HD Kumaraswamy To Meet Modi: ಮೋದಿ ಭೇಟಿ ಮಾಡಿದ ದೊಡ್ಡಗೌಡರ ಕುಟುಂಬ: ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದೇನು?
ನವದೆಹಲಿ,ಡಿಸೆಂಬರ್ 21: ಪಂಚ ರಾಜ್ಯಗಳ ಚುನಾವಣೆ ಬಳಿಕ ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ಭರ್ಜರಿಯಾಗಿ ತಯಾರಿ ನಡೆಸಿದೆ. ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿಯಾಗಿದ್ದು, ಗುರುವಾರ ಪ್ರಧಾನಿ ಮೋದಿ ಅವರನ್ನ ಜೆಡಿಎಸ್ ನಾಯಕರು ಭೇಟಿ ಸಾಕಷ್ಟು ಮಹತ್ವ ಪಡೆದಿದೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಭೇಟಿ ಸಂಸತ್ ಭವನದ ಪ್ರಧಾನಿಗಳ ಕಾರ್ಯಾಲಯದಲ್ಲಿ ನಡೆಯಿತು. ಪ್ರಧಾನಿಗಳ ಕಾರ್ಯಾಲಯಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಭೇಟಿಯಾಗಿ ಪ್ರಧಾನಿಗಳ ಜೊತೆಗೆ ವಿವಿಧ ವಿಷಯಗಳ ಬಗ್ಗೆ ಮಾತುಕತೆ ನಡೆಸಿದರು.

ರಾಜ್ಯ ರಾಜಕೀಯ ಪರಿಸ್ಥಿತಿಯ ಜತೆಗೆ ಕೊಬರಿ ಖರೀದಿ, ಕಾಡುಗೊಲ್ಲ ಜಾತಿಗೆ ಮೀಸಲಾತಿ ಸೌಲಭ್ಯ ಹಾಗೂ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಮಾಜಿ ಪ್ರಧಾನಿಗಳು ಮೋದಿ ಅವರ ಜತೆ ಚರ್ಚೆ ನಡೆಸಿದರು. ಇದೇ ವೇಳೆ ಕೊಬರಿಗೆ ಬೆಂಬಲ ಬೆಲೆ ನೀಡುವುದು ಹಾಗೂ ನಾಫೆಡ್ ಮೂಲಕ ಖರೀದಿ ಮಾಡಬೇಕು ಎಂಬ ಬಗ್ಗೆ ಪ್ರಧಾನಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಬಗ್ಗೆ ಪ್ರಧಾನಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಭೇಟಿ ಬಳಿಕ ಮಾಧ್ಯಮಗಳ ಜೊತೆಗಗೆ ಮಾಜಿ ಮಖ್ಯಮಂತ್ರಿ ಕುಮಾಸ್ವಾಮಿ ಅವರು ಮಾತನಾಡಿ, ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ವಿಚಾರದಲ್ಲಿ ಯಾವುದೇ ಸಮಸ್ಯೆ, ಗೊಂದಲ ಇಲ್ಲ. ಯಾವ ಯಾವ ಕ್ಷೇತ್ರದಲ್ಲಿ ಯಾರು ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವುದನ್ನು ನಾವೇ ಪರಸ್ಪರ ಕೂತು ಅಂತಿಮಗೊಳಿಸುತ್ತೇವೆ. ಆ ಬಗ್ಗೆ ಯಾವುದೇ ಸಮಸ್ಯೆ ಇಲ್ಲ. ಒಂದು ಕ್ಷೇತ್ರ ಹೆಚ್ಚೂ ಕಡಿಮೆ ಆಗಬಹುದು ಅಷ್ಟೇ. ಅದರಲ್ಲಿ ಯಾವುದೇ ಸಮಸ್ಯೆ ಆಗುವುದಿಲ್ಲ. ಮುಖ್ಯವಾಗಿ ಪರಸ್ಪರ ವಿಶ್ವಾಸ ಬೇಕು ಅಷ್ಟೇ, ಅದನ್ನು ನಾವು ಉಳಿಸಿಕೊಳ್ಳಬೇಕು. ಅದಕ್ಕೆ ಏನೆಲ್ಲಾ ಮಾಡಬೇಕೋ ಅದನ್ನು ಮಾಡುತ್ತೇನೆ. ಜನವರಿ ಅಂತ್ಯದ ಒಳಗೆ ನಾವು ಎಲ್ಲಾ ನಿರ್ಧಾರ ಮಾಡುತ್ತೇವೆ ಎಂದು ಕುಮಾರಸ್ವಾಮಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇವೇಗೌಡರು, ನಾನು, ಪ್ರಜ್ವಲ್, ರೇವಣ್ಣ, ಬಾಲಕೃಷ್ಣ ಭೇಟಿ ಮಾಡಿದ್ದೆವು. ಪ್ರತ್ಯೇಕವಾಗಿ ಪ್ರಧಾನಿಗಳ ಜತೆ ದೇವೇಗೌಡರು ಮತ್ತು ನಾನು ಬಹಳಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡಿದೆವು. ಮೋದಿ ಅವರು ದೇವೇಗೌಡರ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಮೋದಿಯವರು ನಮ್ಮ ಕುಟುಂಬದ ಬಗ್ಗೆ ಇಟ್ಟಿರುವ ವಿಶ್ವಾಸ ಇವತ್ತಿಗೂ ಕಡಿಮೆಯಾಗಿಲ್ಲ. ನಾನು ರಾಜ್ಯದ ಮುಖ್ಯಮಂತ್ರಿ ಆಗಿದ್ದಾಗ ಮೋದಿ ಅವರು ಹಲವಾರು ಉತ್ತಮ ಸಲಹೆಗಳನ್ನು ನೀಡಿದ್ದರು ಎಂದು ಸಂತಸ ವ್ಯಕ್ತಪಡಿಸಿದರು.
