ರಾಹುಲ್ ಗಾಂಧಿ ಯಾತ್ರೆ ತಡೆಯಲು ಸರ್ಕಾರವೇ ಕೊರೊನಾ ವೈರಸ್ ಬಿಡುಗಡೆ ಮಾಡಿದೆ: ಉದ್ಧವ್ ಬಣ
ಮುಂಬೈ, ಡಿಸೆಂಬರ್ 22: ಕೋವಿಡ್ ಪ್ರೋಟೋಕಾಲ್ಗಳನ್ನು ಅನುಸರಿಸಲು ಸಾಧ್ಯವಾಗದಿದ್ದರೆ ಭಾರತ್ ಜೋಡೊ ಯಾತ್ರೆಯನ್ನು ಮುಂದೂಡುವ ಬಗ್ಗೆ ಪರಿಗಣಿಸಲು ಕೇಂದ್ರ ಸರ್ಕಾರ ಸೂಚಿಸಿದೆ. ಈ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ಗೆ ಪತ್ರವನ್ನೂ ಕಳುಹಿಸಿದೆ.
ಈ ಕುರಿತು ಕೇಂದ್ರ ಸರ್ಕಾರವನ್ನು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಇಂದು ತರಾಟೆಗೆ ತೆಗೆದುಕೊಂಡಿದೆ.
'ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಕೋವಿಡ್ ಪ್ರೋಟೋಕಾಲ್ ಅನ್ನು ಅನುಸರಿಸಿ ಅಥವಾ ಪಾದಯಾತ್ರೆಯನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ. ರಾಹುಲ್ ಗಾಂಧಿ ತಮ್ಮ ಭಾರತ್ ಜೋಡೋ ಯಾತ್ರೆಯ 100 ದಿನಗಳನ್ನು ಪೂರ್ಣಗೊಳಿಸಿದ್ದಾರೆ ಮತ್ತು ದೊಡ್ಡ ಪ್ರಮಾಣದಲ್ಲಿ ಜನ ಬೆಂಬಲವನ್ನು ಪಡೆಯುತ್ತಿದ್ದಾರೆ. ಸರ್ಕಾರವು ಅದನ್ನು ತಡೆಯಲು ಸಾಧ್ಯವಾಗಲಿಲ್ಲ. ಕಾನೂನು ಅಥವಾ ಪಿತೂರಿಯಿಂದ ಕೇಂದ್ರ ಸರ್ಕಾರವು ಕೊರೊನಾ ವೈರಸ್ ಅನ್ನು ಬಿಡುಗಡೆ ಮಾಡಿದೆ' ಎಂದು ಶಿವಸೇನಾ ಮುಖವಾಣಿ ಸಾಮ್ನಾದಲ್ಲಿ ಬರೆಯಲಾಗಿದೆ.

'ಭಾರತ್ ಜೋಡೋ ಯಾತ್ರೆಯ ಭರಾಟೆಯಿಂದ ಕೋವಿಡ್ ಪ್ರಕರಣಗಳು ಹೆಚ್ಚಾಗುವ ಭಯ ಶುರುವಾಗಿದೆ. ಆದರೆ ಮೂರು ವರ್ಷಗಳ ಹಿಂದೆ ಕೊರೊನಾ ವಿನಾಶವನ್ನು ಉಂಟು ಮಾಡಿತ್ತು. ಆಗ ಅಮೆರಿಕ ಅಧ್ಯಕ್ಷ ಟ್ರಂಪ್ ಅವರನ್ನು ಗುಜರಾತ್ಗೆ ಆಹ್ವಾನಿಸಿ ಲಕ್ಷಾಂತರ ಜನರನ್ನು ಒಟ್ಟುಗೂಡಿಸಿದವರು ನೀವು' ಎಂದು ಆರೋಪಿ ಮಾಡಲಾಗಿದೆ.
'ರಾಜಸ್ಥಾನದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ. ಮಾಸ್ಕ್-ಸ್ಯಾನಿಟೈಸರ್ ಬಳಕೆಯನ್ನು ಜಾರಿಗೊಳಿಸಬೇಕು. ಲಸಿಕೆ ಹಾಕಿದ ಜನರು ಮಾತ್ರ ಭಾಗವಹಿಸಬೇಕು" ಎಂದು ಆರೋಗ್ಯ ಸಚಿವರು ಪತ್ರದಲ್ಲಿ ತಿಳಿಸಿದ್ದಾರೆ.
ಈ ಕ್ರಮಗಳನ್ನು ಕಾಂಗ್ರೆಸ್ಗೆ ಅನುಸರಿಸಲು ಸಾಧ್ಯವಾಗದಿದ್ದರೆ ಪಾದಯಾತ್ರೆಯನ್ನು ಮುಂದೂಡುವಂತೆ ಮಾಂಡವಿಯಾ ಮನವಿ ಮಾಡಿದ್ದರು.

'ಕೋವಿಡ್ ಪ್ರೋಟೋಕಾಲ್ ಅನ್ನು ಅನುಸರಿಸಲು ಸಾಧ್ಯವಾಗದಿದ್ದರೆ, ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ಹಿತಾಸಕ್ತಿಯಿಂದ ಭಾರತ್ ಜೋಡೋ ಯಾತ್ರೆಯನ್ನು ಮುಂದೂಡಬಹುದು" ಎಂದು ಪತ್ರದಲ್ಲಿ ತಿಳಿಸಲಾಗಿತ್ತು.
ಇದಕ್ಕೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನೆಡೆಸಿದ್ದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ತಮಿಳು ನಾಡಿನ ಕನ್ಯಾಕುಮಾರಿಯಿಂದ ಆರಂಭವಾಗಿದೆ. ಈಗಾಗಲೇ ನೂರು ದಿನಗಳನ್ನು ಪೂರೈಸಿದೆ. ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ಕರ್ನಾಟಕ, ತೆಲಂಗಾಣ, ಮಧ್ಯಪ್ರದೇಶ ಹಾಗೂ ರಾಜಸ್ಥಾನಗಳಲ್ಲಿ ಯಾತ್ರೆ ಸಾಗಿದೆ. ಡಿಸೆಂಬರ್ 24ರಂದು ಯಾತ್ರೆ ರಾಷ್ಟ್ರ ರಾಜಧಾನಿಗೆ ಪ್ರವೇಶಿಸಲಿದೆ.












Click it and Unblock the Notifications