ಗೌರಿ ಹತ್ಯೆ ಪ್ರಕರಣ: ಆರೋಪಿ ನವೀನ್ ಕುಮಾರ್ ಗೆ ಮಂಪರು ಪರೀಕ್ಷೆ
ಬೆಂಗಳೂರು, ಮಾರ್ಚ್ 12: ತನ್ನ ವಶದಲ್ಲಿರುವ ಗೌರಿ ಲಂಕೇಶ್ ಕೊಲೆ ಪ್ರಕರಣದ ಆರೋಪಿ ಕೆ.ಟಿ.ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜನನ್ನು ವಿಶೇಷ ತನಿಖಾ ದಳ ಮಂಪರು ಪರೀಕ್ಷೆಗೆ ಒಳಪಡಿಸಲಿದೆ.
ಗೌರಿ ಲಂಕೇಶ್ ಹಂತಕರಿಗೆ ಸಹಾಯ ಮಾಡಿದ್ದಾನೆ ಎಂದು ಅನುಮಾನಿಸಲಾಗಿರುವ ನವೀನ್ ಕುಮಾರ್ ಮಂಪರು ಪರೀಕ್ಷೆಗೆ ಅನುಮತಿ ಕೋರಿ ಗೌರಿ ಹತ್ಯೆ ತನಿಖೆ ನಡೆಸುತ್ತಿರುವ ಎಸ್ಐಟಿ ತಂಡ ಶುಕ್ರವಾರ 3ನೇ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು. ಇಂದು ಮನವಿಯ ವಿಚಾರಣೆ ನಡೆಸಿದ ನ್ಯಾಯಾಲಯ ಮಂಪರು ಪರೀಕ್ಷೆಗೆ ಅನುಮತಿ ನೀಡಿದೆ.

ಅರ್ಜಿ ಸಲ್ಲಿಕೆ ವೇಳೆ, "ನವೀನ್ ಕುಮಾರ್ ಪದೇ ಪದೇ ತನ್ನ ಹೇಳಿಕೆ ಬದಲಿಸುತ್ತಿದ್ದು, ತನಿಖೆಗೆ ಸರಿಯಾಗಿ ಸಹಕರಿಸುತ್ತಿಲ್ಲ," ಎಂದು ಎಸ್ಐಟಿ ತಂಡ ವಿವರಣೆ ನೀಡಿತ್ತು.
ಆದರೆ, ನವೀನ್ ಪರ ವಕೀಲರು ಇದಕ್ಕೆ ಆಕ್ಷೇಪಣೆ ಸಲ್ಲಿಸಿದ್ದು, ಈಗಾಗಲೇ ಆರೋಪಿಯನ್ನು ಎಂಟು ದಿನಗಳ ಕಾಲ ತನಿಖೆ ಮಾಡಲಾಗಿದೆ. ಆತನಿಗೆ ಸಂಬಂಧವಿಲ್ಲದ ಪ್ರಕರಣದ ಬಗ್ಗೆ ಮಂಪರು ಪರೀಕ್ಷೆ ಮಾಡುವ ಅಗತ್ಯ ಇಲ್ಲ ಎಂದು ವಾದಿಸಿದ್ದರು.
ಆದರೆ ಮಂಪರು ಪರೀಕ್ಷೆಗೆ ಒಳಗಾಗುವುದಕ್ಕೆ ನ್ಯಾಯಾಧೀಶರ ಮುಂದೆ ನವೀನ್ ಕುಮಾರ್ ಒಪ್ಪಿಗೆ ಸೂಚಿಸಿದ್ದಾನೆ. ಈ ಹಿನ್ನಲೆಯಲ್ಲಿ ಆತನ ವಕೀಲರ ಸಮ್ಮುಖದಲ್ಲೇ ಮಂಪರು ಪರೀಕ್ಷೆಗೆ ನ್ಯಾಯಾಧೀಶರು ಆದೇಶಿಸಿದರು.
ಅಹಮದಾಬಾದ್ ನಲ್ಲಿ ಮಂಪರು ಪರೀಕ್ಷೆ ನಡೆಸುವುದಾಗಿ ನ್ಯಾಯಾಧೀಶರಿಗೆ ಎಸ್ಐಟಿ ಪೊಲೀಸರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.
ಮಾರ್ಚ್ 26ರವರೆಗೂ ನ್ಯಾಯಾಂಗ ಬಂಧನ
ಇದೇ ವೇಳೆ, ಮಾರ್ಚ್ 26ರವರೆಗೂ ನವೀನ್ ಕುಮಾರ್ ನನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.












Click it and Unblock the Notifications