ವಿ ಸೋಮಣ್ಣ ಭೇಟಿಯಾದ ಡಿ ಕೆ ಸುರೇಶ್: ಚರ್ಚೆಯಾಗಿದ್ದೇನು?
ನವದೆಹಲಿ, ಜುಲೈ 04: ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಹೋದರ ಡಿ ಕೆ ಸುರೇಶ್ ಅವರು ಸ್ಪರ್ಧೆ ಮಾಡಿದ್ದು, ಬಿಜೆಪಿ ಅಭ್ಯರ್ಥಿ ಮಂಜುನಾಥ್ ಅವರ ವಿರುದ್ಧ ಸೋಲು ಅನುಭವಿಸಿದ್ದಾರೆ. ಇದೀಗ ಚನ್ನಪಟ್ಟಣ ಉಪಚುನಾವಣೆಯಲ್ಲಿ ಡಿ ಕೆ ಸುರೇಶ್ ಸ್ಪರ್ಧಿಸುತ್ತಾರೆ ಎನ್ನುವ ಮಾತು ಕೇಳಿ ಬಂದಿದ್ದು, ಈ ಹೊತ್ತಲ್ಲೇ ಬಿಜೆಪಿ ನಾಯಕ ಹಾಗೂ ಸಚಿವರಾದ ವಿ ಸೋಮಣ್ಣ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ.
ಹೌದು, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ ಹಿನ್ನೆಲೆ ಚನ್ನಪಟ್ಟಣ ಕ್ಷೇತ್ರ ತೆರವಾಗಿದೆ. ಈ ಹಿನ್ನೆಲೆಯಲ್ಲಿ ಚನ್ನಪಟ್ಟಣ ಕ್ಷೇತ್ರಕ್ಕೆ ಯಾವಾಗ ಬೇಕಾದ್ರೂ ಚುನಾವಣೆ ಘೋಷಣೆಯಾಗಬಹುದು. ಹೀಗಾಗಿ ರಾಜ್ಯದಲ್ಲಿ ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಯಾರಾಗಲಿದ್ದಾರೆ ಎಂದು ಕುತೂಹಲ ಮೂಡಿದೆ. ಅಭ್ಯರ್ಥಿ ಯಾರಾಗಬೇಕು ಎನ್ನುವ ಚರ್ಚೆಯ ಹೊತ್ತಲಿ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಅವರ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.

ಡಿ ಕೆ ಸುರೇಶ್ ಅವರು ದೆಹಲಿಯಲ್ಲಿ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಅವರನ್ನು ಬುಧವಾರ ಭೇಟಿ ಮಾಡಿದ್ದು, ರಾಜ್ಯದ ಬಾಕಿ ರೈಲ್ವೆ ಹಾಗೂ ಜಲ ಮಿಷನ್ ಯೋಜನೆಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರಕ್ಕೆ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಮನವಿ ಮಾಡಿದ್ದಾರೆ.
ಹೆಜ್ಜಾಲ, ಕನಕಪುರ ಹಾಗೂ ಚಾಮರಾಜನಗರ ಹೊಸ ರೈಲ್ವೆ ಮಾರ್ಗ ಈ ಹಿಂದೆಯೇ ಮಂಜೂರಾಗಿ, ಟೆಂಡರ್ ಪ್ರಕ್ರಿಯೆ ಆಗಿದ್ದರೂ ಕಾಮಗಾರಿ ಮಾತ್ರ ಆರಂಭವಾಗಿಲ್ಲ. ಅದೇ ರೀತಿ ರಾಜ್ಯದ ಅನೇಕ ರೈಲ್ವೆ ಯೋಜನೆಗಳು ಹತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿವೆ. ಈ ಯೋಜನೆಗಳಿಗೆ ಅನುದಾನ ನೀಡಿ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಎಂದು ಮಾಜಿ ಸಂಸದ ಡಿ ಕೆ ಸುರೇಶ್ ಅವರು ಕೋರಿದರು.
ಜಲ ಜೀವನ್ ಮಿಷನ್ ಅಡಿಯಲ್ಲಿ ಕುಡಿಯುವ ನೀರು ಯೋಜನೆಗಳಿಗೆ ಸಲ್ಲಿಸಿರುವ ಪ್ರಸ್ತಾವನೆಗಳು ಆರು ತಿಂಗಳಿಂದ ಬಾಕಿ ಉಳಿದಿವೆ. ಅವುಗಳಿಗೆ ಮಂಜೂರಾತಿ ಕೊಡಿ ಎಂದೂ ಡಿ ಕೆ ಸುರೇಶ್ ಅವರು ವಿನಂತಿ ಮಾಡಿದ್ದು, ಸಚಿವ ಸೋಮಣ್ಣ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.












Click it and Unblock the Notifications