Terror Attack: ಸರ್ಕಾರದ ಕ್ರಮಕ್ಕೆ ಸಂಪೂರ್ಣ ಬೆಂಬಲ; ಸರ್ವಪಕ್ಷ ಸಭೆಯ ಬಳಿಕ ರಾಹುಲ್ ಗಾಂಧಿ ಘೋಷಣೆ
ಪಹಲ್ಗಾಮ್ ಹತ್ಯಾಕಾಂಡದ ಬಳಿಕ ಮುಂದಿನ ಕ್ರಮಗಳ ಬಗ್ಗೆ ಚರ್ಚೆ ನಡೆಸಲು ಗುರುವಾರ ನವದೆಹಲಿಯಲ್ಲಿ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ನಡೆಸಿತು. ಉಗ್ರರ ದಾಳಿಯಲ್ಲಿ ಎಲ್ಲಾ ಪಕ್ಷಗಳು ಒಕ್ಕೊರಲಾಗಿ ಖಂಡಿಸಿವೆ. ಕೇಂದ್ರ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡರೂ ಬೆಂಬಲ ನೀಡುವುದಾಗಿ ತಿಳಿಸಿವೆ.
ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಗುಪ್ತಚರ ಅಧಿಕಾರಿಗಳು ಸರ್ವಪಕ್ಷ ನಾಯಕರಿಗೆ ಪರಿಸ್ಥಿತಿಯನ್ನು ವಿವರಿಸಿವೆ. ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ ನಂತರ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾತನಾಡಿ, "ಎಲ್ಲಾ ರಾಜಕೀಯ ಪಕ್ಷಗಳು ಇದನ್ನು ಖಂಡಿಸಿವೆ ಮತ್ತು ಯಾವುದೇ ಕ್ರಮ ತೆಗೆದುಕೊಳ್ಳಲು ವಿರೋಧ ಪಕ್ಷಗಳು ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಿವೆ" ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಧ್ಯವಾದಷ್ಟು ಬೇಗ ಶಾಂತಿ ಪುನಃಸ್ಥಾಪಿಸಬೇಕೆಂದು ನಾವು ಬಯಸುತ್ತೇವೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ರಾಹುಲ್ ಗಾಂಧಿಯವರು ಶುಕ್ರವಾರ ಕಾಶ್ಮೀರದ ಅನಂತನಾಗ್ಗೆ ಭೇಟಿ ನೀಡಲಿದ್ದಾರೆ, ದಾಳಿಯಲ್ಲಿ ಗಾಯಗೊಂಡಿರುವರನ್ನು ಇಲ್ಲಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ರಾಹುಲ್ ಭೇಟಿ ಮಾಡಲಿದ್ದಾರೆ.
ಕೇಂದ್ರ ಸರ್ಕಾರದ ಜೊತೆ ಇದ್ದೇವೆ
ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಕೇಂದ್ರ ಸರ್ಕಾರದ ಜೊತೆ ನಿಲ್ಲುತ್ತೇವೆ. ದೇಶವು ಭಯೋತ್ಪಾದನೆ ವಿರುದ್ಧ ಒಗ್ಗಟ್ಟಾಗಿ ಹೋರಾಡಬೇಕು. ಎಲ್ಲಾ ರಾಜಕೀಯ ಪಕ್ಷಗಳ ಮುಖ್ಯಸ್ಥರು ಪ್ರಧಾನಿಗೆ ಸಂದೇಶ ಕೊಟ್ಟಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಸಂಸದ ಸುದೀಪ್ ಬಂಡೋಪಾಧ್ಯಾಯ ಹೇಳಿದರು.
"ಮಿನಿ ಸ್ವಿಟ್ಜರ್ಲೆಂಡ್" ಎಂದು ಕರೆಯಲ್ಪಡುವ ಬೈಸರನ್ನ ಸುಂದರವಾದ ಹುಲ್ಲುಗಾವಲುಗಳಲ್ಲಿ ಲಷ್ಕರ್-ಎ-ತೈಬಾ ಗುಂಪಿನ ಭಯೋತ್ಪಾದಕರು ಪ್ರವಾಸಿಗರ ಗುಂಪಿನ ಮೇಲೆ ಭಾನುವಾರ ಮಧ್ಯಾಹ್ನ ಗುಂಡು ಹಾರಿಸಿದ್ದರಿಂದ ಇಪ್ಪತ್ತಾರು ಜನರು ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡರು. ಮರಣ ಹೊಂದಿದ 25 ಪ್ರವಾಸಿಗರಲ್ಲಿ ಒಬ್ಬರು ನೇಪಾಳಿ ಪ್ರಜೆಯಾಗಿದ್ದು. ಉಳಿದವರು ದೇಶದ ವಿವಿಧ 14 ರಾಜ್ಯಗಳಿಂದ ಹೋಗಿದ್ದವರು.
