Farmers Protest Live Updates: ರೈತರ ಟ್ರ್ಯಾಕ್ಟರ್ ಜಾಥಾ ವೇಳೆ ಗಲಭೆ; ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ
ನವದೆಹಲಿ, ಜನವರಿ 26: ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ರೈತರ ಹೋರಾಟ 63ನೇ ದಿನಕ್ಕೆ ಕಾಲಿಟ್ಟಿದೆ. ಗಣರಾಜ್ಯೋತ್ಸವದಂದು ರಾಜಧಾನಿಯಲ್ಲಿ ರೈತರು ಹಮ್ಮಿಕೊಂಡಿದ್ದ ಟ್ರ್ಯಾಕ್ಟರ್ ಜಾಥಾ ಗಲಭೆಗೆ ತಿರುಗಿದೆ.
ದೆಹಲಿ ಮತ್ತು ಹರ್ಯಾಣ ನಡುವೆ ಇರುವ ಸಿಂಘು ಗಡಿಯಲ್ಲಿ ದೊಡ್ಡಮಟ್ಟದಲ್ಲಿ ಗದ್ದಲ ಉಂಟಾಗಿದೆ. ಜತೆಗೆ ದೆಹಲಿಯ ಪಶ್ಚಿಮ ಭಾಗದಲ್ಲಿನ ಟಿಕ್ರಿ ಗಡಿಯಲ್ಲಿಯೂ ಇದೇ ಉದ್ವಿಗ್ವ ಪರಿಸ್ಥಿತಿ ಉಂಟಾಗಿದ್ದು, ರೈತರು ಟ್ರ್ಯಾಕ್ಟರ್ ಗಳೊಂದಿಗೆ ರಾಜಧಾನಿಗೆ ನುಗ್ಗಿದ್ದಾರೆ. ದೆಹಲಿಯ ರಾಜಪಥದಲ್ಲಿ ಗಣರಾಜ್ಯೋತ್ಸವ ಪಥಸಂಚಲನ ಮುಗಿದ ಬಳಿಕ ಮಧ್ಯಾಹ್ನ 12 ಗಂಟೆ ನಂತರ ರೈತರ ಟ್ರ್ಯಾಕ್ಟರ್ ಮೆರವಣಿಗೆಗೆ ಅನುಮತಿ ನೀಡಲಾಗಿತ್ತು. ಆದರೆ ಬೆಳಿಗ್ಗೆ ಎಂಟು ಗಂಟೆಯ ಸುಮಾರಿಗೇ ಗಡಿಯಲ್ಲಿ ಬೃಹತ್ ಸಂಖ್ಯೆಯಲ್ಲಿ ರೈತರು ಸೇರಿದ್ದರು.
ಗಣತಂತ್ರ ದಿನದ ಪರೇಡ್ ಮುಗಿದ ನಂತರ ದೆಹಲಿ ಹೊರಭಾಗದಲ್ಲಿ ರೈತರಿಗೆ ಟ್ರ್ಯಾಕ್ಟರ್ ಪರೇಡ್ ನಡೆಸಲು ಪೊಲೀಸರು ಷರತ್ತುಬದ್ದ ಅನುಮತಿ ನೀಡಿದ್ದರು. ಆದರೆ, ಹನ್ನೊಂದು ಗಂಟೆಯಾದರೂ ಪರೇಡ್ ಆರಂಭಿಸಲು ಪೊಲೀಸರು ಅನುಮತಿ ನೀಡಲಿಲ್ಲ. ಈ ಕಾರಣಕ್ಕೆ ರೈತರು ಆಕ್ರೋಶಗೊಂಡಿದ್ದಾರೆ ಎನ್ನಲಾಗಿದೆ.
ಕೇಂದ್ರ ಪರಿಚಯಿಸಿರುವ ಕೃಷಿ ಮಾರುಕಟ್ಟೆ ಕಾಯ್ದೆ, ಬೆಲೆ ಭರವಸೆಗಳ ಒಪ್ಪಂದ ಮತ್ತು ಕೃಷಿ ಸೇವೆಗಳ ಕಾಯ್ದೆ, ಅಗತ್ಯ ಸರಕು (ತಿದ್ದುಪಡಿ) ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ನವೆಂಬರ್ 26ರಿಂದಲೂ ದೆಹಲಿ ಗಡಿಗಳಲ್ಲಿ ಸುಮಾರು 40 ರೈತ ಸಂಘಟನೆಯ ರೈತ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ...