ಸರ್ಕಾರ ಬಿದ್ದುಹೋದರೂ ಸೇನಾ ಕಾರ್ಯಾಚರಣೆಗೆ ಅಡ್ಡಿಯಿಲ್ಲ: ಸೇನೆ
ನವದೆಹಲಿ, ಜೂನ್ 20: ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರ ಮುರಿದುಹೋಗಿ ರಾಷ್ಟ್ರಪತಿ ಆಳ್ವಿಕೆ ಹೇರಿದ್ದರೂ, ಅದರಿಂದ ಉಗ್ರರ ವಿರುದ್ಧದ ಕಾರ್ಯಾಚರಣೆಗೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ತಿಳಿಸಿದ್ದಾರೆ.
ತತ್ಕ್ಷಣದಿಂದ ಜಾರಿಯಾಗುವಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅನುಮೋದನೆ ನೀಡಿದ ಬೆನ್ನಲ್ಲೇ ರಾವತ್ ಈ ಪ್ರತಿಕ್ರಿಯೆ ನೀಡಿದ್ದಾರೆ.
ನಾವು ರಂಜಾನ್ ಮಾಸದ ಕಾರಣಕ್ಕಾಗಿ ಮಾತ್ರ ಆ ಅವಧಿಯಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ್ದೆವು. ಆದರೆ, ಅದರಿಂದ ಏನಾಯಿತು ಎಂಬುದನ್ನು ನಾವು ಕಂಡಿದ್ದೇವೆ. ರಾಷ್ಟ್ರಪತಿ ಆಳ್ವಿಕೆ ನಮ್ಮ ಕಾರ್ಯಾಚರಣೆ ಮೇಲೆ ಯಾವ ಪರಿಣಾಮವನ್ನೂ ಬೀರುವುದಿಲ್ಲ.

ಈ ಹಿಂದೆ ಹೇಗೆ ನಡೆಯುತ್ತಿತ್ತೋ, ಹಾಗೆಯೇ ಕಾರ್ಯಾಚರಣೆ ಮುಂದುವರಿಯಲಿದೆ. ನಾವು ಯಾವುದೇ ರಾಜಕೀಯ ಹಸ್ತಕ್ಷೇಪ ಎದುರಿಸಿಲ್ಲ ಎಂದು ತಿಳಿಸಿದರು.
ರಾಷ್ಟ್ರಪತಿ ಕೋವಿಂದ್ ಅವರ ಅನುಮೋದನೆ ದೊರೆತ ಬಳಿಕ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಎನ್.ಎನ್. ವೋಹ್ರಾ ಅವರು ಜಮ್ಮು ಮತ್ತು ಕಾಶ್ಮೀರದ ಸಂವಿಧಾನದ ಸೆಕ್ಷನ್ 92ರ ಅಡಿ ರಾಜ್ಯಪಾಲರ ಆಳ್ವಿಕೆಯನ್ನು ಜಾರಿ ಮಾಡಿದ್ದಾರೆ.












Click it and Unblock the Notifications