Maharashtra Assembly Elections 2024: ಮಹಾರಾಷ್ಟ್ರ ಚುನಾವಣೆ ಬಿಜೆಪಿ ಹಾದಿ ಈಗ ಸುಲಭ
ಮುಂಬೈ, ಅಕ್ಟೋಬರ್ 09: ಹರಿಯಾಣ ಮತ್ತು ಜಮ್ಮು & ಕಾಶ್ಮೀರ ವಿಧಾನಸಭೆ ಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಹರಿಯಾಣದಲ್ಲಿ 3ನೇ ಬಾರಿಗೆ ಅಧಿಕಾರವನ್ನು ಪಡೆಯುವ ಮೂಲಕ ಬಿಜೆಪಿ ಐತಿಹಾಸಿಕ ಸಾಧನೆ ಮಾಡಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ತನ್ನ ನೆಲೆಯನ್ನು ಭದ್ರಪಡಿಸಿಕೊಂಡಿದೆ. ಪಕ್ಷದ ಈ ಗೆಲುವು ದೇಶದಲ್ಲಿ ನವೆಂಬರ್ನಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಸಹಾಯಕವಾಗಲಿದೆ. 288 ಸದಸ್ಯ ಬಲದ ವಿಧಾನಸಭೆಗೆ ರಾಜಕೀಯ ಪಕ್ಷಗಳು, ಚುನಾವಣಾ ಆಯೋಗ ತಯಾರಿಯನ್ನು ನಡೆಸಿದೆ. ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಪ್ರಕಟಿಸಬೇಕಿದೆ.
90 ಸದಸ್ಯ ಬಲದ ಹರ್ಯಾಣದಲ್ಲಿ ಬಿಜೆಪಿ 48 ಸೀಟುಗಳಲ್ಲಿ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಕಾಂಗ್ರೆಸ್ 37, ಐಎನ್ಎಲ್ಡಿ 2, ಪಕ್ಷೇತರರು 3 ಸ್ಥಾನದಲ್ಲಿ ಜಯಗಳಿಸಿದ್ದಾರೆ. 90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ 42, ಕಾಂಗ್ರೆಸ್ 6 ಸ್ಥಾನಗಳಲ್ಲಿ ಜಯಗಳಿಸಿವೆ. ಆದರೆ ಬಿಜೆಪಿ ರಾಜ್ಯದಲ್ಲಿ 29 ಸ್ಥಾನ ಗೆಲ್ಲುವ ಮೂಲಕ ತನ್ನ ನೆಲೆಯನ್ನು ಭದ್ರಪಡಿಸಿಕೊಂಡಿದೆ.

ಮಹಾರಾಷ್ಟ್ರದಲ್ಲಿ ಸದ್ಯ ಬಿಜೆಪಿ ಅಧಿಕಾರದಲ್ಲಿದೆ. ಬಿಜೆಪಿ ನೇತೃತ್ವದ 'ಮಹಾಯುತಿ' ಮೈತ್ರಿಕೂಟದಲ್ಲಿ ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್ಸಿಪಿ (ಅಜಿತ್ ಪವಾರ್ ಬಣ) ಇದೆ. 2024ರ ವಿಧಾನಸಭೆ ಚುನಾವಣೆಯನ್ನು ಸಹ ಈ ಪಕ್ಷಗಳು ಮೈತ್ರಿಕೂಟದ ಮೂಲಕ ಒಟ್ಟಾಗಿ ಎದುರಿಸಲು ತೀರ್ಮಾನ ಮಾಡಿವೆ.
ಚುನಾವಣೆ ಲೆಕ್ಕಾಚಾರಗಳು: ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ 29 ಸ್ಥಾನವನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಮೊದಲ ಬಾರಿಗೆ ಅತಿ ಹೆಚ್ಚು ಸ್ಥಾನದಲ್ಲಿ ಜಯಗಳಿಸಿದೆ. ಲೋಕಸಭೆ ಚುನಾವಣೆ 2024ರಲ್ಲಿ ಬಿಜೆಪಿ ನಿರೀಕ್ಷೆ ಮಾಡಿದಷ್ಟು ಸ್ಥಾನ ಸಿಕ್ಕಿರಲಿಲ್ಲ. ಆದ್ದರಿಂದ ಎನ್ಡಿಎ ಮೈತ್ರಿಕೂಟದ ಪಕ್ಷಗಳ ಜೊತೆ ಸೇರಿ ನರೇಂದ್ರ ಮೋದಿ 3.0 ಸರ್ಕಾರವನ್ನು ರಚನೆ ಮಾಡಿತ್ತು. ಆದರೆ ಈಗ ನಡೆದ ಎರಡು ರಾಜ್ಯದ ವಿಧಾನಸಭೆ ಚುನಾವಣೆ ಪಕ್ಷದ ನಾಯಕರ ಉತ್ಸಾಹ ಹೆಚ್ಚಿಸಿದೆ.
