Rain News: ಜಲಪ್ರಳಯಕ್ಕೆ ಉತ್ತರ ಭಾರತ ಆಹುತಿ- ಭೂಕುಸಿತಕ್ಕೆ ನಾಲ್ವರ ಬಲಿ, ಹಿಮಾಚಲದಲ್ಲಿ ಸಿಲುಕಿರುವ 200 ಮಲಯಾಳಿಗಳು
ನವದೆಹಲಿ, ಜುಲೈ 10: ಉತ್ತರ ಭಾರತದ ರಾಜ್ಯಗಳಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಹಲವಾರು ಪ್ರದೇಶಗಳಲ್ಲಿ ಜಲಪ್ರಳಯ ಉಂಟಾಗಿದೆ. ನೋಡನೋಡುತ್ತಿದ್ದಂತೆ, ಕಾರುಗಳ ಹಾಗೂ ಮನೆಗಳು ಆಟಿಕೆ ಸಾಮಾನುಗಳ ಹಾಗೆ ಕೊಚ್ಚಿಕೊಂಡು ಹೋಗುತ್ತಿವೆ. ಹೊಲಗದ್ದೆಗಳು ಜಲಾವೃತವಾಗಿದ್ದು, ನಗರಗಳಲ್ಲಿ ನೀರು ತುಂಬಿಕೊಂಡಿದೆ. ಇದರ ಬೆನ್ನಲ್ಲೇ ಭಾರೀ ಪ್ರಮಾಣದ ಭೂಕುಸಿತ ಸಂಭವಿಸುತ್ತಿವೆ.
ವಿಶೇಷವಾಗಿ ಹಿಮಾಚಲ ಪ್ರದೇಶವು ಮಹಾಮಳೆಗೆ ನಲುಗಿ ಹೋಗುತ್ತಿದೆ. ಇಂದು ಸಂಭವಿಸಿದ ಭೂಕುಸಿತದಲ್ಲಿ ನಾಲ್ಕು ಜನರು ಬಲಿಯಾಗಿದ್ದಾರೆ. 200 ಕ್ಕೂ ಹೆಚ್ಚು ಜನರು ಸಿಲುಕಿಕೊಂಡಿದ್ದಾರೆ. ಅವರೆಲ್ಲರೂ ಕೇರಳದಿಂದ ತೆರಳಿರುವ ಮಲಯಾಳಿ ಪ್ರವಾಸಿಗರೆಂದು ವರದಿಯಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ.
ದೆಹಲಿಯ ಯಮುನಾ ಸೇರಿದಂತೆ ಉತ್ತರ ಭಾರತದ ಹಲವಾರು ನದಿಗಳು ಉಕ್ಕಿ ಹರಿಯುತ್ತಿವೆ. ಯಮುನಾ ನದಿ ತಟದಲ್ಲಿ ಬರುವ ನಗರಗಳು ಮತ್ತು ಪಟ್ಟಣಗಳಲ್ಲಿ ನೀರು ನುಗ್ಗಿದೆ. ಅನೇಕ ರಸ್ತೆಗಳು ಮತ್ತು ವಸತಿ ಪ್ರದೇಶಗಳು ಜಲಾವೃತವಾಗಿವೆ. ಜನಜೀವನ ಸಂಪೂರ್ಣವಾಗಿ ಹದಗಟ್ಟಿದೆ.
ಧಾರಾಕಾರ ಮಳೆಯಿಂದ ಹಾನಿಗೊಳಗಾದ ರಾಜ್ಯಗಳಿಗೆ ಪಿಎಂ ಕೇರ್ಸ್ ನಿಧಿಯಿಂದ ಹೆಚ್ಚುವರಿ ಪರಿಹಾರ ನೀಡಬೇಕೆಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ವಿಚಾರವಾಗಿ ಪ್ರಧಾನಿ ಮೋದಿಯವರು ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ಅತಿಯಾಗಿ ಮಳೆ ಹಾನಿಗೆ ಒಳಗಾದ ಪ್ರದೇಶಗಳ ಬಗ್ಗೆ ಅವಲೋಕನ ನಡೆಸಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ.
ಸ್ಥಳೀಯ ಆಡಳಿತಗಳು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ತಂಡಗಳು ಸಂತ್ರಸ್ತರ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಕೆಲಸ ಮಾಡುತ್ತಿವೆ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.
ಶಿಮ್ಲಾದಲ್ಲಿ ನಡೆದ ಭೂಕುಸಿತದಲ್ಲಿ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಇಲ್ಲಿ ಮೂರನೇ ದಿನವೂ ಭಾರೀ ಮಳೆ ಮುಂದುವರಿದಿದೆ. ಶಿಮ್ಲಾ-ಕಲ್ಕಾ ಹೆದ್ದಾರಿಗೆ ಸೋಮವಾರ ಬೆಳಿಗ್ಗೆಯಿಂದ ನಿರ್ಬಂಧ ಹೇರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಎರಡು ದಿನಗಳಲ್ಲಿ ರಾಜ್ಯದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಹೇಳಿದ್ದಾರೆ.
ಪ್ರವಾಸಿ ಪಟ್ಟಣವಾದ ಮನಾಲಿಯಲ್ಲಿ ಸಿಲುಕಿದ್ದ 20 ಜನರನ್ನು ರಕ್ಷಿಸಲಾಗಿದೆ. ಆದರೆ ಸುಮಾರು 300 ಜನರು ರಾಜ್ಯದ ವಿವಿಧ ಭಾಗಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ ಬೆಳಗ್ಗೆ ಶಿಮ್ಲಾದ ಥಿಯೋಗ್ ಉಪವಿಭಾಗದ ಮನೆಯೊಂದರ ಬಳಿ ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಪಲ್ಲವಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ದೀಪ್ ಬಹದ್ದೂರ್, ದೇವದಾಸಿ ಮತ್ತು ಮೋಹನ್ ಬಹದ್ದೂರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿಮ್ಲಾ ನಗರದ ಹೊರವಲಯದಲ್ಲಿರುವ ರಾಜ್ಹಾನಾ ಗ್ರಾಮದಲ್ಲಿ ಭೂಕುಸಿತದ ನಂತರ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದ ವೃದ್ಧೆ ಹಾಗೂ ಆಕೆಯ ಮೊಮ್ಮಗಳ ಮೃತದೇಹಗಳನ್ನು ಭಾನುವಾರ ಹೊರತೆಗೆಯಲಾಯಿತು.
ಹವಾಮಾನ ಇಲಾಖೆಯು ಹಿಮಾಚಲ ಪ್ರದೇಶದಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಿದೆ. ರಾಜ್ಯದಲ್ಲಿ ಭಾರೀ ಮಳೆ ಸುರಿದ ಒಂದು ದಿನದ ನಂತರ, ಭೂಕುಸಿತಗಳನ್ನು ಸಂಭವಿಸುತ್ತಿರುವುದು ವರದಿಯಾಗಿದೆ. ಇದರಿಂದ ಮನೆಗಳಿಗೆ ಹಾನಿಯಾಗಿದೆ.
ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಶಿಮ್ಲಾ-ಕಲ್ಕಾ ಮಾರ್ಗದ ರೈಲು ಕಾರ್ಯಾಚರಣೆಯನ್ನು ಮಂಗಳವಾರದವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಾದ್ಯಂತ ಶಿಕ್ಷಣ ಸಂಸ್ಥೆಗಳನ್ನು ಸೋಮವಾರ ಮತ್ತು ಮಂಗಳವಾರ ಮುಚ್ಚಲು ಆದೇಶಿಸಲಾಗಿದೆ.

ಶಿಮ್ಲಾ ಜಿಲ್ಲೆಯಲ್ಲಿ 120ಕ್ಕೂ ಹೆಚ್ಚು ರಸ್ತೆಗಳು ಬಂದ್ ಆಗಿದ್ದು, 484 ನೀರು ಸರಬರಾಜು ಯೋಜನೆಗಳಿಗೆ ತೊಂದರೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ ಬೆಳಿಗ್ಗೆ ಬಿಡುಗಡೆ ಮಾಡಿದ ವಿಡಿಯೊದಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಸುಖು, ಜನರು ಜಾಗರೂಕರಾಗಿರು. ಮುಂದಿನ 24 ಗಂಟೆಗಳ ಕಾಲ ಯಾರೂ ಮನೆಗಳಿಂದ ಹೊರಬರಬೇಡಿ. ವಿಶೇಷವಾಗಿ ನದಿಗಳು ಮತ್ತು ಹಳ್ಳಗಳ ಬಳಿ ಹೋಗಲೇ ಬೇಡಿ ಎಂದು ಮನವಿ ಮಾಡಿದ್ದಾರೆ.
ಈ ಸಂಕಷ್ಟದ ಸಮಯದಲ್ಲಿ ಎಲ್ಲಾ ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿಯೇ ಉಳಿದು ಜನರಿಗೆ ಸಹಾಯ ಮಾಡುವಂತೆ ಅವರು ಕೇಳಿಕೊಂಡಿದ್ದಾರೆ.

