Rain Alert: ತಮಿಳುನಾಡಿಗೆ ಭಾರಿ ಮಳೆ ಎಚ್ಚರಿಕೆ; ಬೆಂಗಳೂರಿನಲ್ಲಿ ಮುಂಜಾನೆಯೇ ತುಂತುರು ಮಳೆ
ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾನುವಾರ ರಾತ್ರಿಯಿಂದ ಭಾರಿ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಸೋಮವಾರ ಚೆನ್ನೈ ಸೇರಿದಂತೆ 9 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದ್ದು ಪ್ರವಾಹ ಭೀತಿ ಎದುರಾಗಿದೆ. ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಬೆಳಿಗ್ಗೆಯಿಂದಲೇ ಮಳೆ ಅಬ್ಬರಿಸಲು ಶುರು ಮಾಡಿದೆ.
ವಿಲ್ಲುಪುರಂ, ಕಡಲೂರು ಮತ್ತು ಅರಿಯಲೂರ್, ಪೆರಂಬಲೂರು, ಮೈಲಾಡುತುರೈ, ತಂಜಾವೂರು, ತಿರುವರೂರು, ನಾಗಪಟ್ಟಣಂ, ಪುದುಕೊಟ್ಟೈ, ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು, ಇರಾನಿಪೇಟ್, ತಿರುವಣ್ಣಾಮಲಪೇಟೆ, ಕಲ್ಲುಕುರಿಚಿ, ತಿರುವಣ್ಣಾಮಲಪೇಟೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಚೆನ್ನೈ ಮತ್ತು ಕೊಯಮತ್ತೂರಿನಲ್ಲಿ ಭಾನುವಾರ ಸುರಿದ ಭಾರಿ ಮಳೆಯಿಂದ ಹಲವು ಪ್ರದೇಶಗಳಲ್ಲಿ ಮುಳುಗಡೆ ಭೀತಿ ಎದುರಾಗಿದೆ. ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಭಾರಿ ಮಳೆ ಎಚ್ಚರಿಕೆ ನಡುವೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ, ಎಂದಿನಂತೆ ಶಾಲಾ-ಕಾಲೇಜು ತೆರೆಯಲಿದೆ ಎಂದು ಶಿಕ್ಷಣ ಇಲಾಖೆ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.
ರೆಡ್ ಅಲರ್ಟ್ ಕೊಟ್ಟ ಐಎಂಡಿ
ಚೆನ್ನೈ ನಗರದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು ಚೆನ್ನೈ ನಗರಕ್ಕೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 15ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಅಕ್ಟೋಬರ್ 16ರಂದು ರೆಡ್ ಅಲರ್ಟ್ ನಿಡಲಾಗಿದೆ. ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು, ರಾಣಿಪೇಟ್, ತಿರುವಣ್ಣಾಮಲೈ ಮತ್ತು ಪುದುಚೇರಿ ಜಿಲ್ಲೆಗಳಿಗೆ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಈಶಾನ್ಯ ಮಾನ್ಸೂನ್ ಪ್ರಾರಂಭವಾಗುವ ಮೊದಲೇ, ತಮಿಳುನಾಡಿನ ಹಲವಾರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಮಧುರೈನಲ್ಲಿ 16 ಸೆಂಟಿ ಮೀಟರ್ ಮಳೆಯಾಗಿದ್ದು, ಶಿವಗಂಗಾ ಜಿಲ್ಲೆಯಲ್ಲಿ 14 ಸೆಂ.ಮೀ., ವಿರುದನಗರ ಜಿಲ್ಲೆಯಲ್ಲಿ 12 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸರ್ಕಾರದಿಂದ ಸಕಲ ಸಿದ್ಧತೆ
ಚೆನ್ನೈ ನಗರದಲ್ಲಿ ಹಿಂಗಾರು ಮಳೆ ಹಲವು ಬಾರಿ ಪ್ರವಾಹವನ್ನೇ ಸೃಷ್ಟಿಸಿದೆ. ಸತತ ಮೂರು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇರುವ ಕಾರಣ, ಹಲವು ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಆತಂಕ ಎದುರಾಗಿದೆ. ಈಗಾಗಲೇ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಕೂಡ ಸಿದ್ಧತೆ ಮಾಡಿಕೊಂಡಿದೆ.
ಅಕ್ಟೋಬರ್ 17ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಮಂಗಳವಾರ ಮತ್ತು ಬುಧವಾರ ಮಳೆ ಪ್ರಮಾಣ ತೀವ್ರಗೊಳ್ಳಲಿದ್ದು, ಗಂಟೆಗೆ 55 ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.
ಬೆಂಗಳೂರು ಫುಲ್ ಕೂಲ್
ತಮಿಳುನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದರೆ ಇತ್ತ ಬೆಂಗಳೂರು ಕೂಡ ಫುಲ್ ಕೂಲ್ ಆಗಿದೆ. ಸೋಮವಾರ ಮೋಡ ಕವಿದ ವಾತಾವರಣ ಇದ್ದು, ಬೆಳಗ್ಗೆ ಬೆಳಗ್ಗೆಯೇ ನಗರದ ಹಲವು ಕಡೆಗಳಲ್ಲಿ ತುಂತುರು ಮಳೆ ಶುರುವಾಗಿದೆ. ಸೋಮವಾರ ಸಂಜೆ ನಗರದಲ್ಲಿ ಕೂಡ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.












Click it and Unblock the Notifications