ರೈತರ ಬೇಡಿಕೆ ಮೇರೆಗೆ ತುಂಗಭದ್ರಾದಿಂದ 5575 ಕ್ಯೂಸೆಕ್ಸ್ ನೀರು ಹರಿಸಲು ಅನುಮತಿ: ಡಿಕೆ ಶಿವಕುಮಾರ್
ನವದೆಹಲಿ, ಆಗಸ್ಟ್ 02: ರೈತರ ಬೇಡಿಕೆ, ಜಿಲ್ಲಾ ಸಚಿವರುಗಳು ಹಾಗೂ ಶಾಸಕರ ಒತ್ತಡದ ಹಿನ್ನೆಲೆಯಲ್ಲಿ ತುಂಗಾಭದ್ರಾದಿಂದ 5575 ಕ್ಯೂಸೆಕ್ಸ್ ನೀರು ಹರಿಸಲು ಒಪ್ಪಿಗೆ ನೀಡಲಾಗಿದೆ ಎಂದು ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಈ ಕುರಿತು ಗುರುವಾರ ದೆಹಲಿಯಲ್ಲಿ ಕರ್ನಾಟಕ ಭವನದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವೆರು, ದಕ್ಷಿಣ ಕರ್ನಾಟಕಕ್ಕಿಂತ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ತುಂಗಭದ್ರಾ ಆಣೆಕಟ್ಟೆ ಮೂಲಕ ನೀರು ಹರಿಸಲು ಬಹಳ ಒತ್ತಡ ಬಂದಿದೆ.

ಜಿಲ್ಲಾ ಸಚಿವರು, ಶಾಸಕರುಗಳು ನೀರು ಹರಿಸುವಂತೆ ಕೇಳುತ್ತಿದ್ದಾರೆ. ಇಲ್ಲಿ 105 ಟಿಎಂಸಿ ಶೇಖರಣಾ ಸಾಮರ್ಥ್ಯವಿದ್ದು, ಈಗಾಗಲೇ 83 ಟಿಎಂಸಿ ನೀರಿದೆ. ರೈತರಿಂದ ಬಹಳ ಬೇಡಿಕೆ ಇರುವ ಕಾರಣ 5575 ಕ್ಯೂಸೆಕ್ಸ್ ನೀರನ್ನು ಹರಿಸಲು ಅನುಮತಿ ನೀಡಲಾಗಿದೆ. ಟಿಎಲ್ ಬಿಸಿಗೆ ಸುಮಾರು 1300 ರಿಂದ 1500 ಕ್ಯೂಸೆಕ್ಸ್, ಆರ್ ಬಿಎಲ್ ಸಿಯಲ್ಲಿ 1200 ಕ್ಯೂಸೆಕ್ಸ್, ಆರ್ ಎಚ್ ಬಿಎಲ್ ಸಿಗೆ 1375 ಕ್ಯೂಸೆಕ್ ನೀರು ನೀಡಬೇಕಾಗಿದೆ. ಇದರ ಜತೆಗೆ ಆಂಧ್ರ ಪ್ರದೇಶದ ಪಾಲಿನ ನೀರನ್ನು ಬಿಡಬೇಕಾಗಿದ್ದು, ಒಟ್ಟು 5575 ಕ್ಯೂಸೆಕ್ಸ್ ನೀರು ಹರಿಸಲು ಅನುಮತಿ ನೀಡಲಾಗಿದೆ. ಆಮೂಲಕ ರೈತರ ಬೇಡಿಕೆಗೆ ಸ್ಪಂದಿಸಿದ್ದೇವೆ ಎಂದು ತಿಳಿಸಿದರು.
ಸಚಿವ ಶಿವರಾಜ್ ತಂಗಡಗಿ ನೇತೃತ್ವದಲ್ಲಿ ತುಂಗಭದ್ರಾ ಸಲಹಾ ಸಮಿತಿ
ಇನ್ನೂ ತುಂಗಭದ್ರಾ ಸಲಹಾ ಸಮಿತಿಗೆ ಸಚಿವ ಶಿವರಾಜ್ ತಂಗಡಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇವರ ಅಧ್ಯಕ್ಷತೆಯಲ್ಲಿ ತುಂಗಭದ್ರಾ ಸಲಹಾ ಸಮಿತಿ ಸಭೆ ಮಾಡಿ, ರೈತರ ಬೆಳೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯಾವ, ಯಾವ ಕಾಲಕ್ಕೆ ಎಷ್ಟು ನೀರು ಬಿಡಬೇಕು ಎಂಬುದನ್ನು ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.












Click it and Unblock the Notifications