ಹಿಮಾಚಲ ಪ್ರದೇಶ ಚುನಾವಣೆ ಪ್ರಚಾರ ಮುಕ್ತಾಯ: ಶನಿವಾರ ಮತದಾನ
ಶಿಮ್ಲಾ, ನ.11: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಪ್ರಚಾರ ಗುರುವಾರ ಕೊನೆಗೊಂಡಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಜಿದ್ಧಾಜಿದ್ದಿ ಜೊತೆಗೆ ಆಮ್ ಆದ್ಮಿ ಪಕ್ಷ ಕೂಡ ಗುಡ್ಡಗಾಡು ಪ್ರದೇಶದಲ್ಲಿ ತನ್ನ ಅಸ್ತಿತ್ವವನ್ನು ಸಾಧಿಸಲು ಪ್ರಯತ್ನಿಸುತ್ತಿದೆ.
ಹಿಮಾಚಲ ಪ್ರದೇಶ ಚುನಾವಣಾ ರಿಪಬ್ಲಿಕ್ ಸಮೀಕ್ಷೆ: ಬಿಜೆಪಿಗೆ ಗೆಲುವು ಸಾಧ್ಯತೆ
ಕಳೆದ ಹಲವು ಚುನಾವಣೆಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಅಧಿಕಾರ ನಡೆಸುತ್ತಿರುವ ರಾಜ್ಯದಲ್ಲಿ ಶನಿವಾರ (ನವೆಂಬರ್ 12 ರಂದು) ಚುನಾವಣೆ ನಡೆಯಲಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಾಧನೆಯ ಆಧಾರದ ಮೇಲೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದೆ.
ಇತ್ತ ಕಾಂಗ್ರೆಸ್ ತಾನು ನೀಡಿರುವ ಕೆಲವು ಚುನಾವಣಾ ಭರವಸೆಗಳು ಮತದಾರರಲ್ಲಿ ಪ್ರಮುಖ ಆಕರ್ಷಣೆಯಾಗಬಹುದು ಎಂದು ಆಶಿಸುತ್ತಿದ್ದು, ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ.
ಹಿಮಾಚಲ ಪ್ರದೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಮುಖ್ಯಸ್ಥ ಜಗತ್ ಪ್ರಕಾಶ್ ನಡ್ಡಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಸ್ಟಾರ್ ಪ್ರಚಾರಕರು ಗುರುವಾರ ತಮ್ಮ ಚುನಾವಣಾ ಪ್ರಚಾರವನ್ನು ಮುಗಿಸಿದ್ದಾರೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಕೂಡ ಪ್ರಚಾರ ನಡೆಸಿದ್ದರು.
68 ಸದಸ್ಯ ಬಲದ ಹಿಮಾಚಲ ಪ್ರದೇಶ ವಿಧಾನಸಭೆಗೆ 400 ಅಭ್ಯರ್ಥಿಗಳು ಚುನಾವಣೆ ಎದುರಿಸುತ್ತಿದ್ದು, ಒಟ್ಟು 55.92 ಲಕ್ಷ ಮತದಾರರು ಇವರ ಭವಿಷ್ಯವನ್ನು ಶನಿವಾರ ನಿರ್ಧರಿಸಲಿದ್ದಾರೆ.
ಮುಖ್ಯಮಂತ್ರಿ ಜೈರಾಮ್ ಠಾಕೂರ್, ಸಿಎಲ್ಪಿ ನಾಯಕ ಮುಖೇಶ್ ಅಗ್ನಿಹೋತ್ರಿ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸುಖವಿಂದರ್ ಸಿಂಗ್ ಸುಖು ಮತ್ತು ಹಲವಾರು ಪ್ರಮುಖ ನಾಯಕರ ಭವಿಷ್ಯವನ್ನು ಈ ಚುನಾವಣೆ ನಿರ್ಧರಿಸಲಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಅದ್ಮಿ ಪಕ್ಷವೂ ರಾಜ್ಯದಲ್ಲಿ ಛಾಪು ಮೂಡಿಸುವ ಭರವಸೆಯಲ್ಲಿದೆ. ಇದಲ್ಲದೇ ಆಪ್ ಎಲ್ಲಾ 68 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.
ಪ್ರಚಾರದ ಕೊನೆಯ ದಿನದಂದು, ಮುಖ್ಯಮಂತ್ರಿ ಜೈರಾಮ್ ಠಾಕೂರ್, ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಮತ್ತು ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲಾ ಸೇರಿದಂತೆ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷದ ನಾಯಕರು ಸುದ್ದಿಗೋಷ್ಠಿ ನಡೆಸಿ, ಮತದಾರರನ್ನು ಸೆಳೆಯುವ ಕೊನೆಯ ಪ್ರಯತ್ನ ನಡೆಸಿದ್ದಾರೆ.
ಡಿಸೆಂಬರ್ 8 ರಂದು ಗುಜರಾತ್ ಚುನಾವಣೆಯ ಫಲಿತಾಂಶದೊಂದಿಗೆ ಹಿಮಾಚಲ ಪ್ರದೇಶದ ಫಲಿತಾಂಶಗಳನ್ನು ಪ್ರಕಟಿಸಲಾಗುವುದು.