ಬಿಜೆಪಿಗೇಕೆ ಮತ: ಪಂಚ ರಾಜ್ಯಗಳಲ್ಲಿ ಕೇಂದ್ರದ ವಿರುದ್ಧ ರೈತರ ಮಾಸ್ಟರ್ ಪ್ಲ್ಯಾನ್!
ನವದೆಹಲಿ, ಮಾರ್ಚ್. 11: ದೇಶದ ನಾಲ್ಕು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಧಾನಸಭಾ ಚುನಾವಣೆಗೆ ರಾಷ್ಟ್ರೀಯ ಪಕ್ಷ ಮತ್ತು ಪ್ರಾದೇಶಿಕ ಪಕ್ಷಗಳೆಲ್ಲ ಅಣಿ ಆಗುತ್ತಿವೆ. ಇದರ ಮಧ್ಯೆ ಭಾರತೀಯ ಜನತಾ ಪಕ್ಷವನ್ನೇ ಬೆಚ್ಚಿ ಬೀಳಿಸುವಂತಾ ಮಾಸ್ಟರ್ ಪ್ಲ್ಯಾನ್ ಅನ್ನು ರೈತರು ರೆಡಿ ಮಾಡುತ್ತಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯ ಮೂರು ಗಡಿ ಪ್ರದೇಶಗಳಲ್ಲಿ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕು ಎಂದು ಪ್ರತಿಭಟನೆ ನಡೆಸುತ್ತಲೇ ಇದ್ದಾರೆ. ರೈತರ ಹೋರಾಟಕ್ಕೆ 105 ದಿನಗಳೇ ಪೂರೈಸಿದರೂ ಬಿಜೆಪಿ ಸರ್ಕಾರವು ರೈತರ ಮನವಿಗೆ ಸ್ಪಂದಿಸುತ್ತಿಲ್ಲ.
ತಮ್ಮ ಮನವಿಗೆ ಸ್ಪಂದಿಸದ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ದೇಶದ ಅನ್ನದಾತರು ಕೆರಳಿ ಕೆಂಡವಾಗಿದ್ದಾರೆ. ಪಂಚ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಸಮರ ಸಾರುವುದಕ್ಕಾಗಿಯೇ ಮಾಸ್ಟರ್ ಪ್ಲ್ಯಾನ್ ರೂಪಿಸಿದ್ದಾರೆ. ಕೇಂದ್ರದ ವಿರುದ್ಧ ರೈತರ ಹೋರಾಟ ಹೇಗಿರಲಿದೆ. ಕೇಂದ್ರಕ್ಕೆ ರೈತರ ತಂತ್ರದಿಂದ ಹೊಡೆತ ಬೀಳುತ್ತಾ. ರೈತರು ಮತ್ತು ಬಿಜೆಪಿ ವಿರುದ್ಧದ ಸಮರದಲ್ಲಿ ಯಾರಿಗೆ ನಿಜವಾದ ಗೆಲವು ಸಿಗಬಹುದು ಎನ್ನುವುದರ ಕುರಿತು ಒಂದು ವಿಶ್ಲೇಷಣಾತ್ಮಕ ವರದಿ ಇಲ್ಲಿದೆ ನೋಡಿ.

1 ಕೇಂದ್ರಾಡಳಿತ ಪ್ರದೇಶ, 4 ರಾಜ್ಯಗಳಲ್ಲಿ ಚುನಾವಣೆ
ಭಾರತದ ನಾಲ್ಕು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ಫೆಬ್ರವರಿ.26ರಂದು ದಿನಾಂಕ ಪ್ರಕಟಿಸಿತು. ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಅಸ್ಸಾಂ ಹಾಗೂ ಪುದುಚೇರಿ ಕೇಂದ್ರಾಡಳಿತ ಪ್ರದೇಶದಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್.27ರಿಂದ ಆರಂಭವಾಗುವ ಚುನಾವಣೆ ಏಪ್ರಿಲ್.29ರವರೆಗೂ ನಡೆಯಲಿದ್ದು, ಅಂತಿಮವಾಗಿ ಮೇ.02ರಂದು ಫಲಿತಾಂಶ ಹೊರ ಬೀಳಲಿದೆ.

