ಭುವನೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ದುರಂತ, 24 ಸಾವು
ಭುವನೇಶ್ವರ, ಅಕ್ಟೋಬರ್ 18: ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಬೆಂಕಿ ದುರಂತವಾಗಿ ಇಪ್ಪತ್ನಾಲ್ಕು ರೋಗಿಗಳು ಮೃತಪಟ್ಟಿದ್ದು, ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಆಸ್ಪತ್ರೆಯ ಮೊದಲನೇ ಮಹಡಿಯ ಡಯಾಲಿಸಿಸ್ ವಾರ್ಡ್ ನಲ್ಲಿ ಶಾರ್ಟ್ ಸರ್ಕೀಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡು, ಆ ನಂತರ ತೀವ್ರ ನಿಗಾ ಘಟಕ ಇತರೆಡೆಗೂ ವ್ಯಾಪಿಸಿದೆ.
ಈ ಅಸ್ಪತ್ರೆಯಲ್ಲಿ ಐನೂರಕ್ಕೂ ಹೆಚ್ಚು ರೋಗಿಗಳಿದ್ದರು. ಎಲ್ಲ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿಷಾದ ವ್ಯಕ್ತಪಡಿಸಿದ್ದು, ಗಾಯಾಳುಗಳನ್ನು ಏಮ್ಸ್ ಗೆ ಸ್ಥಳಾಂತರಿಸುವಂತೆ ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರಿಗೆ ಸೂಚಿಸಿದ್ದಾರೆ.
ಭುವನೇಶ್ವರದ ಏಮ್ಸ್ ನಿರ್ದೇಶಕರ ಜತೆ ಮಾತನಾಡಿದ್ದು, ರೋಗಿಗಳಿಗೆ ಎಲ್ಲ ಅಗತ್ಯ ನೆರವು ನೀಡಲಾಗುವುದು ಎಂದು ನಡ್ಡಾ ತಿಳಿಸಿದ್ದಾರೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ರೋಗಿಗಳನ್ನು ಭೇಟಿ ಮಾಡಿದ್ದು, ಘಟನೆ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ಗಾಯಾಳುಗಳ ಚಿಕಿತ್ಸೆ ಹಾಗೂ ಘಟನೆಗೆ ಸಂಬಂಧಿಸಿದಂತೆ ತೆಗೆದುಕೊಂಡ ಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ವಿವರಿಸಿರುವುದಾಗಿ ಪಟ್ನಾಯಕ್ ಹೇಳಿದ್ದಾರೆ.