ಸಂಸತ್ ಭವನದಲ್ಲಿ ಯುವಕರು ಹೊಗೆ ಬಿಟ್ಟ ಪ್ರಕರಣವನ್ನೇ ದೊಡ್ಡದು ಮಾಡಿ ಕಾಂಗ್ರೆಸ್ ಪಕ್ಷ ಸಂಸತ್ ಕಲಾಪವನ್ನು ಹಾಳು ಮಾಡುತ್ತಿರುವುದು ಸರಿಯಲ್ಲ. ಈ ವಿಚಾರದಲ್ಲಿ ವಿಪಕ್ಷಗಳ ನಡೆ ಸರಿ ಇಲ್ಲ. ಖರ್ಗೆ, ಸಿದ್ದರಾಮಯ್ಯ ಅವರಿಗೆ ನಾನು ಕೇಳಬಯಸುತ್ತೇನೆ, ಸಂಸತ್ ಘಟನೆಯನ್ನೇ ಭದ್ರತಾ ವೈಫಲ್ಯ ಅನ್ನುವುದಾದರೆ ವಿಧಾನಸಭೆಯ ಅಧಿವೇಶನದ ವೇಳೆ ಒಬ್ಬ ವ್ಯಕ್ತಿ ಸದನದ ಒಳಕ್ಕೆ ಬಂದು ಒಂದೂವರೆ ಗಂಟೆ ಕಲಾಪದಲ್ಲಿ ಭಾಗಿಯಾಗಿದ್ದ. ಅದನ್ನು ಏನೆಂದು ಕರೆಯಬೇಕು ಎಂದು ತೀಕ್ಷ್ಣವಾಗಿ ಕುಮಾರಸ್ವಾಮಿ ಅವರು ಪ್ರಶ್ನಿಸಿದರು.
ಈ ವೈಫಲ್ಯದ ಬಗ್ಗೆ ಯಾಕೆ ಚರ್ಚೆ ಮಾಡುತ್ತಿಲ್ಲ ಕಾಂಗ್ರೆಸ್ಸಿಗರು? ಎಂದ ಕೇಳಿದ ಕುಮಾರಸ್ವಾಮಿ ಅವರು, ಇದೇ ವಿಧಾನಸಭೆಯ ಕಳೆದ ಕಲಾಪದಲ್ಲಿ ಸಭಾಧ್ಯಕ್ಷರ ಮೇಲೆ ಪೇಪರ್ ಎಸೆದರು ಎಂದು ವಿಪಕ್ಷಗಳ ಶಾಸಕರನ್ನು ಸದನದಿಂದ ಹೊರ ಹಾಕಿದ್ದರು. ಅದನ್ನು ಏನೆಂದು ಕರೆಯುತ್ತಾರೆ? ಅದು ಯಾವ ರಾಜಕೀಯ? ಒಬ್ಬ ದಲಿತ ಉಪಾಧ್ಯಕ್ಷರು ಅಂಥ ಹೇಳಿ ಶಾಸಕರನ್ನು ಸದನದಿಂದ ಹೊರ ಹಾಕಿದ್ದರು ಕರ್ನಾಟಕದಲ್ಲಿ. ಇದರ ಬಗ್ಗೆ ಯಾಕೆ ಪ್ರಶ್ನೆ ಮಾಡುತ್ತಿಲ್ಲ ಖರ್ಗೆಯವರೇ ಎಂದರು.












Click it and Unblock the Notifications