ಏರ್ ಇಂಡಿಯಾದ ನಂತರ ಇಂಡಿಗೋ ವಿಮಾನದಲ್ಲಿ ಕುಡುಕರ ಗಲಾಟೆ, ಗಗನಸಖಿಯೊಂದಿಗೆ ಜಗಳ
ಏರ್ ಇಂಡಿಯಾ ವಿಮಾನದಲ್ಲಿ ವೃದ್ಧೆಯೊಬ್ಬಳ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ಇನ್ನೂ ಮಾಸಿದಂತಿಲ್ಲ ಎನ್ನುವಾಗಲೇ ವಿಮಾನದೊಳಗೆ ಮತ್ತೊಂದು ದುರ್ವರ್ತನೆ ಪ್ರಕರಣ ಬಯಲಿಗೆ ಬಂದಿದೆ. ಇಂಡಿಗೋ ಏರ್ಲೈನ್ಸ್ನಲ್ಲಿ ಗಗನಸಖಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ.
ವರದಿಗಳ ಪ್ರಕಾರ, ಅಮಲೇರಿದ ಸ್ಥಿತಿಯಲ್ಲಿದ್ದ ಮೂವರು ಪ್ರಯಾಣಿಕರು ವಿಮಾನದೊಳಗೆ ಅನುಚಿತವಾಗಿ ವರ್ತಿಸಿ ಹಲ್ಲೆ ನಡೆಸಿದ್ದಾರೆ. ಮೂವರು ಆರೋಪಿ ಪ್ರಯಾಣಿಕರ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ದೆಹಲಿಯಿಂದ ಪಾಟ್ನಾಗೆ ತೆರಳುತ್ತಿದ್ದ ಇಂಡಿಗೋ ಏರ್ಲೈನ್ಸ್ನಲ್ಲಿ ಈ ಘಟನೆ ನಡೆದಿದೆ.
ಏರ್ ಹೋಸ್ಟೆಸ್ ಘಟನೆಯ ಬಗ್ಗೆ ವಿಮಾನದ ಕ್ಯಾಪ್ಟನ್ಗೆ ತಿಳಿಸಿದಾಗ, ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಮಾನ ಪಾಟ್ನಾದಲ್ಲಿ ಇಳಿದಾಗ, ವಿಷಯವನ್ನು ಸಿಐಎಸ್ಎಫ್ಗೆ ತಿಳಿಸಲಾಯಿತು. ಇದಾದ ಬಳಿಕ ಪಾಟ್ನಾ ಪೊಲೀಸರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಈ ಜನರನ್ನು ವಿಚಾರಣೆ ನಡೆಸಲಾಗುತ್ತಿದೆ. ಇದೇ ವೇಳೆ ಯುವಕನೊಬ್ಬ ವಿಮಾನ ನಿಲ್ದಾಣದಿಂದ ಪರಾರಿಯಾಗಿದ್ದಾನೆ. ಆತನಿಗಾಗಿ ಹುಡುಕಾಟ ನಡೆಯುತ್ತಿದೆ. ಈ ಸಂಬಂಧ ಎಫ್ಐಆರ್ ದಾಖಲಾಗಿದೆ. ಆರೋಪಿಗಳಿಬ್ಬರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಪ್ರಕರಣದ ಇತರರ ಮಾಹಿತಿ ಪಡೆಯುತ್ತಿದ್ದಾರೆ.
ಈ ಹಿಂದೆ ಏರ್ ಇಂಡಿಯಾ ವಿಮಾನದಲ್ಲಿ ಮದ್ಯದ ಅಮಲಿನಲ್ಲಿದ್ದ ಯುವಕನೊಬ್ಬ ವೃದ್ಧ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದನು. ಕಳೆದ ವರ್ಷ ನವೆಂಬರ್ 26 ರಂದು ಏರ್ ಇಂಡಿಯಾ ವಿಮಾನದಲ್ಲಿ ಕುಡಿದ ಅಮಲಿನಲ್ಲಿ ಯುವಕನೊಬ್ಬ ವಯಸ್ಸಾದ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದನು.
ಈ ಘಟನೆಯ ನಂತರ ಮಹಿಳೆ ಟಾಟಾ ಗ್ರೂಪ್ ಅಧ್ಯಕ್ಷರಿಗೆ ಪತ್ರ ಬರೆದು ದೂರು ನೀಡಿದ್ದರು. ಘಟನೆಯ ನಂತರ, ಸಿಬ್ಬಂದಿಗಳು ಸರಿಯಾದ ಕ್ರಮ ಕೈಗೊಂಡಿಲ್ಲ ಮತ್ತು ವಿಮಾನ ಲ್ಯಾಂಡ್ ಆದ ನಂತರ ಮತ್ತು ವ್ಯಕ್ತಿಯನ್ನು ಹೋಗಲು ಅನುಮತಿಸಿದ್ದಾರೆ ಎಂದು ದೂರಲಾಗಿತ್ತು.
ಆರೋಪಿಯ ವಿರುದ್ಧ ಏನೂ ಕ್ರಮ ಕೈಗೊಂಡಿಲ್ಲ ಎಂದು ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ. ಘಟನೆ ಬೆಳಕಿಗೆ ಬಂದ ನಂತರ ಆರೋಪಿ ಪ್ರಯಾಣಿಕನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮಹಿಳೆಯ ಪತ್ರಕ್ಕೆ ಟಾಟಾ ಗ್ರೂಪ್ ಅಧ್ಯಕ್ಷ ಎನ್ ಚಂದ್ರಶೇಖರ್ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಘಟನೆ ನನಗೆ ಮತ್ತು ಏರ್ ಇಂಡಿಯಾ ಸಹೋದ್ಯೋಗಿಗಳಿಗೆ ವೈಯಕ್ತಿಕ ನೋವಿನ ವಿಷಯವಾಗಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಸಿಬ್ಬಂದಿಗಳು ಶೀಘ್ರ ಕ್ರಮಕೈಗೊಳ್ಳಬೇಕಿತ್ತು ಎಂದಿದ್ದಾರೆ.
ವಿಮಾನದಲ್ಲಿರುವ ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ. ಈ ಘಟನೆಯಿಂದ ವಿಮಾನದೊಳಗಿನ ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ. ಇದರೊಂದಿಗೆ ವಿಮಾನದಲ್ಲಿದ್ದ ಸಿಬ್ಬಂದಿಯ ವರ್ತನೆಯ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ.