ಮುಂದುವರಿದ ವರುಣನ ಅಬ್ಬರ: ಚೆನ್ನೈ ಸೇರಿ ತಮಿಳುನಾಡಿನ ಹಲವೆಡೆ ರೆಡ್ ಅಲರ್ಟ್
ಚೆನ್ನೈ, ನ.13: ತಮಿಳುನಾಡಿನಲ್ಲಿ ಮಳೆ ಆರ್ಭಟ ಮುಂದುವರೆದಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾನುವಾರವೂ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಗುಡುಗು ಸಹಿತ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ನೀಡಿದೆ.
ಚೆನ್ನೈ ಮತ್ತು ತಮಿಳುನಾಡಿನ ಹಲವಾರು ಭಾಗಗಳಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಭಾನುವಾರ ಬೆಳಗ್ಗೆಯಿಂದಲೇ ಚೆನ್ನೈ ಮತ್ತು ಅದರ ನೆರೆಯ ಹಲವು ಪ್ರದೇಶಗಳಲ್ಲಿ ಮಳೆ ಸುರಿಯುತ್ತಿದೆ. ಶುಕ್ರವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿವೆ.

ವರುಣನ ಅಬ್ಬರದಿಂದಾಗಿ ತಿರುವಳ್ಳೂರು, ಮಧುರೈ, ಶಿವಗಂಗಾ ಮತ್ತು ಕಾಂಚೀಪುರಂ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಶಾಲೆಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ. ಮಧುರೈ, ಕಾಂಚೀಪುರಂ ಮತ್ತು ತ್ರಿವಲ್ಲೂರಿನಲ್ಲಿ ನಿರಂತರ ಮಳೆಯ ಕಾರಣ ಶಾಲಾ- ಕಾಲೇಜುಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ.
ಇದಲ್ಲದೆ, ಶಿವಗಂಗಾ, ದಿಂಡಿಗಲ್, ಥೇಣಿ ಮತ್ತು ರಾಮನಾಥಪುರಂ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಪ್ರವಾಹದ ಎಚ್ಚರಿಕೆ ನೀಡಿದೆ. ಥೇನಿಯ ವೈಗಂ ಅಣೆಕಟ್ಟಿನಿಂದ 4,230 ಕ್ಯೂಬಿಕ್ ಅಡಿ ಹೆಚ್ಚುವರಿ ನೀರನ್ನು ಹೊರ ಬಿಡಲಾಗಿದೆ ಎಂದು ವೈಗಂ ಅಣೆಕಟ್ಟು ಸೈಟ್ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಮಿಳುನಾಡು ಮತ್ತು ನೆರೆಹೊರೆಯಲ್ಲಿ ಚಂಡಮಾರುತದ ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ಈ ಹಿಂದೆ ಹೇಳಿತ್ತು. ಇದರಿಂದಾಗಿ ಕರ್ನಾಟಕಕ್ಕೂ ಮಳೆಯಾಗುತ್ತಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ತೀವ್ರ ವಾಯುಭಾರ ಕುಸಿತದಿಂದಾಗಿ ದಕ್ಷಿಣ ರಾಜ್ಯ ಮತ್ತು ಪುದುಚೇರಿ ಕರಾವಳಿಯಲ್ಲಿ ನವೆಂಬರ್ 15 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಚೆನ್ನೈ ಮತ್ತು ತಮಿಳುನಾಡಿನ ಇತರ ಜಿಲ್ಲೆಗಳಲ್ಲಿ ಈ ತಿಂಗಳ ಆರಂಭದಿಂದಲೂ ತೀವ್ರ ಮಳೆಯಾಗುತ್ತಿದೆ. ನವೆಂಬರ್ 1 ರಂದು, ಚೆನ್ನೈ 8.4 ಸೆಂ.ಮೀ ಮಳೆಯನ್ನು ದಾಖಲಿಸಿದೆ. ನಗರವು 30 ವರ್ಷಗಳಲ್ಲಿ ಕಂಡ ಅತ್ಯಧಿಕ ಮಳೆಯಾಗಿದೆ. ತುಂತುರು ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ತುಂಬಿ, ರಸ್ತೆಗಳ ಜಲಾವೃತವಾಗಿ ಸಂಚಾರ ದಟ್ಟಣೆ ಉಂಟಾಗಿತ್ತು. ಈ ಮಹಾ ಮಳೆ ಎರಡು ಜೀವಗಳನ್ನು ಬಲಿ ತೆಗೆದುಕೊಂಡಿದೆ.












Click it and Unblock the Notifications