ಅಜಿತ್ ಪವಾರ್ ಸೇರ್ಪಡೆಗೆ ದೇವೇಂದ್ರ ಫಡ್ನವೀಸ್ ಅಸಮಾಧಾನ: ರಾಜೀನಾಮೆ ನೀಡಿದ ಡಿಸಿಎಂ? ಮಹಾರಾಷ್ಟ್ರ ಬಿಜೆಪಿಯಲ್ಲಿ ತಲ್ಲಣ ಸೃಷ್ಟಿ
ಮುಂಬೈ, ಜುಲೈ 03: ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ವಿಚಾರವಾಗಿ ಅವರು ರಾಜ್ಯಪಾಲರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ವರದಿಗಳು ಹೇಳುತ್ತಿವೆ.
ಎನ್ಸಿಪಿಯ ಅಜಿತ್ ಪವಾರ್ ಅವರನ್ನು ಮಹಾರಾಷ್ಟ್ರದ ನೂತನ ಉಪ ಮುಖ್ಯಮಂತ್ರಿಯಾಗಿ ನೇಮಕ ಮಾಡಿದ್ದರಿಂದ ಅವರು ತೀವ್ರ ಅಸಮಾಧಾನಗೊಂಡಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಏಕನಾಥ್ ಶಿಂಧೆ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ಛಗನ್ ಭುಜಬಲ್, ದಿಲೀಪ್ ವಾಲ್ಸೆ ಪಾಟೀಲ್ ಮತ್ತು ಧನಂಜಯ್ ಮುಂಡೆ ಸೇರಿದಂತೆ ಎಂಟು ಇತರ ಎನ್ಸಿಪಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಈ ಎಲ್ಲ ಬೆಳವಣಿಗೆಗಳ ಹಿಂದೆ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇದ್ದಾರೆ ಎಂದು ಹೇಳಲಾಗಿತ್ತು. ಆದರೆ, ಮಹಾರಾಷ್ಟ್ರ ರಾಜಕೀಯ ಮತ್ತೊಂದು ವಿಚಿತ್ರ ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ.
ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆಯಿಂದ ಸಭೆ
ಎನ್ಸಿಪಿ ನಾಯಕರ ಸೇರ್ಪಡೆಯಿಂದಾಗಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು ಅಸಮಾಧಾನಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಪಕ್ಷದ ಮುಖಂಡರ ಸಭೆಯನ್ನು ಇಂದು ಸಂಜೆ ಕರೆದಿದ್ದಾರೆ. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಹೊಂದಿರುವ ಎನ್ಸಿಪಿ ನಾಯಕರನ್ನು ಬಿಜೆಪಿಗೆ ಸೇರಿಸಿಕೊಂಡಿರುವುದು ಏಕನಾಥ್ ಶಿಂಧೆ ಬಳಗಕ್ಕೆ ಆಕ್ರೋಶ ತರಿಸಿದೆ ಎಂದು ಹೇಳಲಾಗುತ್ತಿದೆ.

ಅಜಿತ್ ಪವಾರ್ ಮುಂದಿನ ಮುಖ್ಯಮಂತ್ರಿ ಎಂದ ಸಾಮ್ನಾ
ಉದ್ದವ್ ಠಾಕ್ರೆ ನೇತೃತ್ವದ ಶಿವಸೇನಾ ಮುಖವಾಣಿಯಾಗಿರುವ ಸಾಮ್ನಾ ಪತ್ರಿಕೆಯು ಎನ್ಸಿಪಿಯ ಅಜಿತ್ ಪವಾರ್ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಹೇಳಿಕೆಯನ್ನು ನೀಡಿ ಅಚ್ಚರಿ ಹುಟ್ಟಿಸಿದೆ. ಇದೇ ವೇಳೆ, ದೇವೇಂದ್ರ ಫಡ್ನವೀಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸುದ್ದಿ ಇದಕ್ಕೆ ಪೂರಕವಾಗಿದೆ.
ನನಗೆ ನೋವಾಗಿಲ್ಲ ಎಂದ ಶರದ್ ಪವಾರ್
ತಮ್ಮ ಸೋದರ ಸಂಬಂಧಿ ಅಜಿತ್ ಪವಾರ್ ಸೇರಿದಂತೆ ಒಂಬತ್ತು ಶಾಸಕರು ಏಕನಾಥ್ ಶಿಂಧೆ-ದೇವೇಂದ್ರ ಫಡ್ನವೀಸ್ ಸರ್ಕಾರಕ್ಕೆ ಸೇರ್ಪಡೆಯಾದ ಸುದ್ದಿಯಿಂದ ನನಗೆ ನೋವಾಗಿಲ್ಲ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಅಧ್ಯಕ್ಷ ಶರದ್ ಪವಾರ್ ಸೋಮವಾರ ಹೇಳಿದ್ದಾರೆ.
ನಾವು ಯಾರ ವಿರುದ್ಧವೂ ಕ್ರಮ ಕೈಗೊಳ್ಳುವುದಿಲ್ಲ ಎಂದಿರುವ ಅವರು, 'ಕೆಲವರು ಕೆಟ್ಟದ್ದಾಗಿ ವರ್ತಿಸಿದ್ದರೂ, ನಾನು ಆರೋಗ್ಯಕರವಾಗಿ ಇರುತ್ತೇನೆ. ಅನರ್ಹತೆಗೆ ಸಂಬಂಧಿಸಿದ ಯಾವುದೇ ಕ್ರಮವನ್ನು ರಾಜ್ಯ ಘಟಕದ ಮುಖ್ಯಸ್ಥರಾದ ಜಯಂತ್ ಪಾಟೀಲ್ ಅವರು ತೆಗೆದುಕೊಳ್ಳುತ್ತಾರೆ' ಎಂದು ತಿಳಿಸಿದ್ದಾರೆ.

