Breaking: ಹಿಮಾಚಲ ಪ್ರದೇಶ ಭೂಕುಸಿತ, ಸಾವಿನ ಸಂಖ್ಯೆ 22ಕ್ಕೆ ಏರಿಕೆ
ಶಿಮ್ಲಾ, ಆಗಸ್ಟ್ 21: ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿತ ಭೂಕುಸಿತಗಳು ಮತ್ತು ಇತರ ಹವಾಮಾನ ಸಂಬಂಧಿತ ಘಟನೆಗಳಿಂದ ಸಾವನ್ನಪ್ಪಿದವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಕಾಣೆಯಾಗಿರುವ ಇನ್ನೂ ಆರು ಮಂದಿ ಪತ್ತೆಯಾಗಿಲ್ಲ.
ಭೂಕುಸಿತದ ಸ್ಥಳದಲ್ಲಿ ರಕ್ಷಣಾ ಕಾರ್ಯಚರಣೆ ನಡೆಸುತ್ತಿರುವ ಎಸ್ಡಿಆರ್ಎಫ್ ಮತ್ತು ಸ್ಥಳೀಯ ಆಡಳಿತ ಅಧಿಕಾರಿಗಳಿಗೆ ಮತ್ತೊಂದು ಮೃತದೇಹ ಪತ್ತೆಯಾಗಿದೆ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಂಕಿಅಂಶಗಳ ತಿಳಿಸಿವೆ.
ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ, ರಾಜ್ಯಕ್ಕೆ ಬರುವ ಪ್ರವಾಸಿಗರು ಮತ್ತು ಸ್ಥಳೀಯ ನಾಗರಿಕರು ತುಂಬಾ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಸಾರ್ವಜನಿಕ ಆಸ್ತಿಗಳಿಗೆ ಹಾನಿಯುಂಟಾಗಿದೆ. ರಾಜ್ಯದ 30 ವಿವಿಧ ಸ್ಥಳಗಳಲ್ಲಿ ಪ್ರವಾಹ, ಇತರ ಹವಾಮಾನ ಸಂಬಂಧಿತ ಘಟನೆಗಳು ವರದಿಯಾಗಿವೆ.

ಮಂಡಿ, ಚಂಬಾ, ಕಂಗ್ರಾ, ಕುಲು, ಹಮೀರ್ಪುರ್ ಮತ್ತು ಶಿಮ್ಲಾ ಜಿಲ್ಲೆಗಳಲ್ಲಿ ಹಲವಾರು ಮನೆಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ.
ಹಿಮಾಚಲ ಪ್ರದೇಶದ ಮಂಡಿ ಪ್ರದೇಶದಲ್ಲಿ ಕಳೆದ 36 ಗಂಟೆಗಳಿಂದ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆ ರಸ್ತೆಗಳ ಬಳಕೆ ನಿರ್ಬಂಧಿಸಲಾಗಿದೆ. ಇದರ ಪರಿಣಾಮವಾಗಿ ಹಲವಾರು ಪ್ರವಾಸಿಗರು ರಸ್ತೆಗಳಲ್ಲಿ ಸಿಲುಕಿಕೊಂಡಿದ್ದಾರೆ. ನೀರಿನ ಮಟ್ಟವು ಹೆಚ್ಚುತ್ತಿದೆ, ಪರಿಹಾರ ಕಾರ್ಯಗಳು ಮುಂದುವರೆದಿದೆ. ಅಲ್ಲದೆ, ಪಠಾಣ್ಕೋಟ್ನಿಂದ ಹಿಮಾಚಲ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಚಾಕಿ ರೈಲ್ವೆ ಸೇತುವೆಯೂ ಕುಸಿದಿದೆ.
ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಪ್ರಮುಖ ಸ್ಥಳಗಳಲ್ಲಿ ಸಾಕಷ್ಟು ಸಂಖ್ಯೆಯ ರಕ್ಷಣಾ ಸಿಬ್ಬಂದಿ ಮತ್ತು ಯಂತ್ರೋಪಕರಣಗಳ ಮೂಲಕ ರಕ್ಷಣಾ ಕಾರ್ಯಚರಣೆ ನಡೆಯುತ್ತಿರುವ ಕುರಿತು ವಿವರಗಳನ್ನು ಪಡೆದುಕೊಂಡರು. ಆಸ್ಪತ್ರೆಗಳ ಕಡೆಗೆ ಹೋಗುವ ಮುಖ್ಯ ರಸ್ತೆಗಳನ್ನು ಆದ್ಯತೆಯ ಮೇಲೆ ಮರುನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ.

ತಕ್ಷಣದ ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಅಗತ್ಯಕ್ಕೆ ಅನುಗುಣವಾಗಿ ಆಯಾ ಜಿಲ್ಲೆಗಳಲ್ಲಿ ಶಾಲೆಗಳನ್ನು ಮುಚ್ಚುವ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳಿಗಾಗಿ ಹೆಚ್ಚುವರಿ ತಂಡವನ್ನು ಕಳುಹಿಸಲು ರಾಜ್ಯ ಸರ್ಕಾರವು ಕೇಂದ್ರವನ್ನು ಒತ್ತಾಯಿಸುತ್ತದೆ ಎಂದು ಅವರು ಟ್ವೀಟ್ಗಳಲ್ಲಿ ತಿಳಿಸಿದ್ದಾರೆ.
ಐಎಂಡಿ ರಾಜ್ಯ ಉಪ ನಿರ್ದೇಶಕ ಬುಯಿ ಲಾಲ್, "ಮುಂದಿನ 5 ದಿನಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ. ಇಡೀ ರಾಜ್ಯಕ್ಕೆ ಮುಂದಿನ 12 ಗಂಟೆಗಳ ಕಾಲ ಆರೆಂಜ್ ಅಲರ್ಟ್, ಆಗಸ್ಟ್ 24 ರವರೆಗೆ ಉಳಿದ ದಿನಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ" ಎಂದು ಹೇಳಿದರು. ಈ ವಾತಾವರಣದಲ್ಲಿ ಜನರು ನದಿಗಳು ಮತ್ತು ತೊರೆಗಳ ಬಳಿ ಹೋಗದಂತೆ ಸೂಚಿಸಲಾಗಿದೆ. ಇದಲ್ಲದೆ, ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯು ಆಗಸ್ಟ್ 25 ರವರೆಗೆ ಭೂಕುಸಿತದ ಎಚ್ಚರಿಕೆಯನ್ನು ನೀಡಿದೆ.












Click it and Unblock the Notifications