Jharkhand Election: ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹೇಮಂತ್ ಸೊರೇನ್
ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮುಖ್ಯಸ್ಥ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕರಿಸಿದರು. ನಾಲ್ಕನೇ ಬಾರಿಗೆ ಜಾರ್ಖಂಡ್ನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ರಾಂಚಿಯಲ್ಲಿ ನಡೆದ ಅದ್ದೂರಿ ಪ್ರಮಾಣವಚನ ಸಮಾರಂಭದಲ್ಲಿ ಕಾಂಗ್ರೆಸ್, ಜೆಎಂಎಂ, ಎಎಪಿ ಸೇರಿದಂತೆ ಇಂಡಿಯಾ ಒಕ್ಕೂಟದ ಪ್ರಮುಖ ನಾಯಕರು ಹಾಜರಿದ್ದರು.
ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ಜನರ ಒಳಿತಿಗಾಗಿ ಕೆಲಸ ಮಾಡುವ ಭರವಸೆ ನೀಡಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮದ ಬಳಿಕ ರಾಂಚಿಯ ಪ್ರಾಜೆಕ್ಟ್ ಭವನದಲ್ಲಿ ಮೊದಲ ಕ್ಯಾಬಿನೆಟ್ ಸಭೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಜೆಎಂಎಂ, ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ ಬಳಿಕ ಹೇಮಂತ್ ಸೊರೆನ್ ಸತತ ಎರಡನೇ ಬಾರಿಗೆ ಸರ್ಕಾರ ರಚಿಸುವ ಅವಕಾಶ ಪಡೆದಿದ್ದಾರೆ.
ಪ್ರಮುಖ ನಾಯಕರು ಭಾಗಿ
ರಾಂಚಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಮುಂತಾದ ವಿರೋಧ ಪಕ್ಷದ ನಾಯಕರು ಉಪಸ್ಥಿತರಿದ್ದರು. ವೇದಿಕೆಯಲ್ಲಿ ಹೇಮಂತ್ ಅವರ ತಂದೆ ಮತ್ತು ಜೆಎಂಎಂ ಸಹ ಸಂಸ್ಥಾಪಕ ಮತ್ತು ಅಧ್ಯಕ್ಷ ಶಿಬು ಸೊರೆನ್ ಕೂಡ ಇದ್ದರು.
ಜಾರ್ಖಂಡ್ ರಾಜ್ಯಪಾಲರಾದ ಸಂತೋಷ್ ಕುಮಾರ್ ಗಂಗ್ವಾರ್ ಹೇಮಂತ್ ಸೊರೇನ್ ಅವರಿಗೆ ಪ್ರತಿಜ್ಞಾ ವಿಧೀ ಬೋಧಿಸಿದರು. ಜಾರ್ಖಂಡ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಹೇಮಂತ್ ಸೊರೇನ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಕ್ಸ್ ಪೋಸ್ಟ್ ಹಂಚಿಕೊಳ್ಳುವ ಮೂಲಕ ಅಭಿನಂದನೆ ಸಲ್ಲಿಸಿದರು.
ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಜೆಎಂಎಂ ನೇತೃತ್ವದ ಮೈತ್ರಿಕೂಟ ನಿರೀಕ್ಷೆಗೂ ಮೀರಿದ ಸಾಧನೆ ಮಾಡಿದೆ. ಎಕ್ಸಿಟ್ ಪೋಲ್ ಸಮೀಕ್ಷೆಗಳು ಎನ್ಡಿಎ ಅಧಿಕಾರಕ್ಕೆ ಬರುತ್ತದೆ ಎಂದು ಭವಿಷ್ಯ ನುಡಿದಿದ್ದವು, ಆದರೆ ಸಮೀಕ್ಷೆಗಳನ್ನು ಸುಳ್ಳಾಗಿಸಿದ ಮತದಾರ ಮತ್ತೆ ಜೆಎಂಎಂ ಕಾಂಗ್ರೆಸ್ ಮೈತ್ರಿಕೂಟಕ್ಕೆ ಮತಹಾಕಿದ್ದಾನೆ.
81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಯಲ್ಲಿ ಜೆಎಂಎಂ, ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ 56 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಬಹುಮತ ಪಡೆಯಿತು. ಬಿಜೆಪಿ ನೇತೃತ್ವದ ಎನ್ಡಿಎ 24 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಮತ್ತೆ ವಿಪಕ್ಷ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.
ಹೇಮಂರ್ ಸೊರೇನ್ ಬರ್ಹೈತ್ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು, ಬಿಜೆಪಿಯ ಗಮ್ಲಿಯೆಲ್ ಹೆಂಬ್ರೋಮ್ ವಿರುದ್ಧ 39,791 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.












Click it and Unblock the Notifications