ಉಕ್ರೇನ್ನಲ್ಲಿ ನವೀನ್ ಸಾವಿಗೆ ಭಾರತೀಯ ಸರ್ಕಾರದ ವೈಫಲ್ಯ ಕಾರಣ; ಸಿದ್ದರಾಮಯ್ಯ ಟ್ವೀಟ್
ಕೀವ್, ಮಾರ್ಚ್ 1: ಉಕ್ರೇನ್ನ ಖಾರ್ಕಿವ್ ನಗರದಲ್ಲಿ ರಷ್ಯಾ ನಡೆಸಿದ ದಾಳಿಯಲ್ಲಿ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಗ್ಯಾನಗೌಡರ್ ಸಾವಿಗೆ ಕಾಂಗ್ರೆಸ್ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
"ಹಾವೇರಿ ಮೂಲದ ನವೀನ್ ಎಂಬಾತ ಉಕ್ರೇನ್ನಲ್ಲಿ ರಷ್ಯಾ ದಾಳಿಗೆ ಬಲಿಯಾಗಿದ್ದಾನೆ ಎಂದು ತಿಳಿದು ಬೇಸರವಾಗಿದೆ. ಅವರ ಕುಟುಂಬ ಸದಸ್ಯರು, ಸ್ನೇಹಿತರು ಮತ್ತು ಹಿತೈಷಿಗಳಿಗೆ ನನ್ನ ಸಂತಾಪ," ಎಂದು ಟ್ವೀಟ್ ಮಾಡಿದ್ದಾರೆ.
ಭವ್ಯ ಕನಸುಗಳನ್ನು ಕಟ್ಟಿಕೊಂಡಿದ್ದ ಯುವ ವೈದ್ಯಕೀಯ ವಿದ್ಯಾರ್ಥಿಯು ಭವಿಷ್ಯದ ಸುದೀರ್ಘ ಪ್ರಯಾಣದಲ್ಲಿ ಹಲವು ಜೀವಗಳನ್ನು ಉಳಿಸಬೇಕಾಗಿತ್ತು. ಆದರೆ ಬಿಜೆಪಿ ಸರ್ಕಾರದ ವೈಫಲ್ಯದಿಂದಾಗಿ ತನ್ನ ಬದುಕನ್ನು ಅರ್ಧದಲ್ಲಿಯೇ ತೊರೆದು ಹೋಗುವಂತಾಗಿದೆ," ಎಂದು ಆರೋಪಿಸಿದ್ದಾರೆ.

ಸರ್ಕಾರದ ಅಜ್ಞಾನಕ್ಕೆ ಅಮಾಯಕ ವಿದ್ಯಾರ್ಥಿ ಬಲಿ:
"ರಷ್ಯಾದಿಂದ ಸಾಕಷ್ಟು ಬಾರಿ ಎಚ್ಚರಿಕೆಗಳನ್ನು ನೀಡಲಾಗಿತ್ತು. ಭಾರತೀಯರ ಸ್ಥಳಾಂತರಿಸುವಿಕೆಗೆ ತಯಾರಿ ನಡೆಸಲು ಕೇಂದ್ರ ಸರ್ಕಾರಕ್ಕೆ ಸಾಕಷ್ಟು ಸಮಯವಿತ್ತು. ಆದರೆ ದುರದೃಷ್ಟವಶಾತ್, ಸರ್ಕಾರದ ಅಜ್ಞಾನದಿಂದಾಗಿ ನವೀನ್ ಬೆಲೆ ತೆರಬೇಕಾಯಿತು," ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಭಾರತೀಯರ ಸುರಕ್ಷಿತ ಸ್ಥಳಾಂತರಕ್ಕೆ ಕ್ರಮ:
"ಭಾರತೀಯ ವಿದೇಶಾಂಗ ಸಚಿವಾಲಯ ಮತ್ತು ಪ್ರಧಾನಮಂತ್ರಿ ಸಚಿವಾಲಯವು ವಿವಿಧ ದೇಶಗಳೊಂದಿಗೆ ತಮ್ಮ ಎಲ್ಲಾ ರಾಜತಾಂತ್ರಿಕ ಸಂಬಂಧಗಳನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕು. ಎಲ್ಲ ಭಾರತೀಯರನ್ನು ಸುರಕ್ಷಿತವಾಗಿ ಕರೆ ತರುವುದಕ್ಕೆ ಅಗತ್ಯವಾಗಿರುವ ಎಲ್ಲಾ ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕು," ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ನಾಗರಿಕರ ಮೇಲಿನ ದಾಳಿಯು ಕಳವಳಕಾರಿಯಾಗಿದೆ. ಎಲ್ಲಾ ಅಂತಾರಾಷ್ಟ್ರೀಯ ಒಪ್ಪಂದಗಳನ್ನು ಗೌರವಿಸುವುದರ ಜೊತೆ ರಷ್ಯಾದೊಂದಿಗಿನ ಈ ಸಮಸ್ಯೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ನವೀನ್ ಸಾವಿನ ಕುರಿತು ಸಿಎಂ ಬೊಮ್ಮಾಯಿ ಟ್ವೀಟ್:
"ಉಕ್ರೇನ್ನಲ್ಲಿ ಶೆಲ್ ದಾಳಿಗೆ ಕರ್ನಾಟಕದ ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತಪಟ್ಟಿದ್ದು ಒಂದು ದುರಂತದ ಸಂಗತಿ, ಈ ಕುರಿತು ನವೀನ್ ಅವರ ತಂದೆ ಶೇಖರಗೌಡ ಅವರಿಗೆ ದೂರವಾಣಿ ಕರೆ ಮೂಲಕ ಮಾತನಾಡಿ ಸಾಂತ್ವನ ಹೇಳಿದ್ದೇನೆ. ನವೀನ ಅವರ ಮೃತದೇಹವನ್ನು ಭಾರತಕ್ಕೆ ತರಿಸಿಕೊಳ್ಳುವ ಎಲ್ಲ ಪ್ರಯತ್ನ ನಡೆಸಲಾಗುವುದು. ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದ್ದು, ಉಳಿದ ವಿಧ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಎಲ್ಲ ರೀತಿಯ ಪ್ರಯತ್ನ ನಡೆಸಲಾಗುತ್ತಿದೆ," ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.












Click it and Unblock the Notifications