅಲ್ಕಾ ಲಂಬಾ (49) ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಮಾಜಿ ಶಾಸಕಿ ಅಲ್ಕಾ ಲಂಬಾ ಈ ಹಿಂದೆ ಎಎಪಿ ಪಕ್ಷದಲ್ಲಿದ್ದರು. ಸದ್ಯ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದು, ಅಖಿಲ ಭಾರತ ಮಹಿಳಾ ಕಾಂಗ್ರೆಸ್ನ ಅಧ್ಯಕ್ಷೆ.

ಕಲ್ಕಾಜಿ ವಿಧಾನಸಭಾ ಕ್ಷೇತ್ರಕ್ಕೆ ಎಎಪಿ ಅಭ್ಯರ್ಥಿ ದೆಹಲಿಯ ಮುಖ್ಯಮಂತ್ರಿ ಅತಿಶಿ ಮರ್ಲೆನಾ (43). ಅಲ್ಕಾ ಲಂಬಾ ಮುಖ್ಯಮಂತ್ರಿ ವಿರುದ್ಧ ಕಣಕ್ಕಿಳಿದಿದ್ದು, ಕಲ್ಕಾಜಿ ಕ್ಷೇತ್ರದ ಚುನಾವಣಾ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ.
2024ರ ಸೆಪ್ಟೆಂಬರ್ನಲ್ಲಿ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ಬಳಿಕ ಅತಿಶಿ ಮರ್ಲೆನಾ ದೆಹಲಿ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿದ್ದಾರೆ. ಮೂರು ದಿನಗಳ ಹಿಂದೆ ಎಎಪಿ ಕಲ್ಕಾಜಿ ವಿಧಾನಸಭಾ ಕ್ಷೇತ್ರಕ್ಕೆ ಅತಿಶಿ ಮರ್ಲೆನಾ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ.
ವೇಳಾಪಟ್ಟಿ ಘೋಷಣೆಯಾಗಬೇಕಿದೆ: ಫೆಬ್ರವರಿಯಲ್ಲಿ ದೆಹಲಿ ವಿಧಾನಸಭೆ ಚುನಾವಣೆ-2025 ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿಯನ್ನು ಘೋಷಣೆ ಮಾಡಬೇಕಿದೆ. ಆಮ್ ಆದ್ಮಿ ಪಕ್ಷ ಯಾವುದೇ ಕ್ಷಣದಲ್ಲಿ ಚುನಾವಣೆ ಎದುರಿಸಲು ಸಿದ್ಧ ಎಂದು ಘೋಷಣೆ ಮಾಡಿದೆ.
70 ವಿಧಾನಸಭಾ ಕ್ಷೇತ್ರಗಳನ್ನು ದೆಹಲಿ ಹೊಂದಿದೆ. 2024ರ ಲೋಕಸಭೆ ಚುನಾವಣೆ ಬಳಿಕ ಬಿಜೆಪಿ ಸಹ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಕೇಂದ್ರದ ಮಾಜಿ ಸಚಿವೆ, 2024ರ ಲೋಕಸಭೆ ಚುನಾವಣೆಯಲ್ಲಿ ಸೋತ ಸ್ಮೃತಿ ಇರಾನಿ ಬಿಜೆಪಿಯಿಂದ ದೆಹಲಿ ಚುನಾವಣೆಗೆ ಸಿಎಂ ಅಭ್ಯರ್ಥಿಯಾಗುವ ನಿರೀಕ್ಷೆ ಇದೆ.
ಅಲ್ಕಾ ಲಂಬಾ ಸುಮಾರು 20 ವರ್ಷ ಕಾಂಗ್ರೆಸ್ ಪಕ್ಷದಲ್ಲಿದ್ದರು. 2014ರಲ್ಲಿ ಅವರು ಎಎಪಿ ಸೇರಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಗೆದ್ದು 2015-2019ರ ತನಕ ಎಎಪಿ ಶಾಸಕಿಯಾಗಿ ಕಾರ್ಯ ನಿರ್ವಹಣೆ ಮಾಡಿದ್ದರು.
ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಅವರಿಗೆ ನೀಡಿದ ಭಾರತ ರತ್ನ ಪ್ರಶಸ್ತಿ ವಾಪಸ್ ಪಡೆಯಬೇಕು ಎಂದು ಎಎಪಿ ಸರ್ಕಾರ ನಿರ್ಣಯ ಅಂಗೀಕಾರ ಮಾಡಿತು. ಆಗ ಅವರು ಎಎಪಿ ವಿರುದ್ಧ ಅಸಮಾಧಾನಗೊಂಡು ಪಕ್ಷವನ್ನು ತೊರೆದರು. ಪುನಃ ಕಾಂಗ್ರೆಸ್ ಸೇರಿದರು.
ದೆಹಲಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 48 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಕೆಲವೇ ದಿನಗಳಲ್ಲಿ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ನಿರೀಕ್ಷೆ ಇದೆ.
ಎಎಪಿ ಪಕ್ಷ ಎಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ನವದೆಹಲಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿಯೂ ಗೆದ್ದು ರಾಜ್ಯದಲ್ಲಿ ಅಧಿಕಾರ ಹಿಡಿಯಬೇಕು ಎಂದು ಎಎಪಿ ಪಕ್ಷ ತಂತ್ರವನ್ನು ರೂಪಿಸಿದೆ. ಅರವಿಂದ್ ಕೇಜ್ರಿವಾಲ್, ಮನೀಷ್ ಸಿಸೋಡಿಯಾ ಬಂಧನ, ಬಿಡುಗಡೆ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ.
ಬಿಜೆಪಿ ಏಕೆ ದೆಹಲಿ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಲು ತಡ ಮಾಡುತ್ತಿದೆ? ಎಂಬುದು ಪ್ರಶ್ನೆಯಾಗಿದೆ. ರಾಷ್ಟ್ರೀಯ ಮಾಧ್ಯಮಗಳ ವರದಿ ಪ್ರಕಾರ ರಾಜ್ಯ ಬಿಜೆಪಿಯ ಬಣ ರಾಜಕೀಯದ ಕಾರಣ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಇನ್ನೂ ಸಭೆಗಳನ್ನು ನಡೆಸುತ್ತಿದೆ.












Click it and Unblock the Notifications