Rain Alert: ರಾಜಧಾನಿಯಲ್ಲಿ ಹೋಳಿ ಹಬ್ಬದ ಸಂಭ್ರಮ ಹೆಚ್ಚಿಸಿದ ಮಳೆ!
ದೇಶದ ಹಲವು ಕಡೆಗಳಲ್ಲಿ ಶುಕ್ರವಾರ ಸಂಭ್ರಮದ ಹೋಳಿ ಹಬ್ಬ ಆಚರಿಸಲಾಗಿದೆ. ಹೆಚ್ಚಿದ ತಾಪಮಾನದ ನಡುವೆಯೂ ಜನರ ಸಂಭ್ರಮ ಕಡಿಮೆಯಾಗಿರಲಿಲ್ಲ. ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಹೋಳಿ ಹಬ್ಬದ ಸಂಭ್ರಮ ಜೋರಾಗಿತ್ತು, ಮಳೆ ಕೂಡ ಹಬ್ಬದ ಸಂಭ್ರಮ ಹೆಚ್ಚಿಸಿದೆ. ಶುಕ್ರವಾರ ಮಧ್ಯಾಹ್ನದ ಬಳಿಕ ದೆಹಲಿಯ ಹಲವು ಭಾಗಗಳಲ್ಲಿ ಮಳೆಯಾಗಿದ್ದು ವಾತಾವರಣವನ್ನು ತಂಪಾಗಿಸಿದೆ.
ಸಾಧಾರಣ ಮಳೆಯಾದರೂ ದೆಹಲಿ ವಾತಾವರಣ ತಂಪಾಗಿದ್ದು ಗಾಳಿಯ ಗುಣಮಟ್ಟದಲ್ಲಿ ಗಮನಾರ್ಹ ಸುಧಾರಣೆಯಾಗಿದೆ. ಸತತ ಎರಡು ದಿನ ಕಳಪೆ ಗುಣಮಟ್ಟದಲ್ಲಿದ್ದಗಾಳಿಯ ಗುಣಮಟ್ಟ ಬಳಿಕ 'ಮಧ್ಯಮ'ಕ್ಕೆ ಸುಧಾರಣೆಯಾಗಿದೆ. ಭಾರತ ಹವಾಮಾನ ಇಲಾಖೆ (ಐಎಂಡಿ) ಮಳೆಯ ಮುನ್ಸೂಚನೆ ಕೊಟ್ಟಿದೆ.

ಶುಕ್ರವಾರ ಹಗಲಿನ ಸಂದರ್ಭದಲ್ಲಿ ಮೋಡ ಕವಿದ ವಾತಾವರಣವಿದ್ದು ರಾತ್ರಿ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಪಶ್ಚಿಮದ ಅಲೆಗಳ ಪ್ರಭಾವದಿಂದಾಗಿ ಶನಿವಾರ ಕೂಡ ದೆಹಲಿಯ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಹೋಳಿ ಆಚರಣೆಯ ಸಮಯದಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿರುವುದರಿಂದ, ಮುಂಬರುವ ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿತ್ತು.
ದೆಹಲಿ ಮಾತ್ರವಲ್ಲದ ಗಾಜಿಯಾಬಾದ್ನಲ್ಲಿ ಕೂಡ ಮಳೆಯಾಗಿದೆ. ಶನಿವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದೆ. ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಕರ್ನಾಟಕದಲ್ಲೂ ಮಳೆ ಮುನ್ಸೂಚನೆ!
ಕರ್ನಾಟಕದಲ್ಲೂ ಪೂರ್ವ ಮುಂಗಾರು ಮಳೆ ಅಬ್ಬರಿಸುವ ಸೂಚನೆ ಸಿಕ್ಕಿದೆ. ರಾಜ್ಯದ ಹಲು ಜಿಲ್ಲೆಗಳಲ್ಲಿ ಈಗಾಗಲೇ ವರ್ಷದ ಮೊದಲ ಮಳೆ ಸುರಿದಿದೆ. ಮಾರ್ಚ್ ಮೂರು ಮತ್ತು ನಾಲ್ಕನೇ ವಾರ ಕೂಡ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶನಿವಾರ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಏಪ್ರಿಲ್, ಮೇ, ಜೂನ್ ಮತ್ತು ಜುಲೈ ತಿಂಗಳಿನಲ್ಲಿ ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ತಿಳಿಸಿದ್ದು, ಹಿಂಗಾರು ದುರ್ಬಲವಾಗಬಹುದು ಎಂದು ಹೇಳಿದೆ.












Click it and Unblock the Notifications