Delhi Election 2025: ದೆಹಲಿ ಚುನಾವಣೆ: ಇಂಡಿಯಾ ಮೈತ್ರಿಕೂಟ ಪಕ್ಷಗಳ ನಡುವೆ ಫೈಟ್!
ದೆಹಲಿ ವಿಧಾನಸಭೆ ಚುನಾವಣೆ ದಿನಾಂಕ ಸಮೀಪಿಸುತ್ತಿರುವಂತೆಯೇ ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟಗಳ ನಡುವೆಯೇ ತಿಕ್ಕಾಟ ಜೋರಾಗಿದೆ. ಇಂಡಿಯಾ ಮೈತ್ರಿಕೂಟದ ಪಕ್ಷಗಳು ದೆಹಲಿಯಲ್ಲಿ ಸ್ವತಂತ್ರ್ಯವಾಗಿ ಸ್ಪರ್ಧೆ ಮಾಡುತ್ತಿವೆ. ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎಎಪಿ ಮಣ್ಣು ಮುಕ್ಕಿಸಿತ್ತು. ಇದರ ಬೆನ್ನಲ್ಲೇ ದೆಹಲಿಯಲ್ಲಿ ತಾನು ಸ್ವತಂತ್ರ್ಯವಾಗಿ ಸ್ಪರ್ಧೆ ಮಾಡುವುದಾಗಿ ಎಎಪಿ ಹೇಳಿತ್ತು. ಫೆಬ್ರವರಿಯಲ್ಲಿ ದೆಹಲಿಯಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗಿದೆ. ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಇಂಡಿಯಾ ಮೈತ್ರಿಕೂಟದಲ್ಲಿ ಲೋಕಸಭೆ ಚುನಾವಣೆಯ ನಂತರ ಬಿರುಕು ಕಾಣಿಸಿಕೊಂಡಿತ್ತು. ಅದು ಬೃಹತ್ ರೂಪ ಪಡೆದುಕೊಂಡಿದೆ. ಹೌದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಸೋತ ಮೇಲೆ ಹಲವು ಪಕ್ಷಗಳು ಕಾಂಗ್ರೆಸ್ನಿಂದ ಅಂತರ ಕಾಪಾಡಿಕೊಂಡಿವೆ. ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಕಾಂಗ್ರೆಸ್ ಹಾಗೂ ಎಎಪಿ ನಡುವೆ ಬಹಿರಂಗ ಗುದ್ದಾಟವೇ ನಡೆದಿದೆ.
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಎಎಪಿ - ಕಾಂಗ್ರೆಸ್ - ಬಿಜೆಪಿ ಪಕ್ಷಗಳು ಇಲ್ಲಿ ಚುನಾವಣಾ ಕಣದಲ್ಲಿರುವ ಪ್ರಮುಖ ಪಕ್ಷಗಳಾಗಿದ್ದು. ಈ ಪಕ್ಷಗಳ ನಡುವೆ ತೀವ್ರ ಪೈಪೋಟಿ ಇದೆ. ಹರಿಯಾಣದಲ್ಲಿ ಕಾಂಗ್ರೆಸ್ನ ವಿರೋಧದ ನಡುವೆಯೂ ಎಎಪಿ ಸ್ಪರ್ಧೆ ಮಾಡಿತ್ತು. ಈ ಸ್ಪರ್ಧೆಯಿಂದಾಗಿ ಹರಿಯಾಣದಲ್ಲಿ ಮತ ವಿಭಜನೆಯಾಗಿತ್ತು. ಇದು ಕಾಂಗ್ರೆಸ್ ಪಕ್ಷಕ್ಕೆ ಭರ್ಜರಿ ಹೊಡೆತವನ್ನೇ ಕೊಟ್ಟಿತ್ತು. ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಪಕ್ಷಗಳ ಪರವಾಗಿ ಪ್ರಚಾರ ಮಾಡಿದರೂ.

ಕಾಂಗ್ರೆಸ್ನಿಂದ ಅಂತರ ಕಾಪಾಡಿಕೊಂಡಿತ್ತು. ದೆಹಲಿ ಎಎಪಿಯ ಭದ್ರಕೋಟೆಯಾಗಿದೆ. ಒಂದು ಕಾಲದಲ್ಲಿ ದೆಹಲಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು. ಆದರೆ, ಕಳೆದ ಎರಡು ಅವಧಿಯಿಂದಲೂ ದೆಹಲಿಯಲ್ಲಿ ಎಎಪಿ ಅಧಿಕಾರದಲ್ಲಿ ಇದೆ. ಕಳೆದ ಬಾರಿ ಇಲ್ಲಿ ಕಾಂಗ್ರೆಸ್ ಶೂನ್ಯ ಸ್ಥಾನದಲ್ಲಿ ಗೆದ್ದಿತ್ತು.
ದೆಹಲಿಯಲ್ಲಿ ಕಾಂಗ್ರೆಸ್ ಪರಿಸ್ಥಿತಿ ಗಂಭೀರವಾಗಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗಿಂತಲೂ ಬಿಜೆಪಿ ಹಾಗೂ ಎಎಪಿ ನಡುವೆ ನೇರ ಹಣಾಹಣಿ ಇದೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಇನ್ನು ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಾರ್ಟಿಯ ನಡುವೆ ಜೋರು ಗುದ್ದಾಟವಿದ್ದು. ಎಎಪಿಗೆ ಟಾಂಗ್ ಕೊಡುವುದಕ್ಕೆ ಕಾಂಗ್ರೆಸ್ ದೆಹಲಿಯಲ್ಲಿ ಪ್ಯಾರಿ ದೀದಿ ಗ್ಯಾರಂಟಿಯನ್ನು ಜಾರಿ ಮಾಡುವುದಾಗಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬಂದರೆ ಈ ಯೋಜನೆಯನ್ನು ಜಾರಿ ಮಾಡುವುದಾಗಿ ಹೇಳಲಾಗಿದೆ.

ಕರ್ನಾಟಕದ ಗೃಹಲಕ್ಷ್ಮಿ ಮಾದರಿಯಲ್ಲಿ ಈ ಯೋಜನೆ ಇರಲಿದೆ. ಪ್ರತಿ ತಿಂಗಳು ಮನೆಯ ಯಜಮಾನಿಗೆ 2,500 ರೂಪಾಯಿ ಸಿಗಲಿದೆ ಎಂದು ಅವರು ಹೇಳಿದ್ದಾರೆ. ಆದರೆ, ಈಗಾಗಲೇ ಎಎಪಿ ದೆಹಲಿಯಲ್ಲಿ ಈ ಮಾದರಿಯ ಯೋಜನೆಯನ್ನು ಜಾರಿ ಮಾಡಿದೆ. ದೆಹಲಿಯಲ್ಲಿ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆ ಜಾರಿ ಮಾಡುವುದಾಗಿ ಎಎಪಿ ಹೇಳಿದೆ. ಈ ಯೋಜನೆಯ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2,100 ರೂಪಾಯಿ ಕೊಡುವುದಾಗಿ ಎಎಪಿ ಹೇಳಿದೆ. ಇದೀಗ ಕಾಂಗ್ರೆಸ್ ಅದಕ್ಕಿಂತ ಹೆಚ್ಚಿನ ಮೊತ್ತದ ಯೋಜನೆಯನ್ನು ಘೋಷಿಸಿದೆ.












Click it and Unblock the Notifications