ಹರಿಯಾಣ ಮತ್ತು ಜಮ್ಮು & ಕಾಶ್ಮೀರ ವಿಧಾನಸಭೆ ಚುನಾವಣೆ ಫಲಿತಾಂಶದ ಮೊದಲ ಪರಿಣಾಮ ಮಹಾರಾಷ್ಟ್ರದ ಚುನಾವಣೆ ಮೇಲೆ ಬೀರಲಿದೆ. ಬಿಜೆಪಿ ಪಾಲಿಗೆ ಮಹಾರಾಷ್ಟ್ರ ಪ್ರಮುಖವಾದ ರಾಜ್ಯವಾಗಿದೆ. ತನ್ನ ಸಂಘಟನೆಯ ಬಲ, ತಳಮಟ್ಟದಲ್ಲಿ ಕೆಲಸ ಮಾಡುವ ಕಾರ್ಯಕರ್ತರ ಪಡೆ ಮೂಲಕ ಪಕ್ಷ ಚುನಾವಣೆ ಎದುರಿಸಲಿದ್ದು, ಲೋಕಸಭೆ ಚುನಾವಣೆ 2024ರಲ್ಲಿ ರಾಜ್ಯದಲ್ಲಿ ಆದ ಹಿನ್ನಡೆಯನ್ನು ಮರೆತು ಕೆಲಸ ಮಾಡಬೇಕಿದೆ.
ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹರಿಯಾಣದಲ್ಲಿ ನೇರ ಪೈಪೋಟಿ ಇತ್ತು. ಆದರೆ ಬಿಜೆಪಿ ಮತ್ತೆ ಅಧಿಕಾರ ಹಿಡಿಯುವಲ್ಲಿ ಸಫಲವಾಗಿದೆ. ಈ ಫಲಿತಾಂಶ ಮಹಾರಾಷ್ಟ್ರದಲ್ಲಿಯೂ ಪಕ್ಷಕ್ಕೆ ಸಹಕಾರಿಯಾಗಲಿದೆ ಎಂದು ಅಂದಾಜಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಕಾಂಗ್ರೆಸ್ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿತ್ತು. ಆದರೆ ಜನರು ರಾಷ್ಟ್ರೀಯ ಪಕ್ಷವನ್ನು ಬಿಟ್ಟು ಪ್ರಾದೇಶಿಕ ಪಕ್ಷವಾದ ನ್ಯಾಷನಲ್ ಕಾನ್ಫರೆನ್ಸ್ಗೆ ಹೆಚ್ಚು ಬೆಂಬಲ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷಗಳು 'ಮಹಾವಿಕಾಸ್ ಅಘಾಡಿ' ಮೈತ್ರಿಕೂಟವನ್ನು ಕಾಂಗ್ರೆಸ್ ನೇತೃತ್ವದಲ್ಲಿ ರಚನೆ ಮಾಡಿಕೊಂಡಿವೆ. ಕಾಂಗ್ರೆಸ್, ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್ಸಿಪಿ (ಶರದ್ ಪವಾರ್) ನೇತೃತ್ವದ ಪಕ್ಷಗಳ ಮೈತ್ರಿಕೂಟ ಇದಾಗಿದೆ. ಚುನಾವಣೆ ಎದುರಿಸಲು ಪಕ್ಷಗಳು ಸೀಟು ಹಂಚಿಕೆ ಮಾತುಕತೆಯಲ್ಲಿ ತೊಡಗಿವೆ.
ಪ್ರಾದೇಶಿಕ ಪಕ್ಷಗಳಿಗೆ ಸಿಗುತ್ತಿರುವ ಬೆಂಬಲ, ಮೈತ್ರಿಕೂಟದಲ್ಲಿ ಕಾಂಗ್ರೆಸ್ ಜೊತೆಗಿನ ಅಸಮಾಧಾನದ ಕಾರಣ ಆಗುತ್ತಿರುವ ಹಿನ್ನಡೆ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟಕ್ಕೆ ಸಹಾಯಕವಾಗುತ್ತಿದೆ. ಮಹಾರಾಷ್ಟ್ರದಲ್ಲಿಯೂ ಇದೇ ಮಾದರಿಯಲ್ಲಿ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್ಸಿಪಿ (ಅಜಿತ್ ಪವಾರ್ ಬಣ) ಸೇರಿರುವ 'ಮಹಾಯುತಿ' ಮೈತ್ರಿಕೂಟಕ್ಕೆ ಜನರ ಬೆಂಬಲ ಸಿಗುವ ನಿರೀಕ್ಷೆಯಲ್ಲಿ ಬಿಜೆಪಿ ಇದೆ.












Click it and Unblock the Notifications