ಕತ್ತರಿಯಿಂದ ಚುಚ್ಚಿದ ನಂತರ 5 ನೇ ತರಗತಿ ವಿದ್ಯಾರ್ಥಿನಿಯನ್ನು ಮಹಡಿಯಿಂದ ಎಸೆದ ಶಿಕ್ಷಕಿ
ನವದೆಹಲಿ, ಡಿಸೆಂಬರ್ 16: ದೆಹಲಿಯ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರೊಬ್ಬರು 5 ನೇ ತರಗತಿ ವಿದ್ಯಾರ್ಥಿನಿಯನ್ನು ಮೊದಲ ಮಹಡಿಯಿಂದ ಇಂದು ಎಸೆದಿದ್ದಾರೆ.
ವಂದನಾ ಎಂಬ ಮಗು ಆಸ್ಪತ್ರೆಯಲ್ಲಿದ್ದು, ಚಿಂತಾಜನಕ ಸ್ಥಿತಿಯಲ್ಲಿದೆ. ಪ್ರಕರಣದ ಸಂಬಂಧ ಗೀತಾ ದೇಶ್ವಾಲ್ ಎಂಬ ಶಿಕ್ಷಕಿಯನ್ನು ಬಂಧಿಸಲಾಗಿದೆ.
ದೆಹಲಿ ನಗರ ನಿಗಮ್ ಬಾಲಿಕಾ ವಿದ್ಯಾಲಯದಲ್ಲಿ ಬೆಳಗ್ಗೆ 11.15ರ ಸುಮಾರಿಗೆ ಈ ಘಟನೆ ನಡೆದಿದೆ.
ಮೊದಲ ಮಹಡಿಯ ತರಗತಿಯಿಂದ ಹೊರಗೆ ಎಸೆಯುವ ಮುನ್ನ ಶಿಕ್ಷಕಿ ಗೀತಾ ವಿದ್ಯಾರ್ಥಿನಿ ವಂದನಾಳ ಮೇಲೆ ಕತ್ತರಿಯಿಂದ ಹಲ್ಲೆ ನಡೆಸಿದ್ದಾಳೆ.
ತನ್ನ ಸಹೋದ್ಯೋಗಿಯು ಮಗುವನ್ನು ಥಳಿಸದಂತೆ ತಡೆಯಲು ಮತ್ತೊಬ್ಬ ಶಿಕ್ಷಕಿ ರಿಯಾ ಯತ್ನಿಸಿದ್ದಾರೆ ಎನ್ನಲಾಗಿದೆ.

ಬಾಲಕಿ ಮೊದಲ ಮಹಡಿಯಿಂದ ಬಿದ್ದಾಗ, ಅಲ್ಲಿದ ಬೇರೆ ಶಿಕ್ಷಕರು ಪೊಲೀಸರಿಗೆ ಕರೆ ಮಾಡಿದರು. ಆ ನಂತರ ಶಾಲೆಗೆ ಆಗಮಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಠಾಣೆಗೆ ಕರೆದೊಯ್ದಿದ್ದಾರೆ.
ತೀವ್ರವಾಗಿ ಗಾಯಗೊಂಡಿರುವ ಮಗುವನ್ನು ಬಾರಾ ಹಿಂದೂ ರಾವ್ ಆಸ್ಪತ್ರೆಗೆ ಕರೆದೊಯ್ದಲಾಗಿದೆ. ಮಗು ಸಾವು ಬದುಕಿನ ನಡುವೆ ಹೋರಾಡುತ್ತಿದ್ದು, ವೆಂಟಿಲೇಟರ್ನಲ್ಲಿ ಇರಿಸಲಾಗಿದೆ ಎಂದು ಆಸ್ಪತ್ರೆಯ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ಶಿಕ್ಷಕಿಯನ್ನು ಅಮಾನತುಗೊಳಿಸಲಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಿಕ್ಷಣ ಇಲಾಖೆಯು ಹೆಚ್ಚಿನ ತನಿಖೆ ನಡೆಸುತ್ತಿದೆ ಎಂದು ದೆಹಲಿಯ ಹಿರಿಯ ಮುನ್ಸಿಪಲ್ ಕಾರ್ಪೊರೇಷನ್ (MCD) ಅಧಿಕಾರಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ.
'ಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಂಸಿಡಿ ಕೂಡ ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಅಮಾನತುಗೊಳಿಸಿದೆ' ಎಂದು ಹಿರಿಯ ಅಧಿಕಾರಿ ಹೇಳಿದ್ದಾರೆ.
ಪ್ರತ್ಯಕ್ಷದರ್ಶಿಗಳು ನೀಡಿದ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 307 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಘಟನೆಗೆ ಕಾರಣ ಏನೆಂಬುದು ಇನ್ನು ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.












Click it and Unblock the Notifications