ಕೋವಿಡ್ 19 ನಿರ್ವಹಣೆಗೆ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಗಳ ನೆರವು?
ನವದೆಹಲಿ, ಮೇ 2: ಕೊರೊನಾ ಸೋಂಕು ದೇಶದಲ್ಲಿ ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ , ಸೋಂಕು ನಿರ್ವಹಣೆಗೆ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಗಳ ನೆರವು ಪಡೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರು ತಜ್ಞರ ಜತೆ ಈ ಕುರಿತು ಸಭೆ ನಡೆಸಿದ್ದಾರೆ, ಸಭೆಯಲ್ಲಿ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಗಳು, ನರ್ಸಿಂಗ್ ಕೋರ್ಸ್ ವಿದ್ಯಾರ್ಥಿಗಳನ್ನು ಕೋವಿಡ್ 19 ಕರ್ತವ್ಯದಲ್ಲಿ ಪಾಲ್ಗೊಳ್ಳಲು ಸೂಚನೆ ನೀಡಲು ನಿರ್ಧರಿಸಿದ್ದಾರೆ.
ಭಾರತದಲ್ಲಿ ಒಂದೇ ದಿನ 3,92,488 ಮಂದಿಗೆ ಕೊರೊನಾವೈರಸ್
ಈ ಕುರಿತು ಮೇ 3 ರಂದು ಸೋಮವಾರ ಅಧಿಕೃತವಾಗಿ ಆದೇಶ ಹೊರಬೀಳಲಿದೆ. ಕೊರೊನಾ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ನೀಟ್ ಮುಂದೂಡುವುದು ಹಾಗೂ ಕೋವಿಡ್ 19 ಪರಿಸ್ಥಿತಿ ನಿಭಾಯಿಸಲು ಎಂಬಿಬಿಎಸ್ ಪಾಸ್ ಔಟ್ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ನೆರವು ಪಡೆಯುವುದು ಸೇರಿದಂತೆ ಹಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.
ಶನಿವಾರ ದೆಹಲಿಯ ಬಾತ್ರಾ ಆಸ್ಪತ್ರೆಯಲ್ಲಿ ವೈದ್ಯರೊಬ್ಬರು ಸೇರಿದಂತೆ 12 ಮಂದಿ ಆಮ್ಲಜನಕ ಕೊರತೆಯಿಂದ ಮೃತಪಟ್ಟಿದ್ದರು. ಅಲ್ಲದೇ ದೆಹಲಿಯ ಖಾಸಗಿ ಆಸ್ಪತ್ರೆಯ ವಿಶ್ರಾಂತ ವೈದ್ಯರೊಬ್ಬರು ವಿಪರೀತ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿರುವ ಘಟನೆಯು ನಡೆದಿದೆ.
ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಲೆಯ ಹರಡುವಿಕೆ ವೇಗ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ 3,92,488 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ದೇಶದಲ್ಲಿ ಒಂದೇ ದಿನ 3689 ಮಂದಿ ಕೊರೊನಾ ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಇದೇ ಅವಧಿಯಲ್ಲಿ 3,07,865 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
Recommended Video
ಭಾನುವಾರದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು 1,95,57,457 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕೊವಿಡ್-19 ಮಹಾಮಾರಿಗೆ ಈವರೆಗೂ 2,15,542 ಸೋಂಕಿತರು ಬಲಿಯಾಗಿದ್ದು, 1,59,92,271 ಮಂದಿ ಗುಣಮುಖರಾಗಿದ್ದಾರೆ. ಇದರ ಹೊರತಾಗಿ 33,49,644 ಸಕ್ರಿಯ ಪ್ರಕರಣಗಳಿವೆ.