ಪಂಚ ರಾಜ್ಯಗಳು ಚುನಾವಣೆ ಮುಕ್ತಾಯ; ಮಹತ್ವದ ಹೆಜ್ಜೆ ಇಟ್ಟ ಕಾಂಗ್ರೆಸ್!
ನವದೆಹಲಿ, ಮಾರ್ಚ್ 07: ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಮುಕ್ತಾಯವಾಗುತ್ತಿದ್ದಂತೆ ಕಾಂಗ್ರೆಸ್ ಮಹತ್ವದ ಹೆಜ್ಜೆ ಇಟ್ಟಿದೆ. ಪಕ್ಷದ ನಾಯಕ ರಾಹುಲ್ ಗಾಂಧಿ ತಂತ್ರದಂತೆ ಈ ಹೆಜ್ಜೆ ಇಡಲಾಗಿದೆ. ದೆಹಲಿಯಿಂದ ಪಕ್ಷದ ನಾಯಕರು ಚುನಾವಣೆ ಫಲಿತಾಂಶ ಪ್ರಕಟವಾಗುವ ರಾಜ್ಯಗಳಿಗೆ ಭೇಟಿ ನೀಡುತ್ತಿದ್ದಾರೆ.
ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ನಡೆಯುವ ವಿದ್ಯಮಾನಗಳ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷ ಈ ತೀರ್ಮಾನ ಕೈಗೊಂಡಿದೆ. ದೆಹಲಿಯಿಂದ ಪಕ್ಷದ ನಾಯಕರು ಗೋವಾ, ಮಣಿಪುರ, ಉತ್ತರಾಖಂಡ, ಪಂಜಾಬ್ ರಾಜ್ಯಗಳಿಗೆ ತೆರಳಲಿದ್ದಾರೆ.
ಈ ಹಿಂದೆ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಮಾಡಿದ ತಪ್ಪನ್ನು ಮಾಡಬಾರದು ಎಂದು ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯಗಳಿಗೆ ಕಾಂಗ್ರೆಸ್ ನಾಯಕರು ಭೇಟಿ ನೀಡುತ್ತಿದ್ದಾರೆ. ಒಂದು ವೇಳೆ ಅತಂತ್ರ ಫಲಿತಾಂಶ ಬಂದರೆ ತುರ್ತು ಸೂಕ್ತ ತೀರ್ಮಾನ ಕೈಗೊಳ್ಳಲು ಈ ನಾಯಕರು ನೆರವಾಗಲಿದ್ದಾರೆ.

ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಬೇರೆ ಪಕ್ಷಗಳ ಜೊತೆ ಮೈತ್ರಿ ಸೇರಿದಂತೆ ಇತರ ತುರ್ತು ತೀರ್ಮಾನಗಳನ್ನು ಕೈಗೊಳ್ಳಲು ದೆಹಲಿಯಿಂದ ನಾಯಕರನ್ನು ವಿವಿಧ ರಾಜ್ಯಗಳಿಗೆ ಕಳಿಸಲಾಗುತ್ತಿದೆ. ಸದ್ಯ ಚುನಾವಣೆ ನಡೆದಿರುವ ರಾಜ್ಯಗಳಲ್ಲಿ ಪಂಜಾಬ್ನಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿದೆ.
ಗೋವಾ ಚುನಾವಣೆ ಕಲಿಸಿದ ಪಾಠ; ಕಾಂಗ್ರೆಸ್ ಈ ತೀರ್ಮಾನ ಕೈಗೊಳ್ಳಲು ಪ್ರಮುಖ ಕಾರಣ 2017ರ ಗೋವಾ ವಿಧಾನಸಭೆ ಚುನಾವಣೆ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 17 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡಪಕ್ಷವಾಗಿ ಹೊರಹೊಮ್ಮಿತ್ತು. ಆದರೆ ಸರ್ಕಾರ ರಚನೆ ಮಾಡಲು ವಿಫಲವಾಗಿತ್ತು.
ಇದಕ್ಕೆ ಮೈತ್ರಿ ವಿಚಾರದಲ್ಲಿ ಕಾಂಗ್ರೆಸ್ ಕೈಗೊಂಡ ವಿಳಂಬ ತೀರ್ಮಾನವೇ ಕಾರಣವಾಗಿತ್ತು. ಚುನಾವಣೆಯಲ್ಲಿ 13 ಸ್ಥಾನಗಳಲ್ಲಿ ಜಯಗಳಿಸಿದ್ದ ಬಿಜೆಪಿ ಚಿಕ್ಕ ಪಕ್ಷಗಳು, ಪಕ್ಷೇತರ ಶಾಸಕರ ಬೆಂಬಲ ಪಡೆದು ಗೋವಾದಲ್ಲಿ ಸರ್ಕಾರ ರಚನೆ ಮಾಡಿತ್ತು. ಅತಿದೊಡ್ಡ ಪಕ್ಷವಾದ ಕಾಂಗ್ರೆಸ್ ಪ್ರತಿಪಕ್ಷದ ಸ್ಥಾನದಲ್ಲಿ ಕುಳಿತಿತ್ತು.
ಈ ಬಾರಿಯ ಚುನಾವಣಾ ಕಣಕ್ಕಿಳಿದಿರುವ ಎಲ್ಲಾ ಅಭ್ಯರ್ಥಿಗಳು ರಾಹುಲ್ ಗಾಂಧಿ ಸಮ್ಮುಖದಲ್ಲಿ ಪಕ್ಷ ತೊರೆಯುವುದಿಲ್ಲ ಎಂದು ಪ್ರಮಾಣ ಮಾಡಿದ್ದಾರೆ. ಆದರೆ ಅಧಿಕಾರದ ಆಸೆಗಾಗಿ ಶಾಸಕರು ಪಕ್ಷಾಂತರ ಮಾಡುವ ಸಾಧ್ಯತೆಯನ್ನು ಎಂದಿಗೂ ತಳ್ಳಿಹಾಕುವಂತಿಲ್ಲ.
ಗೋವಾ ಹೊರತುಪಡಿಸಿ ಪಂಜಾಬ್, ಉತ್ತರಾಖಂಡ, ಮಣಿಪುರ ಮೂರು ರಾಜ್ಯಗಳ ಪೈಕಿ ಎರಡರಲ್ಲಿ ಗೆಲುವು ಸಾಧಿಸುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಪಕ್ಷವಿದೆ. ಆದರೆ ಈ ರಾಜ್ಯಗಳಲ್ಲಿ ಅತಂತ್ರ ಫಲಿತಾಂಶ ಬರುವ ಅಂದಾಜು ಇದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ರಾಜ್ಯಗಳಿಗೆ ನಾಯಕರನ್ನು ಕಳಿಸಿದೆ.
ಒಂದು ವೇಳೆ ರೆಸಾರ್ಟ್ ರಾಜಕೀಯ ಆರಂಭಗೊಂಡರೆ ಕಾಂಗ್ರೆಸ್ ಶಾಸಕರನ್ನು ರಾಜಸ್ಥಾನಕ್ಕೆ ಕಳಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಅಲ್ಲಿ ಕಾಂಗ್ರೆಸ್ ಸರ್ಕಾರವೇ ಇದ್ದು, ಶಾಸಕರನ್ನು ಕಾಪಾಡಿಕೊಳ್ಳಲು ಅನುಕೂಲವಾಗಲಿದೆ.












Click it and Unblock the Notifications