Maharashtra Election 2024: ಏಕನಾಥ್ ಶಿಂಧೆ ರಾಜೀನಾಮೆ, ದೇವರ ಮೊರೆ ಹೋದ ಬೆಂಬಲಿಗರು!
ಮುಂಬೈ, ನವೆಂಬರ್ 26: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ 2024ರ ಫಲಿತಾಂಶ ಶನಿವಾರ ಘೋಷಣೆಯಾಗಿದೆ. ಮಂಗಳವಾರ ಹಾಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ರಾಜೀನಾಮೆ ನೀಡಲಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚನೆಯ ಪ್ರಕ್ರಿಯೆ ಆರಂಭಗೊಂಡಿದೆ. ಚುನಾವಣೆಯಲ್ಲಿ ಬಿಜೆಪಿ 132 ಸೀಟುಗಳಲ್ಲಿ ಗೆದ್ದು ಅತಿ ದೊಡ್ಡ ಪಕ್ಷವಾಗಿದೆ. ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 145. ಬಿಜೆಪಿ 'ಮಹಾಯತಿ' ಮೈತ್ರಿಕೂಟದ ನೆರವಿನಿಂದ ಮತ್ತೊಮ್ಮೆ ಸರ್ಕಾರ ರಚಿಸಲಿದೆ. ಮಹಾಯತಿ ಮೈತ್ರಿಕೂಟದ ಶಾಸಕರ ಬಲ 230.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 132, ಶಿವಸೇನೆ (ಏಕನಾಥ್ ಶಿಂಧೆ ಬಣ) 57, ಎನ್ಸಿಪಿ (ಅಜಿತ್ ಪವಾರ್ ಬಣ) 41 ಸೀಟುಗಳಲ್ಲಿ ಜಯಗಳಿಸಿವೆ. ಮೂರು ಪಕ್ಷಗಳು ಸೇರಿರುವ 'ಮಹಾಯುತಿ' ಮೈತ್ರಿಕೂಟದ ಸರ್ಕಾರ ರಚನೆಯಾಗಲಿದೆ. ಆದರೆ ಮುಖ್ಯಮಂತ್ರಿ ಯಾರು? ಎಂಬ ಗುಟ್ಟನ್ನು ಬಿಜೆಪಿ ಇನ್ನೂ ಬಿಟ್ಟುಕೊಟ್ಟಿಲ್ಲ.

ನವೆಂಬರ್ 26ರ ಮಂಗಳವಾರ ಮಹಾರಾಷ್ಟ್ರ ವಿಧಾನಸಭೆಯ ಅವಧಿ ಮುಕ್ತಾಯಗೊಳ್ಳಲಿದೆ. ಆದ್ದರಿಂದ ಹಾಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ರಾಜ್ಯಪಾಲರನ್ನು ಭೇಟಿಯಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈ ನಡುವೆ ರಾಜ್ಯಾದ್ಯಂತ ಏಕನಾಥ್ ಶಿಂಧೆ ಬೆಂಬಲಿಗರು ದೇವರ ಮೊರೆ ಹೋಗಲಿದ್ದಾರೆ.
ರಾಜ್ಯಪಾಲರ ಭೇಟಿ: ಮುಖ್ಯಮಂತ್ರಿ ಏಕನಾಥ್ ಶಿಂಧೆ ಬೆಳಗ್ಗೆ 11 ಗಂಟೆಗೆ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. 2022ರಲ್ಲಿ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್ಸಿಪಿ (ಅಜಿತ್ ಪವಾರ್ ಬಣ) ಸೇರಿರುವ ಮಹಾಯತಿ ಮೈತ್ರಿಕೂಟದ ಸರ್ಕಾರ ರಚನೆಯಾಗಿತ್ತು. ಆಗ ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿದ್ದರು.
