Heavy rain: ಭಾರೀ ಮಳೆ ಹಿನ್ನೆಲೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ-ಎಲ್ಲಿ?
ನವದೆಹಲಿ, ನವೆಂಬರ್, 24: ಈಗಾಗಲೇ ದೇಶದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ತಮಿಳುನಾಡು, ಕೇರಳ ರಾಜ್ಯದ ಹಲವೆಡೆ ಜಲಪ್ರಳಯದಂತಹ ವಾತಾವರಣ ನಿರ್ಮಾಣವಾಗಿದೆ. ಇನ್ನು ತಮಿಳುನಾಡಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನವೆಂಬರ್ 24ರಂದು ಕೂನೂರು ಮತ್ತು ಕೋಟಗಿರಿಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಿ ನೀಲಗಿರಿ ಜಿಲ್ಲಾಧಿಕಾರಿ ಎಂ.ಅರುಣಾ ಅವರು ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ತಮಿಳುನಾಡಿನ ತಿರುನಲ್ವೇಲಿ, ಕನ್ಯಾಕುಮಾರಿ, ತೂತುಕುಡಿ, ತೆಂಕಶಿ, ವಿರುತ್ತುನಗರ, ತೇಣಿ, ಪುದುಕೊಟ್ಟೈ ಮತ್ತು ನೀಲಗಿರಿ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಎಲ್ಲಾ ಶಾಲೆಗಳನ್ನು ಮುಚ್ಚುವ ನಿರ್ಧಾರವನ್ನು 8 ಜಿಲ್ಲೆಗಳ ಜಿಲ್ಲಾಧಿಕಾರಿಗಳು ತೆಗೆದುಕೊಂಡಿದ್ದಾರೆ ಎಂದು ಪಿಟಿಐ ತಿಳಿಸಿದೆ.

ಶಾಲೆಗಳಿಗೆ ರಜೆ ಘೋಷಣೆ
ಇದಲ್ಲದೆ, ನವೆಂಬರ್ 22ರಂದು ಭಾರೀ ಮಳೆ ಹಿನ್ನೆಲೆ ಪುದುಚೇರಿ ಮತ್ತು ಕರಿಕಲ್ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಪುದುಚೇರಿಯಲ್ಲಿ 5 ಸೆಂ.ಮೀಟರ್, ಕರಿಕಲ್ನಲ್ಲಿ 9 ಸೆಂಟಿ ಮೀಟರ್ ಮಳೆಯಾಗಿದೆ ಎಂದು ತಿಳಿದುಬಂದಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ನವೆಂಬರ್ 22ರಂದು ಬೆಂಳಗ್ಗೆ 8:30ರಿಂದ ಸಂಜೆ 5:30ರವರೆಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ಕೇರಳದ ಹಲವೆಡೆ ಭಾರೀ ಮಳೆಯಾಗಿದೆ. ಇನ್ನು ಭಾರೀ ಮಳೆ ಹಿನ್ನೆಲೆ ನವೆಂಬರ್ 23ರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿತ್ತು.
ಇದೀಗ ಮತ್ತೆ ಇಂದಿನಿಂದ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನು ಕೆಲವೆಡೆ ರಸ್ತೆಗಳೆಲ್ಲ ನದಿಯಂತೆ ಮಾರ್ಪಟಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗುದೆ. ಇನ್ನು ತಿರುಚಿರಾಪಳ್ಳಿ, ನೀಲಗಿರಿ ಜಿಲ್ಲೆ, ತೂತುಕುಡಿ ಜಿಲ್ಲೆ ಸೇರಿದಂತೆ ದಕ್ಷಿಣ ರಾಜ್ಯದ ಹಲವು ಭಾಗಗಳಲ್ಲಿ ಗುರುವಾರ ಭಾರೀ ಮಳೆಯಾಗಿದೆ.
ಕರ್ನಾಟಕದ ಹಲವೆಡೆ ಭಾರೀ ಮಳೆ
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಕರಾವಳಿ ಮತ್ತು ದಕ್ಷಿಣ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಬೆಂಗಳೂರಿನ ವಿಜ್ಞಾನಿ ಎ. ಪ್ರಸಾದ್ ಅವರು ತಿಳಿಸಿದ್ದಾರೆ.
ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಇಂದು 7 ಸೆಂಟಿ ಮೀಟರ್ ಮಳೆಯಾಗಿದ್ದು, ಇನ್ನು ಮೂರು ದಿನಗಳ ಕಾಲ ನಿರಂತರ ಮಳೆಯಾಗುವ ನಿರೀಕ್ಷೆಯಿದೆ. ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಭಾಗಗಳಲ್ಲಿ 64.5 ಮಿಲಿ ಮೀಟರ್ನಿಂದ 115.5 ಮಿಲಿ ಮೀಟರ್ ಮಳೆಯಾಗುವ ನಿರೀಕ್ಷೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಇನ್ನು ರಾಜ್ಯದ ಉತ್ತರ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಈ ಭಾಗದಲ್ಲಿ ಅಕ್ಟೋಬರ್ನಿಂದ ನವೆಂಬರ್ವರೆಗೆ ಶೇಕಡಾ 38ರಷ್ಟು ಮಳೆ ಕೊರತೆಯಾಗಿದೆ. ಇನ್ನು ಕರಾವಳಿ ಪ್ರದೇಶಗಳು ಶೇಕಡಾ 14ರಷ್ಟು ಮಳೆ ಕೊರತೆಯನ್ನು ಎದುರಿಸುತ್ತಿದ್ದರೆ, ಉತ್ತರ ಒಳನಾಡಿನಲ್ಲಿ ಶೇಕಡಾ 25ರಷ್ಟು ಮಳೆ ಕೊರತೆಯಾಗಿದೆ.
ಆದರೆ ಮೈಸೂರು ಮತ್ತು ಬೆಂಗಳೂರಿನಲ್ಲಿ ಈ ವರ್ಷ ಭಾರೀ ಮಳೆಯಾಗಿದೆ. ಮುಂದಿನ ಮೂರು ದಿನಗಳ ಕಾಲ ಉದ್ಯಾನನಗರಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ರಾತ್ರಿ ವೇಳೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications