ಕೊರೊನಾ ಪರಿಸ್ಥಿತಿ; ಬಡವರಿಗೆ 2 ತಿಂಗಳು ಉಚಿತ ಆಹಾರ ಧಾನ್ಯ ಘೋಷಿಸಿದ ಕೇಂದ್ರ
ನವದೆಹಲಿ, ಏಪ್ರಿಲ್ 23: ಕೊರೊನಾ ಎರಡನೇ ಅಲೆ ದೇಶದಲ್ಲಿ ಆತಂಕ ತಂದಿದ್ದು, ಮತ್ತೆ ಆರ್ಥಿಕ ಸಂಕಷ್ಟ ಎದುರಾಗುವ ಲಕ್ಷಣಗಳು ಗೋಚರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಬಡವರಿಗೆ ಎರಡು ತಿಂಗಳ ಕಾಲ ಉಚಿತ ಅಕ್ಕಿ, ಆಹಾರ ಧಾನ್ಯ ನೀಡಲಿರುವುದಾಗಿ ಘೋಷಣೆ ಮಾಡಿದೆ.
ಮೇ ಹಾಗೂ ಜೂನ್ ತಿಂಗಳಲ್ಲಿ ಐದು ಕೆ.ಜಿ. ಅಕ್ಕಿ ಹಾಗೂ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಲಾಗುವುದು ಎಂದು ತಿಳಿಸಿದೆ. 80 ಕೋಟಿ ಜನರು ಈ ಸೌಲಭ್ಯದ ಉಪಯೋಗ ಪಡೆದುಕೊಳ್ಳಲಿದ್ದಾರೆ. ಇದಕ್ಕಾಗಿ ಕೇಂದ್ರ ಸರ್ಕಾರ 26,000 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿರುವುದಾಗಿ ತಿಳಿದುಬಂದಿದೆ.
ಭಾರತದಲ್ಲಿ ನವೆಂಬರ್ ವರೆಗೂ 5 ಕೆಜಿ ಅಕ್ಕಿ, 1 ಕೆಜಿ ಬೇಳೆ ಉಚಿತ!
ಕಳೆದ ವರ್ಷವೂ ದೇಶದಲ್ಲಿ ಕೊರೊನಾದಿಂದಾಗಿ ಆರ್ಥಿಕ ಬಿಕ್ಕಟ್ಟು ಎದುರಾದಾಗ ಪ್ರಧಾನಿ ಗರೀಬ್ ಕಲ್ಯಾಣ್ ಯೋಜನೆಯಡಿ ಉಚಿತ ಆಹಾರ ಧಾನ್ಯವನ್ನು ಬಡವರಿಗೆ ನೀಡಲಾಗಿತ್ತು. ನವೆಂಬರ್ ತಿಂಗಳವರೆಗೆ ಈ ಯೋಜನೆಯನ್ನು ವಿಸ್ತರಿಸಲಾಗಿತ್ತು. ಇದೀಗ ದೇಶದಲ್ಲಿ ಕೊರೊನಾ ಎರಡನೇ ಅಲೆ ಬಿಕ್ಕಟ್ಟು ಸೃಷ್ಟಿಸಿದ್ದು, ಈ ಪರಿಸ್ಥಿತಿಯಲ್ಲಿ ದೇಶದ ಬಡವರಿಗೆ ಪೌಷ್ಟಿಕಾಂಶದ ಅಗತ್ಯವಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಶುಕ್ರವಾರ ದೇಶದಲ್ಲಿ 3.32 ಲಕ್ಷ ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಇದರ ಬೆನ್ನಲ್ಲೇ, ಪೌಷ್ಟಿಕ ಆಹಾರಕ್ಕೆ ಸಮಸ್ಯೆ ಆಗುವುದನ್ನು ತಪ್ಪಿಸಲು ಕೇಂದ್ರ ಸರ್ಕಾರ ಮತ್ತೆ ಗರೀಬ್ ಕಲ್ಯಾಣ ಯೋಜನೆಯಡಿ ಉಚಿತವಾಗಿ ಅಕ್ಕಿ ಹಾಗೂ ಆಹಾರ ಧಾನ್ಯ ನೀಡಲು ನಿರ್ಧರಿಸಿದೆ.