ಅನ್ನದಾತರ ಪ್ರತಿಭಟನೆಗೆ ಸ್ಪಂದಿಸದ ಸರ್ಕಾರಕ್ಕೆ ಬಿಸಿ
ವಿವಾದಿತ ಕೃಷಿ ಸಂಬಂಧಿತ ಕಾಯ್ದೆಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮೈಕೊರೆಯುವ ಚಳಿಯಲ್ಲಿ ಪ್ರತಿಭಟನೆಗೆ ಕುಳಿತ ನೂರಾರು ರೈತರು ಸ್ಥಳದಲ್ಲೇ ಪ್ರಾಣತ್ಯಾಗ ಮಾಡಿದ್ದಾರೆ. 105 ದಿನಗಳಿಂದ ಹೋರಾಟ ನಡೆಸುತ್ತಿರುವ ರೈತರಿಗೆ ಮಾತ್ರ ಕೇಂದ್ರ ಸರ್ಕಾರವು ಯಾವುದೇ ರೀತಿ ಸ್ಪಂದಿಸುತ್ತಿಲ್ಲ. ಈ ಹಿನ್ನೆಲೆ ಪ್ರಧಾನಿ ಮೋದಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರೈತರು ಮಾಸ್ಟರ್ ಪ್ಲ್ಯಾನ್ ರೂಪಿಸಿದ್ದಾರೆ.

ರೈತರಿಗೆ ಸ್ಪಂದಿಸದ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ತಂಡ
ಒಂದು ಕಡೆಯಲ್ಲಿ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಅಸ್ಸಾಂ ಹಾಗೂ ಪುದುಚೇರಿ ಹೀಗೆ ಪಂಚರಾಜ್ಯಗಳಲ್ಲಿ ಗೆಲುವಿಗೆ ಭಾರತೀಯ ಜನತಾ ಪಕ್ಷವು ತನ್ನದೇ ಆದ ಲೆಕ್ಕಾಚಾರ ಹಾಕಿಕೊಂಡಿದೆ. ಇನ್ನೊಂದು ಕಡೆಯಲ್ಲಿ ಬಿಜೆಪಿ ವಿರುದ್ಧ ಇದೇ ಪಂಚರಾಜ್ಯಗಳಲ್ಲಿ ಜಾಗೃತಿ ಮೂಡಿಸುವುದಕ್ಕೆ ರೈತರು ವಿಶೇಷ ತಂಡಗಳನ್ನು ರಚಿಸಲಾಗುತ್ತದೆ ಎಂದು ಭಾರತೀಯ ಕಿಸಾನ್ ಒಕ್ಕೂಟದ ಮುಖಂಡ ಬಲ್ಬೀರ್ ಸಿಂಗ್ ರಾಜೇವಾಲಾ ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷದ ವಿರುದ್ಧ ರೈತರಿಂದ ಜಾಗೃತಿ
ವಿಧಾನಸಭಾ ಚುನಾವಣೆಗಳು ನಡೆಯುತ್ತಿರುವ ಪಂಚ ರಾಜ್ಯಗಳಿಗೆ ರೈತರ ತಂಡಗಳು ಭೇಟಿ ನೀಡಲಿವೆ. ನಾವು ಯಾವುದೇ ಪಕ್ಷದ ಪರವಾಗಿ ಅಲ್ಲಿ ಪ್ರಚಾರ ಮಾಡುವುದಿಲ್ಲ. ಬದಲಿಗೆ ರೈತರ ಮನವಿಗೆ ಸ್ಪಂದಿಸದ ಬಿಜೆಪಿಗೆ ಮಾತ್ರ ಮತ ನೀಡಬೇಡಿ ಎಂದು ಮತದಾರರಲ್ಲಿ ಮನವಿ ಮಾಡಿಕೊಳ್ಳುತ್ತೇವೆ. ರೈತರಿಗೆ ಸ್ಪಂದಿಸದ ಸರ್ಕಾರದ ನಡೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತೇವೆ ಎಂದು ಭಾರತೀಯ ಕಿಸಾನ್ ಒಕ್ಕೂಟದ ಮುಖಂಡ ಬಲ್ಬೀರ್ ಸಿಂಗ್ ರಾಜೇವಾಲಾ ಎಚ್ಚರಿಕೆ ನೀಡಿದ್ದಾರೆ.

