ಪಂಚರಾಜ್ಯಗಳಲ್ಲಿ ಬಹಿರಂಗ ಪ್ರಚಾರಕ್ಕೆ ನಿರ್ಬಂಧ ಮುಂದುವರಿಯುತ್ತಾ?
ನವದೆಹಲಿ, ಜನವರಿ 15: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆ ಪಂಚರಾಜ್ಯಗಳಲ್ಲಿ ಚುನಾವಣಾ ಪ್ರಚಾರ ಮತ್ತು ರ್ಯಾಲಿಗಳಿಗೆ ಅನುಮತಿ ನೀಡಬೇಕೇ ಬೇಡವೇ ಎಂಬ ಕುರಿತು ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಸುಶೀಲ್ ಚಂದ್ರ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.
ಶನಿವಾರ ರಾಜ್ಯಗಳ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆ ಕಾರ್ಯದರ್ಶಿ ಹಾಗೂ ಚುನಾವಣಾ ಆಯೋಗದ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಗುತ್ತಿದೆ. ಕಳೆದ ವಾರ ಐದು ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟಿಸಿದ ಆಯೋಗ, ಜನವರಿ 15ರವರೆಗೂ ಯಾವುದೇ ಚುನಾವಣಾ ಪ್ರಚಾರ, ರ್ಯಾಲಿ ಮತ್ತು ರೋಡ್ ಶೋಗಳನ್ನು ನಡೆಸದಂತೆ ನಿರ್ಬಂಧ ವಿಧಿಸಿತ್ತು.
ಪಂಜಾಬ್ ಚುನಾವಣೆ: ಪ್ರಚಾರ, ಪ್ರಣಾಳಿಕೆ ಸಮಿತಿ ರಚಿಸಿದ ಸೋನಿಯಾ ಗಾಂಧಿ
ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಜೊತೆ ಸಭೆ ನಡೆಸಿದ ಸುಶೀಲ್ ಚಂದ್ರ ದೇಶದಲ್ಲಿನ ಕೊವಿಡ್-19 ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡರು. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಏರಿಕೆ ಹಾಗೂ ಸೋಂಕು ಹರಡುವಿಕೆ ನಿಯಂತ್ರಿಸಲು ತೆಗೆದುಕೊಂಡಿರುವ ಮತ್ತು ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಚರ್ಚಿಸಲಾಗಿದೆ.
ರೋಡ್ ಶೋ, ಚುನಾವಣಾ ಮೆರವಣಿಗೆ ಬದಲು ವರ್ಚುವಲ್ ಸಭೆ
ಕೊೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹೆಚ್ಚುತ್ತಿರುವ ಹಿನ್ನೆಲೆ ಚುನಾವಣಾ ಪ್ರಚಾರಗಳನ್ನು ನಡೆಸುವುದಕ್ಕೆ ಕೇಂದ್ರ ಚುನಾವಣಾ ಆಯೋಗ ಈಗಾಗಲೇ ನಿರ್ಬಂಧ ವಿಧಿಸಿದೆ. ಇಂದಿನ ಪರಿಸ್ಥಿತಿಯನ್ನು ಅವಲೋಕಿಸಿಕೊಂಡು ನಂತರ ಬಹಿರಂಗ ಪ್ರಚಾರಕ್ಕೆ ಅವಕಾಶ ನೀಡಬೇಕೇ ಬೇಡವೇ ಎಂಬುದನ್ನು ತೀರ್ಮಾನಿಸಲಾಗುತ್ತದೆ. ಬಹುತೇಕ ಪ್ರಚಾರಕ್ಕೆ ನಿರ್ಬಂಧ ಮುಂದುವರಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ ರಾಜಕೀಯ ಪಕ್ಷಗಳು ಮತದಾರರ ಮನ ಸೆಳೆಯುವುದಕ್ಕೆ ಅನ್ಯಮಾರ್ಗಗಳನ್ನು ಹುಡುಕುತ್ತಿವೆ. ವರ್ಚುವಲ್ ಸಭೆಗಳ ಮೂಲಕ ಚುನಾವಣಾ ರಣತಂತ್ರಗಳನ್ನು ಹೆಣೆಯಲಾಗುತ್ತಿದೆ.
ದೇಶದಲ್ಲಿ ಕೊವಿಡ್-19 ಪ್ರಕರಣಗಳಲ್ಲಿ ಏರಿಕೆ
ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 2,68,833 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಖಾತ್ರಿಯಾಗಿದೆ. ನಿನ್ನೆಗಿಂತ ಇಂದು ಸೋಂಕಿತ ಪ್ರಕರಣಗಳ ಸಂಖ್ಯೆ 4,631 ಏರಿಕೆಯಾಗಿದೆ. ಒಂದು ದಿನದಲ್ಲಿ 1,22,684 ಸೋಂಕಿತರು ಗುಣಮುಖರಾಗಿದ್ದು, 14,17,820 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಪಾಸಿಟಿವಿಟಿ ದರ ಶೇ.16.66ರಷ್ಟಿದೆ.
ಐದು ರಾಜ್ಯಗಳ ಚುನಾವಣೆ ವೇಳೆ ಕೊರೊನಾ ನಿಯಂತ್ರಣ ಕ್ರಮ
ಜನವರಿ 15 ರವರೆಗೆ ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳು ಅಥವಾ ಚುನಾವಣೆಗೆ ಸಂಬಂಧಿಸಿದ ಯಾವುದೇ ಇತರ ಗುಂಪುಗಳು ಭೌತಿಕ ಮೆರವಣಿಗಳಿಗೆ ಅನುಮತಿಸಲಾಗುವುದಿಲ್ಲ. ECI ನಂತರ ಪರಿಸ್ಥಿತಿಯನ್ನು ಪರಿಶೀಲಿಸಬೇಕು ಮತ್ತು ಅದಕ್ಕೆ ಅನುಗುಣವಾಗಿ ಹೆಚ್ಚಿನ ಸೂಚನೆಗಳನ್ನು ನೀಡಬೇಕು. ಜನವರಿ 15 ರವರೆಗೆ ಯಾವುದೇ ರೋಡ್ಶೋಗಳು, ಪಾದಯಾತ್ರೆಗಳು, ಸೈಕಲ್ ಅಥವಾ ಬೈಕ್ ರ್ಯಾಲಿಗಳು ಮತ್ತು ಮೆರವಣಿಗೆಗಳನ್ನು ಅನುಮತಿಸಲಾಗುವುದಿಲ್ಲ. ಬೆಳಗ್ಗೆ 8 ಗಂಟೆಗೂ ಮೊದಲು ರಾತ್ರಿ 8 ಗಂಟೆ ನಂತರ ಯಾವುದೇ ರೀತಿ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸುವುದಕ್ಕೆ ಅವಕಾಶವಿಲ್ಲ. ವಿಧಾನಸಭೆ ಫಲಿತಾಂಶದ ನಂತರದಲ್ಲಿ ಯಾವುದೇ ರೀತಿ ವಿಜಯೋತ್ಸವ ನಡೆಸುವಂತಿಲ್ಲ ಎಂದು ತಿಳಿಸಿದ್ದರು.
ಐದು ರಾಜ್ಯಗಳಿಗೆ ಏಳು ಹಂತಗಳಲ್ಲಿ ಮತದಾನ
ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದೆ. ಪಂಜಾಬ್, ಉತ್ತರಾಖಂಡ ಮತ್ತು ಗೋವಾದಲ್ಲಿ ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ಮತದಾನ ನಡೆದರೆ, ಮಣಿಪುರದಲ್ಲಿ ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರ ಬೀಳಲಿದೆ.