ಪ್ರತಿ ಕ್ವಿಂಟಾಲ್ ಗೋಧಿಯ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ
ನವದೆಹಲಿ, ಸೆಪ್ಟೆಂಬರ್ 21: ಕೇಂದ್ರ ಸರ್ಕಾರವು ಗೋಧಿಯ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ.
ಕೃಷಿ ಬೆಳೆಯನ್ನು ಹೆಚ್ಚಿಸಲು ರೈತರನ್ನು ಉತ್ತೇಜಿಸುವ ಸಲುವಾಗಿ ಪ್ರತಿ ಕ್ವಿಂಟಾಲ್ ಗೋಧಿಯ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚು ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಮೇಲಿನ ಸಂಪುಟ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಲೋಕಸಭೆಯಲ್ಲಿ ಈ ವಿಷಯವನ್ನು ಪ್ರಕಟಿಸಿದರು.
ಆರು ರಾಬಿ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲು ಆರ್ಥಿಕ ವ್ಯವಹಾರಗಳ ಮೇಲಿನ ಸಂಪುಟ ಸಮಿತಿ ಸಭೆ ಅನುಮೋದನೆ ನೀಡಿದೆ. ಪ್ರತಿಪಕ್ಷಗಳ ಹರಡುತ್ತಿರುವ ಅಪ ಪ್ರಚಾರದ ವಿರುದ್ಧವಾಗಿ ಸರ್ಕಾರ ಯಾವಾಗಲು ಕನಿಷ್ಠ ಬೆಂಬಲ ಬೆಲೆ ಮತ್ತು ಎಪಿಎಂಸಿ ಕಾರ್ಯವಿಧಾನಗಳನ್ನು ಮುಂದುವರೆಸಲಿದೆ ಎಂದು ತೋಮರ್ ಹೇಳಿದರು.ಕೆಲ ಕಾಂಗ್ರೆಸ್ ಸದಸ್ಯರು ಸದನದಿಂದ ಹೊರ ನಡೆದ ನಂತರ ತೋಮರ್ ಕನಿಷ್ಠ ಬೆಂಬಲ ಬೆಲೆಯನ್ನು ಪ್ರಕಟಿಸಿದರು.
ಮಹತ್ವದ ಎರಡು ಕೃಷಿ ಮಸೂದೆಗಳು ಸಂಸತ್ತಿನಲ್ಲಿ ಅಂಗೀಕಾರಗೊಂಡ ನಂತರ ಪಂಜಾಬ್, ಹರಿಯಾಣ ಮತ್ತಿತರ ರಾಜ್ಯಗಳಲ್ಲಿ ಪ್ರತಿಪಕ್ಷಗಳು ಮತ್ತು ರೈತ ಸಂಘಟನೆಗಳಿಂದ ವ್ಯಾಪಕ ಪ್ರತಿಭಟನೆ ಭುಗಿಲೆದ್ದಿರುವ ಬೆನ್ನಲ್ಲೇ, ಸರ್ಕಾರ ಈ ಘೋಷಣೆಯನ್ನು ಪ್ರಕಟಿಸಿದೆ.
ರೈತರ ಉತ್ಪನ್ನಗಳ ವ್ಯಾಪಾರ ಮತ್ತು ವ್ಯವಹಾರ ( ಪ್ರೋತ್ಸಾಹಕ ಸೌಲಭ್ಯ ) ಮಸೂದೆ 2020 ಮತ್ತು ರೈತರು (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ 2020ನ್ನು ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕರಿಸಲಾಗಿದೆ.