Sarjapur-Hebbal Metro : ಸರ್ಜಾಪುರದಿಂದ ಹೆಬ್ಬಾಳದವರೆಗೆ ಮೆಟ್ರೋ ಯೋಜನೆ: ಅಪ್ಡೇಟ್ ಕೊಟ್ಟ ಡಿ ಕೆ ಶಿವಕುಮಾರ್
ನವದೆಹಲಿ: ಮೆಟ್ರೋ 3ಎ ಹಂತದ ಯೋಜನೆ ಸರ್ಜಾಪುರದಿಂದ ಹೆಬ್ಬಾಳದವರೆಗೆ 36.59 ಕಿ.ಮೀ ಉದ್ದದ ಮಾರ್ಗದಲ್ಲಿ 28 ನಿಲ್ದಾಣಗಳನ್ನು ಒಳಗೊಂಡಿದೆ. ಇದರಲ್ಲಿ 22.14 ಕಿ.ಮೀ ಮೇಲ್ಸೇತುವೆ ಹಾಗೂ 14.45 ಕಿ.ಮೀ ಸುರಂಗ ಪಥದಲ್ಲಿ ಸಾಗಲಿದ್ದು, ಈ ಯೋಜನೆಗೆ ಒಟ್ಟು 28,405 ಕೋಟಿ ರೂ. ಅಂದಾಜು ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು.
ದೆಹಲಿಯಲ್ಲಿ ಮಂಗಳವಾರ ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವರಾದ ಮನೋಹರ್ ಲಾಲ್ ಅವರನ್ನು ಭೇಟಿ ಮಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ರಾಜ್ಯ ರಾಜಧಾನಿಗೆ ಅಗತ್ಯವಾಗಿರುವ ಯೋಜನೆಗಳ ಬಗ್ಗೆ ಮನವಿ ಸಲ್ಲಿಸಿದರು. ಮೆಟ್ರೋ 3ಎ ಹಂತದ ಯೋಜನೆಗೆ 10.01.2025ರಂದು ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿದ್ದು, 15.01.2025ರಂದು ಕೇಂದ್ರ ಸಚಿವಾಲಯದ ಒಪ್ಪಿಗೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಯೋಜನೆಗೆ ಕೇಂದ್ರ ಸಚಿವಾಲಯದ ಒಪ್ಪಿಗೆ ಬಾಕಿ ಇದ್ದು, ಆದಷ್ಟು ಬೇಗ ಒಪ್ಪಿಗೆ ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಮೆಟ್ರೋ 2ನೇ ಹಂತದ ಪರಿಷ್ಕೃತ ದರಕ್ಕೆ ಒಪ್ಪಿಗೆ, ಮೆಟ್ರೋ 3ಎ ಹಂತಕ್ಕೆ ಅನುಮೋದನೆ, RRTS ಯೋಜನೆಗೆ ಬೆಂಬಲ, ಮಿಟ್ಟಗಾನಹಳ್ಳಿ ಕೆರೆ ಬಳಿ ವಿವಿಧಹಂತದ ತ್ಯಾಜ್ಯ ವಿಲೇವಾರಿ(Treatment and Disposal of Legacy Leachate)ಗೆ ಅನುಮತಿ ಸೇರಿದಂತೆ ಬೆಂಗಳೂರಿನ ಅಭಿವೃದ್ಧಿಗೆ ಅಗತ್ಯವಾಗಿರುವ ಯೋಜನೆಗಳಿಗೆ ಅನುಮತಿ ಹಾಗೂ ಬೆಂಬಲ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರು ದೇಶದ ಮಹಾನಗರಗಳಲ್ಲಿ ಒಂದಾಗಿದ್ದು, ಇಲ್ಲಿ ಅನೇಕ ನಗರಾಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಕರ್ನಾಟಕ ರಾಜ್ಯ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆಗೆ ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯ ಬಾಕಿ ಉಳಿದಿರುವ ಅನುಮತಿ ನೀಡಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಮೆಟ್ರೋ 2ನೇ ಹಂತದ ಯೋಜನೆ ಪೂರ್ಣಗೊಳಿಸುವ ಪರಿಷ್ಕೃತ ವೆಚ್ಚ (Revised Completion Cost) 26,405 ಕೋಟಿ ರೂ.ನಿಂದ 40,425 ಕೋಟಿ ರೂ.ವರೆಗೆ ಏರಿಕೆಯಾಗಿದ್ದು, ರಾಜ್ಯ ಸರ್ಕಾರ ದಿನಾಂಕ 05.06.2025ರಂದು ಅನುಮೋದನೆ ನೀಡಿದೆ. ಈ ಪ್ರಸ್ತಾವನೆಯನ್ನು ಕೇಂದ್ರ ಸಚಿವಾಲಯಕ್ಕೆ 09.06.2025ರಂದು ಕಳುಹಿಸಲಾಗಿದ್ದು, ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಬೇಕು ಎಂದು ಹೇಳಿದ್ದಾರೆ.
ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ. ಕಾಂಗ್ರೆಸ್ ಸರ್ಕಾರ ಮನರೇಗಾ ಯೋಜನೆಯನ್ನು ಸಂವಿಧಾನಬದ್ಧವಾಗಿ ಜಾರಿಗೆ ತಂದಿತ್ತು. ಉದ್ಯೋಗ ಖಾತರಿಯನ್ನು ಸಂವಿಧಾನಿಕ ಹಕ್ಕಾಗಿ ನೀಡಿತ್ತು ಎಂದರು.
ಮಹಾತ್ಮಾ ಗಾಂಧಿ ಅವರ ಹೆಸರು ಬದಲಾವಣೆ ಮಾಡುತ್ತಿರುವುದು ನೋಡಿದರೆ ಕೇಂದ್ರ ಸರ್ಕಾರದ ಅಂತಿಮ ದಿನಗಳ ಆರಂಭ ಎನ್ನಬಹುದು. ಕೇಂದ್ರ ಸರ್ಕಾರ ಈ ಯೋಜನೆಯನ್ನು ಹತ್ಯೆ ಮಾಡುತ್ತಿದೆ. ಈ ಯೋಜನೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪಾಲಿನ ಅನುಪಾತವನ್ನು 60:40ಕ್ಕೆ ಬದಲಾಯಿಸಿದ್ದು, ಬಿಜೆಪಿ ಆಡಳಿತ ರಾಜ್ಯ ಸರ್ಕಾರಗಳು ಸೇರಿದಂತೆ ಯಾವುದೇ ರಾಜ್ಯ ಸರ್ಕಾರಗಳು ಇದನ್ನು ಭರಿಸುವುದಿಲ್ಲ. ಇದರಿಂದಾಗಿ ಭವಿಷ್ಯದಲ್ಲಿ ಈ ಯೋಜನೆ ಸಂಪೂರ್ಣ ವಿಫಲವಾಗಲಿದೆ ಎಂದರು.












Click it and Unblock the Notifications