ಕಾವೇರಿ ನದಿ ನೀರು ಹಂಚಿಕೆ; ಕೇಂದ್ರದಿಂದ ಸುಪ್ರೀಂಕೋರ್ಟಿಗೆ ಅಫಿಡವಿಟ್
ಕಾವೇರಿ ನಿರ್ವಹಣಾ ಮಂಡಳಿ ರಚಿಸುವ ವಿಚಾರದಲ್ಲಿ ಕೇಂದ್ರ ಸರಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದೆ. ಕಾವೇರಿ ನಿರ್ವಹಣಾ ಮಂಡಳಿ ರಚನೆ ಅಧಿಕಾರ ಸಂಸತ್ತಿಗೆ ಮಾತ್ರ ಇರುವುದರಿಂದ, ಯಾವುದೇ ತಿದ್ದುಪಡಿಗಳನ್ನು ಸಂಸತ್ತಿನಲ್ಲೇ ಮಾಡಬೇಕು
ನವದೆಹಲಿ, ಸೆ 19: ಕಾವೇರಿ ನಿರ್ವಹಣಾ ಮಂಡಳಿ ರಚಿಸುವ ವಿಚಾರದಲ್ಲಿ ಕೇಂದ್ರ ಸರಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದೆ. ಕಾವೇರಿ ನದಿನೀರು ಹಂಚಿಕೆ ವಿಚಾರದಲ್ಲಿನ ಅರ್ಜಿ ವಿಚಾರಣೆ ವೇಳೆ ಕೇಂದ್ರ ತನ್ನ ನಿಲುವನ್ನು ನ್ಯಾಯಾಲಯಕ್ಕೆ ಸ್ಪಷ್ಟಪಡಿಸಿದೆ.
ಕೇಂದ್ರ ಸರ್ಕಾರದ ಪರ ವಕೀಲ ರಂಜಿತ್ ಕುಮಾರ್ ವಾದ ಮಂಡಿಸಿ, ಕಾವೇರಿ ನಿರ್ವಹಣಾ ಮಂಡಳಿ ರಚನೆಯ ಅಧಿಕಾರ ಸಂಸತ್ತಿಗೆ ಮಾತ್ರ ಇರುವುದರಿಂದ, ಈ ಸಂಬಂಧ ಯಾವುದೇ ತಿದ್ದುಪಡಿಗಳನ್ನು ಸಂಸತ್ತಿನಲ್ಲೇ ಮಾಡಬೇಕು ಎಂದು ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಆದಾಗ್ಯೂ, ಈ ವಿಚಾರದಲ್ಲಿ ಸರ್ವೋಚ್ಚ ನ್ಯಾಯಾಲಯ ಏನಾದಾರೂ ಆದೇಶ ನೀಡಿದರೆ, ಅದನ್ನು ಪಾಲಿಸಲಾಗುವುದು. ಮಂಡಳಿ ರಚಿಸುವ ವಿಚಾರದಲ್ಲಿ ತಿದ್ದುಪಡಿಗಳನ್ನು ಸಂಸತ್ತಿನಲ್ಲಿ ಮಾಡಬೇಕಾಗಿರುವುದರಿಂದ, ಈ ಬಗ್ಗೆ ಕರಡು ಸಿದ್ಧಪಡಿಸಿ ಸಲ್ಲಿಸಲಾಗಿದೆ ಎಂದು ವಕೀಲರು, ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದಾರೆ.
ನಿರ್ವಹಣಾ ಮಂಡಳಿ ರಚಿಸುವ ಅಧಿಕಾರ ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ ಎನ್ನುವ ಕೇಂದ್ರದ ಪರ ವಕಾಲತ್ತು ವಹಿಸಿಕೊಂಡಿರುವ ವಕೀಲರ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಾಲಯದ ಆದೇಶ ಪಾಲಿಸಬೇಕು ಎಂದು ಸೂಚಿಸಿದರು.
ಮಂಡಳಿ ರಚೆನೆ ಮತ್ತು ನೀರು ಬಿಡುಗಡೆ ವಿಚಾರದಲ್ಲಿ ನಾವು ಆದೇಶ ನೀಡಿದರೆ ನೀವು ಅದನ್ನು ಪಾಲಿಸಲೇಬೇಕಾಗುತ್ತದೆ ಎನ್ನುವ ನ್ಯಾ, ಮಿಶ್ರಾ ಅವರ ಎಚ್ಚರಿಕೆಗೆ, ನ್ಯಾಯಾಲಯ ನೀಡುವ ತೀರ್ಪನ್ನು ಕೇಂದ್ರ ಮತ್ತು ಸಂಬಂಧಪಟ್ಟ ರಾಜ್ಯ ಸರ್ಕಾರಗಳು ಪಾಲಿಸುತ್ತವೆ ಎಂದು ರಂಜಿತ್ ಮಾರ್ ಸರ್ವೋಚ್ಚ ನ್ಯಾಯಾಲಯಕ್ಕೆ ಭರವಸೆ ನೀಡಿದ್ದಾರೆ.
ಕಾವೇರಿ ನದಿ ನಿರ್ವಹಣಾ ಮಂಡಳಿ ರಚನೆಗೆ ಸಂಬಂಧಿಸಿದಂತೆ ತಗಾದೆ ತೆಗೆದಿದ್ದ ತಮಿಳುನಾಡು, ನೀರು ಹಂಚಿಕೆ ಪ್ರಕ್ರಿಯೆಗೆ ಅಗತ್ಯವಿರುವ ಮಂಡಳಿಯನ್ನು ಕೂಡಲೇ ರಚಿಸುವಂತೆ ಆದೇಶಿಸಬೇಕು ಎಂದು ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಿತ್ತು.
ನಿರ್ವಹಣಾ ಮಂಡಳಿ ರಚನೆಗೆ ಸಂಬಂಧಿಸಿದಂತೆ ಹಲವು ಬಾರಿ ವಿಸ್ತೃತ ಚರ್ಚೆ ನಡೆಸಲಾಗಿತ್ತು, ಮಂಡಳಿ ರಚನೆಯು ಕೇಂದ್ರ ಸರ್ಕಾರಕ್ಕೆ ಬಿಟ್ಟ ವಿಚಾರ ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟಪಡಿಸಿತ್ತು. ಈ ವಿಷಯ ಮತ್ತೆ ಪ್ರಸ್ತಾಪವಾಗಿರುವುದರಿಂದ, ಕೇಂದ್ರ ಸರ್ಕಾರಕ್ಕೆ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿತ್ತು.