ಸೆಪ್ಟೆಂಬರ್ 4ರವರೆಗೂ ಈ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ
ನವದೆಹಲಿ, ಸೆಪ್ಟೆಂಬರ್ 01: ಆಗಸ್ಟ್ ತಿಂಗಳಾಂತ್ಯದಲ್ಲಿ ಕೆಲವು ರಾಜ್ಯಗಳಲ್ಲಿ ಮಳೆ ಚುರುಕು ಪಡೆದಿದ್ದು, ಸೆಪ್ಟೆಂಬರ್ ಮೊದಲ ವಾರದಲ್ಲಿ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 2ರಿಂದ ಮಳೆ ಪ್ರಮಾಣ ಹೆಚ್ಚಾಗಲಿದ್ದು, ಸೆಪ್ಟೆಂಬರ್ 4ರವರೆಗೂ ಕೆಲವು ರಾಜ್ಯಗಳಲ್ಲಿ ಮಳೆ ಅಧಿಕವಾಗಲಿದೆ ಎಂದು ತಿಳಿಸಿದೆ.
ಪಶ್ಚಿಮ ಹಾಗೂ ಮಧ್ಯ ಭಾರತದಲ್ಲಿ ಈ ಅವಧಿಯಲ್ಲಿ ಅತಿ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಿದೆ.
ತೆಲಂಗಾಣ, ಮಧ್ಯ ಪ್ರದೇಶದಲ್ಲಿ ಅಧಿಕ ಮಳೆಯಾಗಲಿದ್ದು, ರಾಜಸ್ಥಾನದಲ್ಲಿ ಸೆಪ್ಟೆಂಬರ್ 2ರವರೆಗೂ ಮಳೆ ಮುಂದುವರೆಯಲಿದೆ; ಅಸ್ಸಾಂ ಹಾಗೂ ಮೇಘಾಲಯದಲ್ಲಿ ಸೆಪ್ಟೆಂಬರ್ 1ರಂದು, ಮಿಜೋರಾಂ, ತ್ರಿಪುರಾದಲ್ಲಿ ಸೆಪ್ಟೆಂಬರ್ 3-4ರಂದು ಅಧಿಕ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.
ಸೆಪ್ಟೆಂಬರ್ 1 ಹಾಗೂ 2ರಂದು ಗುಜರಾತ್ನಲ್ಲಿ ಅಧಿಕ ಮಳೆಯಾಗಲಿದೆ. ಉತ್ತರ ಕೊಂಕಣ, ದಕ್ಷಿಣ ಗುಜರಾತ್ ಹಾಗೂ ಮಹಾರಾಷ್ಟ್ರದ ಮಧ್ಯ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಮುಂದೆ ಓದಿ...

ಈ ರಾಜ್ಯಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಮಳೆ
ತಮಿಳುನಾಡು, ಕರ್ನಾಟಕದ ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 2 ಹಾಗೂ 3ರಂದು, ಆಂಧ್ರದ ಕರಾವಳಿ ಪ್ರದೇಶದಲ್ಲಿ ಸೆಪ್ಟೆಂಬರ್ 2-4 ಸೆಪ್ಟೆಂಬರ್ವರೆಗೂ ಮಳೆಯಾಗುವುದಾಗಿ ತಿಳಿಸಿದೆ. ರಾಜಸ್ಥಾನ, ಉತ್ತರ ಪ್ರದೇಶದಲ್ಲಿ ಸೆಪ್ಟೆಂಬರ್ 1ರವರೆಗೆ ಹಾಗೂ ಹರಿಯಾಣದಲ್ಲಿ ಸೆಪ್ಟೆಂಬರ್ 1ರಂದು ಮಳೆಯಾಗುವುದಾಗಿ ಮುನ್ಸೂಚನೆ ನೀಡಿದೆ. ರಾಜಸ್ಥಾನ, ಮಧ್ಯ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವುದಾಗಿ ಹೇಳಿದೆ.

