Gujarat Election 2022: 46 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಗಾಂಧಿನಗರ, ನವೆಂಬರ್ 11: ಗುಜರಾತ್ ವಿಧಾನಸಭೆ ಚುನಾವಣೆಗೆ ದಿನಾಂಕಗಳು ಪ್ರಕಟಗೊಂಡಿವೆ. ಎರಡು ಸುತ್ತಿನ ಮತದಾನ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಡಿಸೆಂಬರ್ 1 ಹಾಗೂ 5ರಂದು ಮತದಾನ ಪ್ರಕ್ರಿಯೆ ನಡೆಯಲಿದೆ. ಡಿಸೆಂಬರ್ 8ರಂದು ಫಲಿತಾಂಶ ಹೊರಬೀಳಲಿದೆ.
ತ್ರಿಕೋನ ಸ್ಪರ್ಧೆ ಏರ್ಪಟ್ಟಿರುವ ಗುಜರಾತ್ನಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷಗಳು ಪೈಪೋಟಿ ನಡೆಸಿವೆ. ಬಿಜೆಪಿ ಹಾಗೂ ಎಎಪಿ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿವೆ. ಆದರೆ, ಕಾಂಗ್ರೆಸ್ ಮಾತ್ರ ಮೌನಕ್ಕೆ ಶರಣಾಗಿದೆ. ಗುಜರಾತ್ನ ಗ್ರಾಮೀಣ ಪ್ರದೇಶಗಳಲ್ಲಿ ಗಟ್ಟಿ ಬೇರುಗಳನ್ನು ಹೊಂದಿರುವ ಕಾಂಗ್ರೆಸ್ ಕೆಳ ಹಂತದ ಪ್ರಚಾರಕ್ಕೆ ಮಣೆ ಹಾಕಿದೆ.
ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ
ಎರಡು ಹಂತಗಳಲ್ಲಿ ನಡೆಯುವ ಗುಜರಾತ್ ಚುನಾವಣೆಗೆ ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 46 ಅಭ್ಯರ್ಥಿಗಳ ಹೆಸರಿದೆ. ಪಕ್ಷದಿಂದ ಇದುವರೆಗೆ ಘೋಷಿಸಲಾದ ಒಟ್ಟು ಅಭ್ಯರ್ಥಿಗಳ ಸಂಖ್ಯೆ 89 ಆದಂತಾಗಿದೆ. ಕಳೆದ ಶುಕ್ರವಾರ 43 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿತ್ತು.
ಎರಡನೇ ಪಟ್ಟಿಯಲ್ಲಿ ಹೆಸರಿಸಲಾದ ಅಭ್ಯರ್ಥಿಗಳ ಪೈಕಿ, ಭುಜ್ನಿಂದ ಅರ್ಜನ್ಭಾಯ್ ಭುಡಿಯಾ, ಜುನಾಗಢದಿಂದ ಭಿಖಾಭಾಯಿ ಜೋಶಿ, ಸೂರತ್ ಪೂರ್ವದಿಂದ ಅಸ್ಲಾಮ್ ಸೈಕಲ್ವಾಲಾ, ಸೂರತ್ ಉತ್ತರದಿಂದ ಅಶೋಕ್ಭಾಯ್ ಪಟೇಲ್ ಮತ್ತು ವಲ್ಸಾದ್ನಿಂದ ಕಮಲಕುಮಾರ್ ಪಟೇಲ್ ಅವರನ್ನು ಕಣಕ್ಕಿಳಿಸಲಾಗಿದೆ.