'ರಾಜ್ಯ ವಿಧಾನಸಭೆಯಲ್ಲಿ ಜಯಂತ್ ಪಾಟೀಲ್ ಅವರು ಪಕ್ಷದ ನೇತೃತ್ವ ವಹಿಸಿದ್ದಾರೆ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಎಲ್ಲಾ ಹಕ್ಕು ಅವರಿಗೆ ಇದೆ. ಒಂಬತ್ತು ಶಾಸಕರ ವಿರುದ್ಧ ಅನರ್ಹತೆ ಅರ್ಜಿ ಸಲ್ಲಿಕೆಯಾಗಿರುವ ಬಗ್ಗೆ ನಿಮ್ಮಿಂದ ಮಾತ್ರ ನನಗೆ ತಿಳಿದಿದೆ' ಎಂದು ಅವರು ಮಾಧ್ಯಮಗಳನ್ನು ಕುರಿತು ಹೇಳಿದ್ದಾರೆ.
ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನದ ಬಗ್ಗೆ ಕೇಳಿದಾಗ, ಇದು ಕಾಂಗ್ರೆಸ್ಗೆ ಸಿಗಲಿದೆ ಎಂದು ಪವಾರ್ ಸುಳಿವು ನೀಡಿದರು.
'ನನ್ನ ಮಾಹಿತಿಯ ಪ್ರಕಾರ, ಕಾಂಗ್ರೆಸ್ ಈಗ ವಿಧಾನಸಭೆಯಲ್ಲಿ ಹೆಚ್ಚಿನ ಬಲವನ್ನು ಹೊಂದಿದೆ. ಕಾಂಗ್ರೆಸ್ ಪ್ರತಿಪಕ್ಷದ ನಾಯಕ ಸ್ಥಾನವನ್ನು ನಿಭಾಯಿಸುವುದಾದರೆ ನನ್ನ ಸ್ವಾಗತವಿದೆ' ಎಂದು ಅವರು ತಿಳಿಸಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆ: ಎನ್ಸಿಪಿಯಿಂದ ಪ್ರಪುಲ್ ಪಟೇಲ್, ಸುನಿಲ್ ತಟ್ಕರೆ ಉಚ್ಚಾಟನೆ
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಅಜಿತ್ ಪವಾರ್, ಪ್ರಪುಲ್ ಪಟೇಲ್, ಸುನಿಲ್ ತಟ್ಕರೆ ಸೇರಿದಂತೆ ಒಂಬತ್ತು ಮುಖಂಡರನ್ನು ಶರದ್ ಪವಾರ್ ನೇತೃತ್ವದ ಎನ್ಸಿಪಿ ಉಚ್ಚಾಟನೆಗೊಳಿಸಿದೆ.
ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕ್ಷಣವೇ ಒಂಬತ್ತು ಶಾಸಕರನ್ನು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಅನರ್ಹಗೊಳಿಸಲಾಗಿದೆ ಎಂದು ಎನ್ಸಿಪಿ ರಾಜ್ಯಾಧ್ಯಕ್ಷ ಜಯಂತ್ ಪಾಟೀಲ್ ಹೇಳಿದ್ದಾರೆ.












Click it and Unblock the Notifications