ಏಕರೂಪ ನಾಗರಿಕ ಸಂಹಿತೆ: ಗುಜರಾತ್ನಲ್ಲಿ ಬಿಜೆಪಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ
ನವದೆಹಲಿ, ಅ.30: ಮುಂಬರುವ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಗುಜರಾತ್ನಲ್ಲಿರುವ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗುಜರಾತ್ನ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ತರಲು ಸಮಿತಿಯನ್ನು ರಚಿಸುವುದಾಗಿ ಘೋಷಿಸಿದೆ. ಇದರ ಬೆನ್ನಲ್ಲೇ ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿರುವ ಕೇಜ್ರಿವಾಲ್ 'ಅವರಿಗೆ ಕೆಟ್ಟ ಉದ್ದೇಶವಿದೆ' ಎಂದು ಆರೋಪಿಸಿದ್ದಾರೆ.
ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಉದ್ದೇಶದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಎಎಪಿ ಮುಖ್ಯಸ್ಥರು, ಆಡಳಿತ ಪಕ್ಷವು ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಅದೇ ಭರವಸೆಯನ್ನು ನೀಡಿತ್ತು. ಆದರೆ ಚುನಾವಣೆಯಲ್ಲಿ ಗೆದ್ದ ನಂತರ ಅದನ್ನು ಕಾರ್ಯಗತಗೊಳಿಸಲಿಲ್ಲ ಎಂದು ಹೇಳಿದ್ದಾರೆ.

"ಬಿಜೆಪಿ ಉತ್ತರಾಖಂಡ ಚುನಾವಣೆಯಲ್ಲಿ ಗೆದ್ದ ನಂತರ ಸಮಿತಿಯನ್ನು ರಚಿಸಿತ್ತು. ಈಗ ಅದು ಕಣ್ಮರೆಯಾಗಿದೆ. ಈಗ ಅವರು ಗುಜರಾತ್ ಚುನಾವಣೆಗೆ ಮೂರು ದಿನಗಳ ಮೊದಲು ಸಮಿತಿಯನ್ನು ರಚಿಸಿದ್ದಾರೆ. ಅದು ಕೂಡ ಚುನಾವಣೆಯ ನಂತರವೂ ಕಣ್ಮರೆಯಾಗುತ್ತದೆ" ಎಂದು ಕಿಡಿಕಾರಿದ್ದಾರೆ.
ಭಾವನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, "ಅವರು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಬೇಕು. ಸಂವಿಧಾನದ 44 ನೇ ವಿಧಿಯು ಸಂಹಿತೆ ಜಾರಿ ಮಾಡುವುದು ಸರ್ಕಾರದ ಜವಾಬ್ದಾರಿ ಎಂದು ಸ್ಪಷ್ಟವಾಗಿ ಹೇಳುತ್ತದೆ, ಆದರೆ ಅದನ್ನು ಎಲ್ಲರ ಒಪ್ಪಿಗೆಯೊಂದಿಗೆ ಮಾಡಬೇಕು. ಎಲ್ಲಾ ಸಮುದಾಯಗಳೊಂದಿಗೆ ಸಮಾಲೋಚನೆ ನಡೆಸಿ ಮಾಡಬೇಕು"ಎಂದು ಹೇಳಿದ್ದಾರೆ.
ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಇದನ್ನು ಏಕೆ ಜಾರಿಗೊಳಿಸುವುದಿಲ್ಲ, ದೇಶದಾದ್ಯಂತ ಇದನ್ನು ಏಕೆ ಜಾರಿಗೊಳಿಸಬಾರದು. ಅವರು ಲೋಕಸಭೆ ಚುನಾವಣೆಗಾಗಿ ಕಾಯುತ್ತಿದ್ದಾರೆಯೇ?" ಎಂದು ಅರವಿಂದ್ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

ಏಕರೂಪ ನಾಗರಿಕ ಸಂಹಿತೆಯನ್ನು ಬಹುಸಂಖ್ಯಾತ ಹಿಂದೂಗಳ ಮತಗಳನ್ನು ಸೆಳೆಯುವ ಗಿಮಿಕ್ ಎಂದು ಕಾಂಗ್ರೆಸ್ ಕೂಡ ಟೀಕಿಸಿದೆ.
ಬಿಜೆಪಿ ಆಡಳಿತವಿರುವ ಉತ್ತರಾಖಂಡ್ನಲ್ಲಿನ ರೀತಿಯಲ್ಲಿ ಏಕರೂಪ ನಾಗರಿಕ ಸಂಹಿತೆ ಕಾನೂನನ್ನು ಹೇಗೆ ಕಾರ್ಯಗತಗೊಳಿಸಬಹುದು ಎಂಬುದನ್ನು ಪರೀಕ್ಷಿಸಲು ಗುಜರಾತ್ ಸರ್ಕಾರವು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಸಮಿತಿಯನ್ನು ಪ್ರಸ್ತಾಪಿಸಿದೆ.
"ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ, ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಇಂದು ನಡೆದ ಸಂಪುಟ ಸಭೆಯಲ್ಲಿ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗಾಗಿ ಸಮಿತಿಯನ್ನು ರಚಿಸಲಾಗಿದೆ" ಎಂದು ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಹೇಳಿದ್ದಾರೆ.
ಮೇ ತಿಂಗಳಲ್ಲಿ, ಉತ್ತರಾಖಂಡ ಸರ್ಕಾರವು ರಾಜ್ಯದಲ್ಲಿ ಯುಸಿಸಿ ಜಾರಿಗೊಳಿಸುವ ನಿರ್ಧಾರವನ್ನು ಪ್ರಕಟಿಸಿತ್ತು. ಅದೇ ತಿಂಗಳು, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಕೂಡ ಯುಸಿಸಿಯನ್ನು ಶೀಘ್ರದಲ್ಲೇ ರಾಜ್ಯಕ್ಕೆ ತರಲಾಗುವುದು ಎಂದು ಘೋಷಿಸಿದ್ದರು.












Click it and Unblock the Notifications