ಉತ್ತರ ಭಾರತದಲ್ಲಿ ಮಳೆ ಸೃಷ್ಟಿಸಿರುವ ಆವಾಂತರಗಳ ಬಗ್ಗೆ ಟ್ವೀಟ್ ಮಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, 'ಉತ್ತರ ಭಾರತದಲ್ಲಿ ಭಾರೀ ಮಳೆಯಿಂದಾಗಿ ಹಲವಾರು ಜನರ ಸಾವಿಗೀಡಾಗಿದ್ದಾರೆ. ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯೊಂದಿಗೆ ಮಾತನಾಡಿದ್ದೇನೆ. ರಾಜ್ಯದಲ್ಲಿ ಪರಿಹಾರ ಪ್ರಯತ್ನಗಳು ಚುರುಕುಗೊಂಡಿವೆ. ಪ್ರತಿಕೂಲ ಹವಾಮಾನದ ಹೊರತಾಗಿಯೂ ಸಂತ್ರಸ್ತ ಜನರನ್ನು ಕರೆದೊಯ್ಯಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ' ಎಂದು ಖರ್ಗೆ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ನಗರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಮತ್ತು ಯಮುನಾ ನದಿ ನೀರಿನ ಮಟ್ಟ ಏರಿಕೆ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಸಭೆ ನಡೆಸಿದ್ದಾರೆ.
ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಉತ್ತರ ಪ್ರದೇಶದ ನದಿಗಳು ಉಕ್ಕಿಹರಿಯುವ ಸಾಧ್ಯತೆ ಇದೆ. ಆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳಿಗೆ ಎಚ್ಚರಿಕೆ ವಹಿಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ.
ಭಾರೀ ಮಳೆಯ ನಂತರದ ಪರಿಶೀಲನಾ ಸಭೆಯಲ್ಲಿ ಅವರು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಅಧಿಕಾರಿಗಳಿಗೆ ಆದೇಶಿದ್ದಾರೆ. ವಿಶೇಷವಾಗಿ ನದಿ ದಂಡೆಗಳು, ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ನ ಪ್ರವಾಹ ಘಟಕಗಳು ಮತ್ತು ವಿಪತ್ತು ನಿರ್ವಹಣಾ ತಂಡಗಳು ಜಾಗರೂಕರಾಗಿರಲು ಸೂಚಿಸಿದ್ದಾರೆ.
ಪಂಜಾಬ್ ಮತ್ತು ಹರಿಯಾಣದ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ. ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.
ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪಂಜಾಬ್ ಸರ್ಕಾರವು ಜುಲೈ 13 ರವರೆಗೆ ರಾಜ್ಯದ ಶಾಲೆಗಳಿಗೆ ರಜೆ ಘೋಷಿಸಿದೆ.
ಚಂಡೀಗಢದಲ್ಲಿ ಕಳೆದ ಮೂರು ದಿನಗಳಲ್ಲಿ ದಾಖಲೆಯ ಮಳೆಯಾಗಿದ್ದು, ಕೆಲವು ರಸ್ತೆಗಳು ಮಳೆ ನೀರಿನಿಂದ ತುಂಬಿವೆ.
ಭಾರೀ ಮಳೆಯಿಂದಾಗಿ ರಾಜ್ಯದ ಕೆಲವೆಡೆ ಪ್ರವಾಹ ಉಂಟಾಗಿದ್ದು, ಜನರು ಭಯಭೀತರಾಗಬೇಡಿ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮನವಿ ಮಾಡಿದ್ದಾರೆ.
ಮೊಹಾಲಿ, ಪಟಿಯಾಲ, ರೂಪನಗರ್, ಫತೇಘರ್ ಸಾಹಿಬ್, ಪಂಚಕುಲ ಮತ್ತು ಅಂಬಾಲಾ ಎರಡು ರಾಜ್ಯಗಳಲ್ಲಿ ಅತಿ ಹೆಚ್ಚು ಹಾನಿಗೊಳಗಾದ ಜಿಲ್ಲೆಗಳಾಗಿವೆ.
ನಿರಂತರ ಮಳೆಯಿಂದಾಗಿ ಉಂಟಾಗಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ದಿನದ ಎಲ್ಲಾ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ತುರ್ತು ಸಭೆಯನ್ನು ಕರೆದಿದ್ದಾರೆ.












Click it and Unblock the Notifications