Heavy Rains ಹೈದರಾಬಾದ್ಗೆ ಜಲದಿಗ್ಬಂಧನ: 2 ರಾಜ್ಯದಲ್ಲೂ ಪರದಾಟ!
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಆಂಧ್ರಪ್ರದೇಶ ಹಾಗೂ ತೆಲಂಗಾಣ ಎರಡೂ ರಾಜ್ಯದಲ್ಲೂ ಭಾರಿ ಮಳೆಯಾಗುತ್ತಿದೆ. ಜನ ಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದ್ದು, ಎರಡೂ ರಾಜ್ಯದಲ್ಲೂ ಸಾವು- ನೋವಿನ ಪ್ರಮಾಣ ಹೆಚ್ಚಳವಾಗುತ್ತಿದೆ. ಹೈದರಾಬಾದ್ನಲ್ಲಿ ಪರಿಸ್ಥಿತಿ ಬಿಗಡಾಯಿಸುತ್ತಿದ್ದು, ಮಳೆಯಿಂದ ಹಲವು ಪ್ರದೇಶಗಳು ಜಲಾವೃತವಾಗಿರುವುದು ವರದಿಯಾಗಿದೆ.
ಹೈದರಾಬಾದ್ಗೆ ಜಲದಿಗ್ಬಂಧನ
ಭಾರೀ ಮಳೆಯಿಂದಾಗಿ ತೆಲಂಗಾಣದ ರಾಜಧಾನಿ ಹೈದರಾಬಾದ್ ಸಂಪೂರ್ಣ ಜಲಾವೃತವಾಗಿದೆ. ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಜನ ಪರದಾಡುತ್ತಿದ್ದಾರೆ. ಇನ್ನು ತೆಲಂಗಾಣದಲ್ಲಿ ಭಾರೀ ಮಳೆಯಿಂದಾಗಿ ಇಲ್ಲಿಯವರೆಗೆ 16 ಜನ ಮೃತಪಟ್ಟಿರುವುದು ವರದಿಯಾಗಿದೆ. ಭಾರೀ ಮಳೆಯಿಂದಾಗಿ ಸಾವನ್ನಪ್ಪಿದವರ ಕುಟುಂಬದವರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ತೆಲಂಗಾಣದ ಮುಖ್ಯಮಂತ್ರಿ ರೇವಂತ ರೆಡ್ಡಿ ಹೇಳಿದ್ದು, ಕೂಡಲೇ ಕೇಂದ್ರ ಸರ್ಕಾರವು ರಾಜ್ಯದ ನೆರವಿಗೆ ಬರಬೇಕು ಎಂದು ಆಗ್ರಹಿಸಿದ್ದಾರೆ. ಪ್ರವಾಹಪೀಡಿತ ಪ್ರದೇಶಗಳಿಗ ಭೇಟಿ ನೀಡಿ, ಜನರ ಸಮಸ್ಯೆ ಆಲಿಸುತ್ತಿರುವ ತೆಲಂಗಾಣದ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರು ಜನ ಧೈರ್ಯದಿಂದ ಇರಬೇಕು. ನಾವು ಎಲ್ಲರ ರಕ್ಷಣೆಗೆ ಅಗತ್ಯ ಕ್ರಮ ವಹಿಸುತ್ತಿದ್ದೇವೆ. ಕೇಂದ್ರದಿಂದಲೂ ನೆರವು ನಿರೀಕ್ಷೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಮಧ್ಯರಾತ್ರಿ 2 ಗಂಟೆಯವರೆಗೂ ಸ್ಥಳದಲ್ಲೇ ಇದ್ದ ಚಂದ್ರಬಾಬು
ತೆಲಂಗಾಣದಂತೆ ಆಂಧ್ರಪ್ರದೇಶದಲ್ಲೂ ಭಾರೀ ಮಳೆಯಿಂದ ಜನ ಜೀವನ ಸಂಪೂರ್ಣ ಹದಗೆಟ್ಟಿದ್ದು, ಹಲವರು ಮಳೆಯಿಂದ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ವಿಜಯವಾಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ಈ ಭಾಗದಲ್ಲಿ ಜನ ಸಂಕಷ್ಟದಲ್ಲಿದ್ದು, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ವಿಜಯವಾಡ ಜಿಲ್ಲೆಗೆ ಭೇಟಿ ನೀಡಿದ್ದು, ಸೋಮವಾರ ತಡರಾತ್ರಿ 2 ಗಂಟೆಯ ವರೆಗೂ ಅಲ್ಲದೇ ಇದ್ದು, ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಸಿ.ಎಂ ಪಟ್ಟು
ಆಂಧ್ರಪ್ರದೇಶ ಹಾಗೂ ತೆಲಂಗಾಣ ಎರಡೂ ರಾಜ್ಯದಲ್ಲೂ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಮೇಲ್ಸೇತುವೆಗಳು, ರಸ್ತೆಗಳು ಸಂಪೂರ್ಣ ನೀರಿನಲ್ಲಿ ಮುಳುಗಡೆಯಾಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಹಲವು ತಗ್ಗು ಪ್ರದೇಶಗಳು ಜಲವಾವೃತವಾಗಿದ್ದು, ಇನ್ನೂ ನೀರಿನ ಮಟ್ಟ ಇಳಿಕೆಯಾಗಿಲ್ಲ. ಎರಡೂ ರಾಜ್ಯಗಳಲ್ಲೂ ಮಳೆಯಿಂದ ತೀವ್ರ ಪ್ರವಾಹ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳು ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಆಗ್ರಹಿಸಿವೆ.

ಈ ಸಂಬಂಧ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ತೆಲಂಗಾಣದ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಎರಡೂ ರಾಜ್ಯಗಳಲ್ಲಿ ಉಂಟಾಗಿರುವ ಮಳೆ ಅನಾಹುತದ ಪ್ರಮಾಣ ತೀವ್ರವಾಗಿದೆ. ಹೀಗಾಗಿ ಎರಡೂ ರಾಜ್ಯಗಳಲ್ಲೂ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಆಗ್ರಹಿಸಿದ್ದಾರೆ. ಈ ಸಂಬಂಧ ಎರಡೂ ರಾಜ್ಯಗಳಲ್ಲೂ ಮುಖ್ಯಮಂತ್ರಿಗಳು ಪ್ರತ್ಯೇಕವಾಗಿ ಮನವಿ ಮಾಡಿದ್ದಾರೆ.












Click it and Unblock the Notifications