Breaking: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ಇಡಿ ನೋಟಿಸ್!
ನವದೆಹಲಿ, ಜುಲೈ 11: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಜಾರಿ ನಿರ್ದೇಶನಾಲಯವು ಸಮನ್ಸ್ ನೀಡಿದೆ.
ಜುಲೈ 21ರಂದು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರುವಂತೆ ಸೂಚನೆ ನೀಡಲಾಗಿದೆ. ಈ ಹಿಂದೆ ಇಡಿ ಅಧಿಕಾರಿಗಳಿಂದ ಹೆಚ್ಚುವರಿ ಕಾಲಾವಕಾಶವನ್ನು ಕೋರಿದ್ದ ಸೋನಿಯಾ ಗಾಂಧಿಯವರಿಗೆ ಇದೀಗ ಹೊಸದಾಗಿ ಸಮನ್ಸ್ ಜಾರಿಗೊಳಿಸಲಾಗಿದೆ.
ವಿಚಾರಣೆ ಮುಂದೂಡುವಂತೆ ಇಡಿಗೆ ಸೋನಿಯಾ ಗಾಂಧಿ ಮನವಿ
ಇದೇ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾ ಗಾಂಧಿ ಪುತ್ರ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅನ್ನು ಕೇಂದ್ರ ತನಿಖಾ ಸಂಸ್ಥೆ ಸತತವಾಗಿ ವಿಚಾರಣೆಗೆ ಒಳಪಡಿಸಿತ್ತು. ಇದೀಗ ಸೋನಿಯಾ ಗಾಂಧಿಯವರಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.
ಹೆಚ್ಚುವರಿ ಕಾಲಾವಕಾಶ ಕೋರಿದ್ದ ಸೋನಿಯಾ ಗಾಂಧಿ: ಕಳೆದ ಜೂನ್ 2ರಂದು ಸೋನಿಯಾ ಗಾಂಧಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಲು ಹೆಚ್ಚುವರಿ ಕಾಲಾವಕಾಶ ನೀಡುವಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಲ್ಲಿ ಮನವಿ ಮಾಡಿಕೊಳ್ಳಲಾಗಿತ್ತು. ಕೋವಿಡ್-19 ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾ ಗಾಂಧಿ ಜೂನ್ ಮಧ್ಯಭಾಗದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.
ಮನಿ ಲಾಂಡರಿಂಗ್ ಪ್ರಕರಣ: ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಆದಾಯ ತೆರಿಗೆ ಇಲಾಖೆಯ ತನಿಖೆಯನ್ನು ವಿಚಾರಣಾ ನ್ಯಾಯಾಲಯವು ಗಮನಕ್ಕೆ ತಂದ ನಂತರ ಇತ್ತೀಚೆಗೆ ಏಜೆನ್ಸಿ ಮನಿ ಲಾಂಡರಿಂಗ್ ಪ್ರಕರಣವನ್ನು ದಾಖಲಿಸಿದೆ. ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ -- ಪತ್ರಿಕೆಯನ್ನು ನಡೆಸುತ್ತಿದ್ದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ನ ಸ್ವಾಧೀನದಲ್ಲಿ ವಂಚನೆ, ಪಿತೂರಿ ಮತ್ತು ಕ್ರಿಮಿನಲ್ ನಂಬಿಕೆಯ ಉಲ್ಲಂಘನೆಯ ಆರೋಪಗಳನ್ನು ಈ ಪ್ರಕರಣವು ಒಳಗೊಂಡಿದೆ. ಜಾರಿ ನಿರ್ದೇಶನಾಲಯದ ವಿಚಾರಣೆ ಆಡಳಿತಾರೂಢ ಬಿಜೆಪಿಯ ಸೇಡಿನ ರಾಜಕಾರಣದ ಭಾಗ ಎಂದು ಕಾಂಗ್ರೆಸ್ ಕೆಂಡ ಕಾರಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅವ್ಯವಹಾರದ ಆರೋಪ: ದೇಶದಲ್ಲಿ ತದನಂತರ ಪ್ರಕಟಗೊಂಡ ಇತರ ಪತ್ರಿಕೆಗಳಿಗೆ ಪೈಪೋಟಿ ನೀಡುವುದುಕ್ಕೆ ಸಾಧ್ಯವಾಗದೇ ಹಾಗೂ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗದೇ ತೀವ್ರ ವೈಫಲ್ಯವನ್ನು ಅನುಭವಿಸಿತು.
ಇದರ ಪರಿಣಾಮವಾಗಿ ಜಾಹೀರಾತು ಆದಾಯದ ಕೊರತೆ ಸೃಷ್ಟಿಯಾಯಿತು. ಕಳೆದ 2008ರಲ್ಲಿ ಮೂರೂ ಆವೃತ್ತಿಯ ಪ್ರಕಟಣೆ ಸ್ಥಗಿತಗೊಳಿಸುತ್ತಿರುವುದಾಗಿ ಪತ್ರಿಕೆ ಘೋಷಿಸಿತು. 29.09.2010ರ ವೇಳೆಗೆ ಷೇರು ಹೋಲ್ಡರುಗಳ ಸಂಖ್ಯೆ 1057ಕ್ಕೆ ಇಳಿದಿತ್ತು. ಆ ಸಮಯದಲ್ಲಿ ಸಂಸ್ಥೆಯು 90.25 ಕೋಟಿ ರೂಪಾಯಿ ಸಾಲವನ್ನು ಹೊಂದಿತ್ತು.