ಗುಜರಾತ್ನಲ್ಲಿ ಕಾಂಗ್ರೆಸ್ನಿಂದ ಕೆಳ ಹಂತದ ಪ್ರಚಾರ
2017ರಲ್ಲಿ ನಡೆದ ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿತ್ತು. ಗುಜರಾತ್ ವಿಧಾನಸಭೆಯ ಒಟ್ಟು 180 ಕ್ಷೇತ್ರಗಳ ಪೈಕಿ 77 ರಲ್ಲಿ ಕಾಂಗ್ರೆಸ್ ಜಯ ಸಾಧಿಸಿತ್ತು. 99 ಕ್ಷೇತ್ರಗಳನ್ನು ಬಿಜೆಪಿ ತನ್ನದಾಗಿಸಿಕೊಂಡಿತ್ತು. ಆದರೆ, ಈ ಸಾರಿಯ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಗುಜರಾತ್ ಚುನಾವಣಾ ಕಣಕ್ಕೆ ದುಮುಕಿದೆ. ಇದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಸವಾಲಾಗಿ ಪರಿಣಮಿಸಿದೆ. ಎಎಪಿ ಹಾಗೂ ಬಿಜೆಪಿ ಪಕ್ಷಗಳು ಅಬ್ಬರದ ಪ್ರಚಾರ ಮಾಡುತ್ತಿವೆ. ಆದರೆ, ಕಾಂಗ್ರೆಸ್ ಮೌನ ಪ್ರಚಾರಕ್ಕೆ ಮಣೆ ಹಾಕಿದೆ. ಗುಜರಾತ್ ಕಾಂಗ್ರೆಸ್ನ ಪ್ರಮುಖ ನಾಯಕರು ಹಳ್ಳಿಹಳ್ಳಿಗೆ ಹೋಗಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ
ಗುಜರಾತ್ನಲ್ಲಿ ಚುನಾವಣೆ ಭರಾಟೆ ಇದ್ದರೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯಲ್ಲಿ ನಿರತರಾಗಿದ್ದಾರೆ. ಹಿಮಾಚಲ ಪ್ರದೇಶ ಚುನಾವಣೆ ಪ್ರಚಾರದಲ್ಲಿ ರಾಹುಲ್ ಸಕ್ರಿಯರಾಗಿಲ್ಲ. ಮುಂದೆ ಬರುವ ಗುಜರಾತ್ ಚುನಾವಣೆ ಪ್ರಚಾರದಲ್ಲೂ ರಾಹುಲ್ ಸಕ್ರಿಯರಾಗುವ ಸಾಧ್ಯತೆ ತೀರಾ ಕಡಿಮೆ ಎಂದು ಪಕ್ಷದ ಮೂಲಗಳು ಹೇಳಿವೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ನಡೆಯುವ ಭಾರತ್ ಜೋಡೋ ಯಾತ್ರೆಯು ಈಗಾಗಲೇ ಆರು ರಾಜ್ಯಗಳಲ್ಲಿ ಕ್ರಮಿಸಿದೆ.
ಮೌನಕ್ಕೆ ಶರಣಾದವರ ಬಗ್ಗೆ ಎಚ್ಚರವಾಗಿರಿ ಎಂದ ಮೋದಿ
'ಕಾಂಗ್ರೆಸ್ ಪಕ್ಷವು ಗ್ರಾಮೀಣ ಭಾಗಗಳಲ್ಲಿ ಪ್ರಚಾರ ನಡೆಸುತ್ತಿದೆ. ಆ ಪಕ್ಷದ ನಾಯಕರು ಹಳ್ಳಿ ಹಳ್ಳಿಗಳಿಗೆ ತೆರಳಿ ಮನೆಮನೆ ಪ್ರಚಾರ ಕೈಗೊಂಡಿದ್ದಾರೆ. ಮೌನ ಪ್ರಚಾರದ ಬಗ್ಗೆ ನೀವು ಎಚ್ಚರಾಗಿರಿ' ಎಂದು ಪ್ರಧಾನಿ ಮೋದಿ ತಮ್ಮ ಕಾರ್ಯಕರ್ತರಿಗೆ ಸಂದೇಶ ನೀಡಿದ್ದಾರೆ. ಪ್ರಧಾನಿ ಮೋದಿ ಅವರ ತವರು ರಾಜ್ಯವಾದ ಗುಜರಾತ್ನಲ್ಲಿ ಈ ಸಾರಿ ಯಾರು ಅಧಿಕಾರಕ್ಕೆ ಬರಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.