ಎರಡೂವರೆ ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಏಕನಾಥ್ ಶಿಂಧೆ ಮತ್ತೆ ಮುಖ್ಯಮಂತ್ರಿ ಆಗಲಿ ಎಂದು ಅವರ ಬೆಂಬಲಿಗರು, ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ. ರಾಜ್ಯಾದ್ಯಂತ ಇಂದು ಏಕನಾಥ್ ಶಿಂಧೆ ಪರವಾಗಿ ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಲಿದ್ದಾರೆ.
2022ರಲ್ಲಿ ಬಿಜೆಪಿ ನೇತೃತ್ವದಲ್ಲಿ ಮಹಾಯತಿ ಮೈತ್ರಿಕೂಟದ ಸರ್ಕಾರ ರಚನೆಗೊಂಡಿತು. ಬಿಜೆಪಿ ಮುಖ್ಯಮಂತ್ರಿ ಹುದ್ದೆಯನ್ನು ಏಕನಾಥ್ ಶಿಂಧೆಗೆ ಬಿಟ್ಟುಕೊಟ್ಟಿತ್ತು. ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್, ಎನ್ಸಿಪಿ ನಾಯಕ ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾದರು.
ಈ ಬಾರಿಯ ಚುನಾವಣೆಯಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಕೊಪ್ರಿ-ಪಂಚಖಾಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದರು. ಅವರು 1,59,060 ಮತಗಳನ್ನು ಪಡೆದು, 1,20,717 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಎದುರಾಳಿಯಾಗಿದ್ದ ಶಿವಸೇನೆ (ಉದ್ಧವ್ ಠಾಕ್ರೆ ಬಣ)ದ ಕೇದಾರ್ ದಿಘೆ 38,343 ಮತಗಳನ್ನು ಪಡೆಸು ಸೋತಿದ್ದಾರೆ. ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದ ಮನೋಜ್ ಶಿಂಧೆ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೆ ಅವರು ಕೇವಲ 1,653 ಮತ ಪಡೆದು ಸೋಲು ಕಂಡರು.
2024ರ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡದೇ ಮಹಾಯತಿ ಮೈತ್ರಿಕೂಟ ಚುನಾವಣೆ ಎದುರಿಸಿತು. ಮೈತ್ರಿಕೂಟದಲ್ಲಿ ಹೆಚ್ಚು ಸೀಟು ಗೆದ್ದ ಪಕ್ಷಕ್ಕೆ ಮುಖ್ಯಮಂತ್ರಿ ಹುದ್ದೆ ಎಂಬ ತೀರ್ಮಾನವಾಗಿತ್ತು. ಚುನಾವಣೆಯಲ್ಲಿ ಬಿಜೆಪಿ 132 ಸೀಟುಗಳಲ್ಲಿ ಗೆದ್ದಿದ್ದು, ಮುಖ್ಯಮಂತ್ರಿ ಹುದ್ದೆ ಈ ಬಾರಿ ಬಿಜೆಪಿ ಪಾಲಾಗುವುದು ಖಚಿತವಾಗಿದೆ.
ಈಗಾಗಲೇ ಹೊಸದಾಗಿ ಆಯ್ಕೆಯಾದ ಶಾಸಕರ ಜೊತೆ ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್ಸಿಪಿ (ಅಜಿತ್ ಪವಾರ್ ಬಣ) ಸಭೆಯನ್ನು ನಡೆಸಿದೆ. ಮಹಾಯತಿ ಸರ್ಕಾರ ರಚನೆ ಬಗ್ಗೆ ಮಾತುಕತೆ ನಡೆಸಿದೆ. ಆದರೆ ಪ್ರಮುಖ ಪಕ್ಷವಾದ ಬಿಜೆಪಿ ಮುಖ್ಯಮಂತ್ರಿ ಹುದ್ದೆಯ ಕುತೂಹಲವನ್ನು ಇನ್ನೂ ಸಹ ಹಾಗೆ ಉಳಿಸಿದೆ. ದೇವೇಂದ್ರ ಫಡ್ನವೀಸ್ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಆದರೆ ಅಧಿಕೃತ ಘೋಷಣೆಯಾಗಿಲ್ಲ.












Click it and Unblock the Notifications