ಕೊರೊನಾ ಲಸಿಕೆ ದಾಖಲೆಗಳಿಂದ ಪ್ರಧಾನಿ ಫೋಟೋ ತೆಗೆದುಹಾಕಲು ಆಯೋಗ ಸೂಚನೆ
ನವದೆಹಲಿ, ಮಾರ್ಚ್.06: ವಿಧಾನಸಭಾ ಚುನಾವಣೆ ನಡೆಯುತ್ತಿರುವ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊರೊನಾವೈರಸ್ ಲಸಿಕೆ ಪ್ರಮಾಣಪತ್ರದಲ್ಲಿ ಮುದ್ರಿಸಿರುವ ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ತೆಗೆದು ಹಾಕುವಂತೆ ಕೇಂದ್ರ ಚುನಾವಣಾ ಆಯೋಗ ಸೂಚನೆ ನೀಡಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಕಳೆದ ಫೆಬ್ರವರಿ.26ರಂದು ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಹಾಗೂ ಪುದುಚೇರಿ ಕೇಂದ್ರಾಡಳಿತ ಪ್ರದೇಶದಲ್ಲಿ ಚುನಾವಣೆಗೆ ಆಯೋಗವು ದಿನಾಂಕ ಪ್ರಕಟಿಸಿತ್ತು. ಪೆಟ್ರೋಲ್ ಬಂಕ್ ಗಳಲ್ಲಿನ ಜಾಹೀರಾತಿನಲ್ಲಿ ಮತ್ತು ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ಭಾವಚಿತ್ರ ಮುದ್ರಿಸಿರುವ ಬಗ್ಗೆ ಮಾರ್ಚ್.03ರಂದು ಟಿಎಂಸಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.
ಪಶ್ಚಿಮ ಬಂಗಾಳದಲ್ಲಿ ಲಸಿಕೆ ದಾಖಲೆಗಳಲ್ಲಿ ಪ್ರಧಾನಿ ಫೋಟೋ: ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು
ಕೊರೊನಾವೈರಸ್ ಲಸಿಕೆ ಪ್ರಮಾಣಪತ್ರ ಸೇರಿದಂತೆ ಸರ್ಕಾರಿ ಯೋಜನೆಗಳಲ್ಲಿ ಪ್ರಧಾನಿ ಮೋದಿ ಭಾವಚಿತ್ರ ಹಾಕುವ ಮೂಲಕ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಈ ಬಗ್ಗೆ ಚುನಾವಣಾ ಸಮಿತಿ ಮಧ್ಯಪ್ರವೇಶಿಸಬೇಕು. ಪೆಟ್ರೋಲ್ ಬಂಕ್ ಗಳಲ್ಲಿ ಕೇಂದ್ರ ಸರ್ಕಾರದ ಯೋಜನೆಗಳಿಗೆ ಸಂಬಂಧಿಸಿದ ಯೋಜನೆಗಳಲ್ಲಿ ಪ್ರಧಾನಿ ಮೋದಿ ಭಾವಚಿತ್ರವಿರುವ ಹೋಲ್ಡಿಂಗ್ಸ್ ಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಲಾಗಿತ್ತು.
1 ಕೇಂದ್ರಾಡಳಿತ ಪ್ರದೇಶ, ನಾಲ್ಕ ರಾಜ್ಯಗಳಲ್ಲಿ ಫೋಟೋ ತೆರವು
ವಿಧಾನಸಭಾ ಚುನಾವಣೆಗಳು ನಡೆಯುತ್ತಿರುವ ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ನಂತರ ನೀಡುವ ಪ್ರಮಾಣಪತ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಫೋಟೋವನ್ನು ತೆಗೆದು ಹಾಕುವಂತೆ ಚುನಾವಣಾ ಆಯೋಗ ಸೂಚಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಎರಡನೇ ಹಂತದ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ
ಕಳೆದ ಮಾರ್ಚ್.01ರಂದು ಭಾರತದಲ್ಲಿ ಎರಡನೇ ಹಂತದ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದರು. ಎರಡನೇ ಹಂತದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟ ಹಾಗೂ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೊವಿಡ್-19 ಲಸಿಕೆಯ ನೀಡುವುದಕ್ಕೆ ಉದ್ದೇಶಿಸಲಾಗಿದೆ. ಹೀಗೆ ಲಸಿಕೆ ಪಡೆದವರಿಗೆ ಪ್ರಮಾಣಪತ್ರವನ್ನು ವಿತರಿಸಲಾಗುತ್ತಿದ್ದು, ಅದರಲ್ಲಿ ಪ್ರಧಾನಿ ಮೋದಿಯವರ ಭಾವಚಿತ್ರವನ್ನು ಹಾಕಲಾಗಿತ್ತು.
ಬಿಜೆಪಿ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪ
ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿದ ಟಿಎಂಸಿ ನಿಯೋಗ ಕೇಂದ್ರ ಸರ್ಕಾರದ ವಿರುದ್ಧ ದೂರು ನೀಡಿತ್ತು. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡುವ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ಭಾವಚಿತ್ರ ಬಳಸಿರುವುದು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ದೂಷಿಸಿತ್ತು. ಕೇಂದ್ರ ಸರ್ಕಾರ ಸಾರ್ವಜನಿಕರ ತೆರಿಗೆದಾರರ ಹಣದಲ್ಲಿ ನೀತಿ ಸಂಹಿತೆ ವಿರುದ್ಧ ಪ್ರಚಾರ ಪಡೆಯುವುದು ಸೂಕ್ತವಲ್ಲ, ಈ ಬಗ್ಗೆ ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳಬೇಕು ಹಾಗೂ ಕೂಡಲೇ ಪ್ರಧಾನಿ ಮೋದಿ ಭಾವಚಿತ್ರವನ್ನು ತೆಗೆದು ಹಾಕುಬೇಕು ಎಂದು ಟಿಎಂಸಿ ರಾಜ್ಯಸಭಾ ಸದಸ್ಯ ಡೆರೆಕ್ ಓ'ಬ್ರಿಯೆನ್ ಆಗ್ರಹಿಸಿದ್ದರು.
4 ರಾಜ್ಯ, 1 ಕೇಂದ್ರಾಡಳಿತ ಪ್ರದೇಶದಲ್ಲಿ ಚುನಾವಣೆ ದಿನಾಂಕ
ಭಾರತದ ನಾಲ್ಕು ರಾಜ್ಯ, ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭೆಗೆ ಮಾರ್ಚ್.27ರಿಂದ ಮತದಾನ ಆರಂಭವಾಗಲಿದೆ. ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್.27, ಏಪ್ರಿಲ್.1, ಏಪ್ರಿಲ್.6, ಏಪ್ರಿಲ್.10, ಏಪ್ರಿಲ್.17, ಏಪ್ರಿಲ್.22, ಏಪ್ರಿಲ್.26 ಮತ್ತು ಏಪ್ರಿಲ್.29ರಂದು ಮತದಾನ ನಡೆಯಲಿದೆ. ತಮಿಳುನಾಡು, ಪುದುಚೇರಿ ಮತ್ತು ಕೇರಳದಲ್ಲಿ ಏಪ್ರಿಲ್.06ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಅಸ್ಸಾಂನಲ್ಲಿ ಮಾರ್ಚ್.27, ಏಪ್ರಿಲ್.1 ಮತ್ತು ಏಪ್ರಿಲ್.6ರಂದು ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ನಾಲ್ಕೂ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಚುನಾವಣಾ ಫಲಿತಾಂಶ ಮೇ.2ರಂದು ಹೊರ ಬೀಳಲಿದೆ.