ಬಂಗಾಳದಲ್ಲಿ ಬಲ್ಬೀರ್ ಸಿಂಗ್ ರಾಜೇವಾಲಾ ಜಾಗೃತಿ
ಬಿಜೆಪಿ ವಿರುದ್ಧ ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಒಂದೊಂದು ರೈತ ತಂಡಗಳು ಒಂದೊಂದು ರಾಜ್ಯಕ್ಕೆ ತೆರಳಿ ಮತದಾರರಲ್ಲಿ ಜಾಗೃತಿ ಮೂಡಿಸಲಿವೆ. ನಾನು ಪಶ್ಚಿಮ ಬಂಗಾಳಕ್ಕೆ ತೆರಳಿ ಅಲ್ಲಿ ಬಿಜೆಪಿ ಸರ್ಕಾರದ ನಡೆಯ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯವನ್ನು ಮಾಡುತ್ತೇವೆ ಎಂದು ಭಾರತೀಯ ಕಿಸಾನ್ ಒಕ್ಕೂಟದ ಮುಖಂಡ ಬಲ್ಬೀರ್ ಸಿಂಗ್ ರಾಜೇವಾಲಾ ತಿಳಿಸಿದ್ದಾರೆ.

ರೈತರ ವಿರೋಧಕ್ಕೆ ಕಾರಣವಾಗಿರುವ ಕಾಯ್ದೆಗಳು?
ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳನ್ನು ಜಾರಿಗೊಳಿಸುವುದು ಬೇಡ ಎಂದು ರೈತರು ಆಗ್ರಹಿಸುತ್ತಿದ್ದಾರೆ.

ನವದೆಹಲಿಯಲ್ಲಿನ ರೈತರ ಹೋರಾಟಕ್ಕೆ 105 ದಿನ
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ರೈತರ ಹೋರಾಟ ನಿರಂತರವಾಗಿದೆ. ಕಳೆದ ನವೆಂಬರ್.26ರಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಪ್ರತಿಭಟನೆ ಆರಂಭವಾಗಿ 105 ದಿನಗಳೇ ಕಳೆದಿವೆ.

ಕೇಂದ್ರ ಸರ್ಕಾರ ಮತ್ತು ರೈತರ ನಡುವಿನ ಸಂಧಾನ ಮಾತುಕತೆ
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಜಾರಿಗೊಳಿಸಲು ಹೊರಟಿರುವ ಕೃಷಿ ಕಾಯ್ದೆಗಳು ರೈತರ ಆದಾಯವನ್ನು ದ್ವಿಗುಣಗೊಳಿಸುವ ಉದ್ದೇಶವನ್ನು ಹೊಂದಿವೆ. ಕೇಂದ್ರ ಸರ್ಕಾರ ತನ್ನ ನಿಲುವಿಗೆ ಬದ್ಧವಾಗಿದೆ ಎಂದು ಈಗಾಗಲೇ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹಲವು ಬಾರಿ ಪುನರುಚ್ಛರಿಸಿದ್ದಾರೆ. ರೈತರು ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿಗಳ ಜೊತೆಗೆ 12 ಸುತ್ತಿನ ಸಂಧಾನ ಸಭೆ ನಡೆದರೂ ಸಹ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಸಾಧ್ಯವಾಗಿಲ್ಲ.












Click it and Unblock the Notifications