Maharashtra Election 2024: ಶಾಸಕರ ಪ್ರತ್ಯೇಕ ಸಭೆ ಕರೆದ ಏಕನಾಥ್ ಶಿಂಧೆ, ಅಜಿತ್ ಪವಾರ್
ಮುಂಬೈ, ನವೆಂಬರ್ 24: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ 2024ರ ಫಲಿತಾಂಶ ಪ್ರಕಟವಾಗಿದ್ದು, ಸರ್ಕಾರ ರಚನೆಯ ಪ್ರಕ್ರಿಯೆ ಆರಂಭವಾಗಿದೆ. ಚುನಾವಣೆಯಲ್ಲಿ 132 ಸೀಟುಗಳಲ್ಲಿ ಗೆದ್ದು ಅತಿ ದೊಡ್ಡ ಪಕ್ಷವಾಗಿರುವ ಬಿಜೆಪಿ ಮಹಾಯತಿ ಮೈತ್ರಿಕೂಟದ ನೆರವಿನಿಂದ ಸರ್ಕಾರ ರಚನೆ ಮಾಡಲಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 145. ಮಹಾಯತಿ ಮೈತ್ರಿಕೂಟದ ಒಟ್ಟು ಶಾಸಕರ ಬಲ 230.
ಮಹಾರಾಷ್ಟ್ರದ ಹಾಲಿ ಮುಖ್ಯಮಂತ್ರಿ ಶಿವಸೇನೆ ನಾಯಕ ಏಕನಾಥ್ ಶಿಂಧೆ. ನೂತನ ಮುಖ್ಯಮಂತ್ರಿ ಹುದ್ದೆ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಗೆ ಸಿಗಲಿದೆ. ಆದ್ದರಿಂದ ನೂತನ ಮುಖ್ಯಮಂತ್ರಿ ಯಾರು? ಎಂಬ ಚರ್ಚೆಗಳು ಆರಂಭವಾಗಿದೆ. ಎಲ್ಲಾ ನೂತನ ಶಾಸಕರು ಮುಂಬೈಗೆ ಆಗಮಿಸುವಂತೆ ಬಿಜೆಪಿ ಸಂದೇಶ ಕಳಿಸಿದೆ.

ಪ್ರತ್ಯೇಕ ಸಭೆ ಕರೆದ ಪಕ್ಷಗಳು: ವಿಧಾನಸಭೆ ಚುನಾವಣೆಯಲ್ಲಿ ಶಿವಸೇನೆ (ಏಕನಾಥ್ ಶಿಂಧೆ ಬಣ) 57, ಎನ್ಸಿಪಿ (ಅಜಿತ್ ಪವಾರ್ ಬಣ) 41 ಸೀಟು ಗೆದ್ದಿವೆ. ಈ ಎರಡೂ ಪಕ್ಷಗಳು 'ಮಹಾಯತಿ' ಮೈತ್ರಿಕೂಟದ ಜೊತೆಗಿವೆ. ಸರ್ಕಾರ ರಚನೆ ಪ್ರಕ್ರಿಯೆ ಆರಂಭವಾಗಿರುವ ಹಿನ್ನಲೆಯಲ್ಲಿ ಪಕ್ಷಗಳು ನೂತನ ಶಾಸಕರ ಸಭೆಯನ್ನು ಕರೆದಿವೆ.
ಎನ್ಸಿಪಿ ನಾಯಕ ಏಕನಾಥ್ ಶಿಂಧೆ ಮತ್ತು ಎನ್ಸಿಪಿ ನಾಯಕ ಅಜಿತ್ ಪವಾರ್ ಪ್ರತ್ಯೇಕವಾಗಿ ನೂತನವಾಗಿ ಆಯ್ಕೆಯಾದ ಶಾಸಕರ ಸಭೆಯನ್ನು ಕರೆದಿದ್ದಾರೆ. ಸರ್ಕಾರ ರಚನೆ ಭಾಗವಾಗುವ ಕುರಿತು ಸಭೆಯಲ್ಲಿ ಶಾಸಕರ ಅಭಿಪ್ರಾಯವನ್ನು ಸಂಗ್ರಹ ಮಾಡಲಾಗುತ್ತದೆ. ಈ ಸಭೆ ಮುಂಬೈ ನಗರದಲ್ಲಿ ನಡೆಯಲಿದೆ.
ಈ ಬಾರಿ ಏಕನಾಥ್ ಶಿಂಧೆ ಮುಖ್ಯಮಂತ್ರಿ ಆಗುವುದಿಲ್ಲ ಎಂಬುದು ಖಾತ್ರಿಯಾಗಿದೆ. ಮಹಾಯತಿ ಮೈತ್ರಿಕೂಟ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡದೇ ಚುನಾವಣೆಗೆ ಹೋಗಿತ್ತು. ಅಲ್ಲದೇ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಿಸಿದ ಪಕ್ಷಕ್ಕೆ ಸಿಎಂ ಹುದ್ದೆ ಎಂದು ತೀರ್ಮಾನ ಕೈಗೊಂಡಿತ್ತು. ಆದ್ದರಿಂದ ಬಿಜೆಪಿಗೆ ಸಿಎಂ ಸ್ಥಾನ ಸಿಗಲಿದೆ.
ಮುಖ್ಯಮಂತ್ರಿ ಹುದ್ದೆಯ ಕುರಿತು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಬವಾಂಕುಲೆ ಮಾತನಾಡಿದ್ದು, "ಮಹಾಯತಿ, ಬಿಜೆಪಿಯ ವರಿಷ್ಠ ನಾಯಕರು ಮುಂದಿನ ಮುಖ್ಯಮಂತ್ರಿ ಯಾರು? ಎಂಬ ಬಗ್ಗೆ ತೀರ್ಮಾನವನ್ನು ಕೈಗೊಳ್ಳಲಿದ್ದಾರೆ" ಎಂದು ಹೇಳಿದರು.
ಹಾಲಿ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಬಿಜೆಪಿ ವರಿಷ್ಠ ನಾಯಕರು ಈ ಪ್ರಸ್ತಾವನೆಗೆ ಒಪ್ಪಿಗೆ ನೀಡುವ ನಿರೀಕ್ಷೆ ಇದ್ದು, ಇದಕ್ಕೂ ಮೊದಲು ಹೊಸದಾಗಿ ಆಯ್ಕೆಯಾದ ಬಿಜೆಪಿ ಶಾಸಕರ ಜೊತೆ ಸಭೆಯನ್ನು ನಡೆಸಲಿದ್ದಾರೆ.
ಮಾಹಿತಿಗಳ ಪ್ರಕಾರ ನವೆಂಬರ್ 26ರಂದು ಮಹಾಯತಿ ಮೈತ್ರಿಕೂಟ ಮಹಾರಾಷ್ಟ್ರ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆ ಮಾಡುವ ಹಕ್ಕು ಮಂಡಿಸಲಿದೆ. ನವೆಂಬರ್ 27ರಂದು ನೂತನ ಮುಖ್ಯಮಂತ್ರಿಯ ಪ್ರಮಾಣ ವಚನ ಸಮಾರಂಭ ನಡೆಯಲಿದೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ 2024ರಲ್ಲಿ ಬಿಜೆಪಿ 132, ಶಿವಸೇನೆ (ಏಕನಾಥ್ ಶಿಂಧೆ ಬಣ)57, ಎನ್ಸಿಪಿ (ಅಜಿತ್ ಪವಾರ್ ಬಣ) 41 ಸೀಟುಗಳಲ್ಲಿ ಜಯಗಳಿಸಿವೆ. ಈ ಮೂರು ಪಕ್ಷಗಳು 'ಮಹಾಯುತಿ' ಮೈತ್ರಿಕೂಟದಲ್ಲಿವೆ. ಹಾಲಿ ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಸಹ ಇದೇ ಮೈತ್ರಿಕೂಟ.
ಮಹಾವಿಕಾಸ್ ಅಘಾಡಿ ಮೈತ್ರಿಕೂಟ (ಎಂವಿಎ) ಚುನಾವಣೆಯಲ್ಲಿ ಭಾರೀ ಹಿನ್ನಡೆ ಅನುಭವಿಸಿದೆ. ಚುನಾವಣೆಯಲ್ಲಿ ಕಾಂಗ್ರೆಸ್ 16, ಶಿವಸೇನೆ (ಉದ್ಧವ್ ಠಾಕ್ರೆ ಬಣ) 20, ಎನ್ಸಿಪಿ (ಶರದ್ ಪವಾರ್) 10 ಸೀಟುಗಳಲ್ಲಿ ಜಯಗಳಿವೆ. ಉಳಿದಂತೆ ಎಸ್ಪಿ 2, ಇತರ ಪಕ್ಷಗಳು/ ಪಕ್ಷೇತರರು 10 ಸೀಟುಗಳಲ್ಲಿ ಜಯಗಳಿಸಿದ್ದಾರೆ.












Click it and Unblock the Notifications