ಪ್ರತೀಕಾರ ತೀರಿಸಿಕೊಳ್ಳುವ ಪ್ರಜ್ಞೆ
ಈ ಉಗ್ರರ ದಾಳಿಗೆ ತಕ್ಕ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಸರ್ಕಾರ ಪ್ರತಿಜ್ಞೆ ಮಾಡಿದೆ. ಸದ್ಯ ಕೇಂದ್ರ ಸರ್ಕಾರ ಸಿಂಧೂ ಜಲ ಒಪ್ಪಂದವನ್ನು ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸುವುದು, ಅಟ್ಟಾರಿ ಗಡಿಯನ್ನು ಮುಚ್ಚುವುದು ಮತ್ತು ಪ್ರಸ್ತುತ ಭಾರತದಲ್ಲಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳ ವೀಸಾಗಳನ್ನು ರದ್ದುಗೊಳಿಸುವುದು ಸೇರಿದಂತೆ ಹಲವಾರು ಮಿಲಿಟರಿಯೇತರ ಕ್ರಮಗಳನ್ನು ಪ್ರಾರಂಭಿಸಿದೆ. ಆದರೂ ಮಿಲಿಟರಿ ಕಾರ್ಯಾಚರಣೆ ನಡೆಸುವ ಸೂಚನೆ ಸಿಕ್ಕಿದೆ. ಉರಿ ಮತ್ತು ಪುಲ್ವಾಮಾ ಮೇಲಿನ ಭಯೋತ್ಪಾದಕ ದಾಳಿಯ ನಂತರ ಸರ್ಕಾರ ಸರ್ಜಿಕಲ್ ಸ್ಟ್ರೈಕ್ ನಡೆಸುವ ಮೂಲಕ ಪಾಕಿಸ್ತಾನಕ್ಕೆ ತಿರುಗೇಟು ನೀಡಿತ್ತು.
ಸರ್ವಪಕ್ಷ ಸಭೆಯಲ್ಲಿ ಮಿಲಿಟರಿ ದಾಳಿ ನಡೆಸುವ ಬಗ್ಗೆ ಚರ್ಚೆಯಾಗಿಲ್ಲ ಎಂದು ವರದುಯಾಗಿದೆ. ಸರ್ಕಾರವು ಕಠಿಣ ಕ್ರಮಕ್ಕೆ ಮುಂದಾಗಿದ್ದು ಭಾರತದಲ್ಲಿ ಪಾಕಿಸ್ತಾನಿ ಪ್ರಜೆಗಳ ವೈದ್ಯಕೀಯ ವೀಸಾಗಳು ಸೇರಿದಂತೆ ಎಲ್ಲಾ ರೀತಿಯ ವೀಸಾಗಳನ್ನು ನಿರಾಕರಿಸಲಾಗಿದೆ.
ಇದಕ್ಕೆ ಪ್ರತಿಯಾಗಿ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ನಲ್ಲಿನ ನಿಯಂತ್ರಣ ರೇಖೆಯನ್ನು ಊರ್ಜಿತಗೊಳಿಸುವ 1972 ರ ಸಿಮ್ಲಾ ಒಪ್ಪಂದ ಸೇರಿದಂತೆ ಉಭಯ ದೇಶಗಳ ನಡುವಿನ ಎಲ್ಲಾ ಒಪ್ಪಂದಗಳನ್ನು ಸ್ಥಗಿತಗೊಳಿಸುವುದಾಗಿ ಪಾಕಿಸ್ತಾನ ಬೆದರಿಕೆ ಹಾಕಿದೆ. ಹೈಕಮಿಷನ್ನಲ್ಲಿ ಭಾರತೀಯ ರಾಜತಾಂತ್ರಿಕ ಸಿಬ್ಬಂದಿಯನ್ನು ಕಡಿಮೆ ಮಾಡುವುದಾಗಿ ಪಾಕಿಸ್ತಾನ ಘೋಷಿಸಿದೆ.












Click it and Unblock the Notifications