ದೆಹಲಿಯಲ್ಲಿ ಮತ್ತೆ ಮಳೆ
ದೆಹಲಿಯಲ್ಲಿ ಕೆಲವು ದಿನಗಳಿಂದ ಬಿಡುವು ಪಡೆದುಕೊಂಡಿದ್ದ ಮಳೆ ಮತ್ತೆ ಚುರುಕಾಗಿದೆ. ಹಲವು ಪ್ರದೇಶಗಳು ಭಾರೀ ಮಳೆಯಿಂದಾಗಿ ಜಲಾವೃತವಾಗಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮೂರ್ನಾಲ್ಕು ದಿನಗಳ ಕಾಲ ಭಾರಿ ಮಳೆ ಮುಂದುವರೆಯುವುದಾಗಿ ತಿಳಿಸಿದ್ದು, ಹಲವು ಪ್ರದೇಶಗಳಿಗೆ ಅಲರ್ಟ್ ನೀಡಲಾಗಿದೆ. ಬುಧವಾರದ ನಂತರ ಮಳೆ ತೀವ್ರತೆ ಹೆಚ್ಚಲಿದೆ ಎಂದು ಹೇಳಿದೆ. ಗುರುಗ್ರಾಮ, ಮನೇಸರ, ಫರೀದಾಬಾದ್, ನೋಯ್ಡ, ಇಂದಿರಾಪುರ, ಗಾಜಿಯಾಬಾದ್, ದಾದ್ರಿ ಪ್ರದೇಶಗಳಲ್ಲಿ ಎಚ್ಚರಿಕೆ ನೀಡಿದೆ. ಮುಂಬೈ ನಗರದಲ್ಲಿಯೂ ಭಾರೀ ಮಳೆ ದಾಖಲಾಗಿದೆ.

ಆಗಸ್ಟ್ ತಿಂಗಳಿನಲ್ಲಿ ಕಡಿಮೆ ಮಳೆ ದಾಖಲು
ಆಗಸ್ಟ್ ತಿಂಗಳಲ್ಲೂ ಕಡಿಮೆ ಮಳೆ ದಾಖಲು ಜುಲೈ ತಿಂಗಳಿನಂತೆ ಆಗಸ್ಟ್ ತಿಂಗಳಿನಲ್ಲಿಯೂ ಸಾಮಾನ್ಯಕ್ಕಿಂತ ಕಡಿಮೆ ಮಳೆ ದಾಖಲಾಗಿದೆ. ಆಗಸ್ಟ್ನಲ್ಲಿ ಸಾಮಾನ್ಯಕ್ಕಿಂತ 26% ಕಡಿಮೆ ಮಳೆ ದಾಖಲಾಗಿರುವುದಾಗಿ ತಿಳಿಸಿದೆ. ಜುಲೈ ತಿಂಗಳಿನಲ್ಲಿ ಸಾಮಾನ್ಯಕ್ಕಿಂತ 7% ಮಳೆ ಕಡಿಮೆಯಾಗಿತ್ತು. ಇದೀಗ ಆಗಸ್ಟ್ನಲ್ಲಿ ಮಳೆ ಕೊರತೆ ಇನ್ನಷ್ಟು ಅಧಿಕವಾಗಿದೆ. ಈ ಬಾರಿ 26% ಮಳೆ ಕಡಿಮೆಯಾಗಿದೆ ಎಂದು ಐಎಂಡಿ ನಿರ್ದೇಶಕ ಮೃತ್ಯುಂಜಯ ಮಹೋಪಾತ್ರ ತಿಳಿಸಿದ್ದಾರೆ. ಉತ್ತರ ಹಾಗೂ ಮಧ್ಯ ಭಾರತದಲ್ಲಿ ಕಡಿಮೆ ಮಳೆ ದಾಖಲಾಗಿರುವುದಾಗಿ ಮಾಹಿತಿ ನೀಡಿದ್ದಾರೆ. ಜೂನ್ ತಿಂಗಳಿನಲ್ಲಿ 10% ಅಧಿಕ ಮಳೆ ಪ್ರಮಾಣ ದಾಖಲಾಗಿತ್ತು. ಸೆಪ್ಟೆಂಬರ್ ತಿಂಗಳ ಮಳೆ ಮುನ್ಸೂಚನೆಯನ್ನು ಶೀಘ್ರವೇ ಬಿಡುಗಡೆಗೊಳಿಸುವುದಾಗಿ ತಿಳಿಸಿದ್ದಾರೆ. ಈ ಬಾರಿ ಜೂನ್ನಿಂದ ಸೆಪ್ಟೆಂಬರ್ ತಿಂಗಳವರೆಗೆ ಒಟ್ಟಾರೆ ಮಳೆ ಪ್ರಮಾಣ ಕಡಿಮೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಕರ್ನಾಟಕದಲ್ಲಿ ಸೆಪ್ಟೆಂಬರ್ 5ರವರೆಗೂ ಮಳೆ
ರಾಜ್ಯದಲ್ಲಿ ಸೆಪ್ಟೆಂಬರ್ 5ರವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಮುಂದುವರೆಯುವುದಾಗಿ ತಿಳಿಸಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಹಾಸನ ಹಾಗೂ ಕೋಲಾರದಲ್ಲಿ ಸೆಪ್ಟೆಂಬರ್ 5ರವರೆಗೂ ವ್ಯಾಪಕ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ.












Click it and Unblock the Notifications