'ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಬಹುದು' - ಸುಪ್ರೀಂಗೆ ಕೇಂದ್ರ
ಇತರ ಸಮುದಾಯಗಳಿಗಿಂತ ಕಡಿಮೆ ಸಂಖ್ಯೆಯಲ್ಲಿರುವ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನವನ್ನು ನೀಡುವ ಜವಬ್ದಾರಿಯನ್ನು ಕೇಂದ್ರ ಸರ್ಕಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಹಿಸಿಕೊಟ್ಟಿದೆ. ರಾಜ್ಯಗಳಲ್ಲಿ ಹಿಂದುಗಳು ಅಥವಾ ಇತರ ಧರ್ಮದವರು ಕಡಿಮೆ ಸಂಖ್ಯೆಯಲ್ಲಿದ್ದರೆ ರಾಜ್ಯಗಳು ಅಂತಹವರನ್ನು ತಮ್ಮದೇ ಪ್ರಾದೇಶಿಕ ವ್ಯಾಪ್ತಿಯೊಳಗೆ ಅಲ್ಪಸಂಖ್ಯಾತರು ಎಂದು ಘೋಷಿಸಬಹುದು ಎಂಬ ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ತಿಳಿಸಿದೆ.
ದೇಶದ 8 ರಾಜ್ಯಗಳಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದಾರೆ. ಆದರೆ, ಸರಿಯಾದ ಮಾನ್ಯತೆ ಸಿಕ್ಕಿಲ್ಲ. ಹೀಗಾಗಿ, ಅಧಿಕೃತ ಮಾನ್ಯತೆ ನೀಡಬೇಕೆಂದು ಕೋರಿ 2017ರಲ್ಲಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು. ಅರುಣಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಲಕ್ಷದ್ವೀಪ, ಮಿಜೋರಾಂ, ನಾಗಾಲ್ಯಾಂಡ್, ಮೇಘಾಲಯ, ಮಣಿಪುರ ರಾಜ್ಯಗಳಲ್ಲಿರುವ ಹಿಂದೂಗಳನ್ನು ಅಲ್ಪಸಂಖ್ಯಾತರನ್ನಾಗಿ ಗುರುತಿಸಿ ಸರ್ಕಾರಿ ಸೌಲಭ್ಯಗಳನ್ನು ನೀಡಬೇಕು ಎಂದು ಸುಪ್ರೀಂ ಕೋರ್ಟ್ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಎಂಬವರು ಪಿಐಎಲ್ ಸಲ್ಲಿಸಿದ್ದರು.
ಮುಸ್ಲಿಂ, ಕೈಸ್ತ, ಸಿಖ್, ಬೌದ್ಧ ಧರ್ಮ, ಪಾರ್ಸಿ, ಧರ್ಮದ ಸಮುದಾಯಗಳನ್ನು 1993 ರಲ್ಲಿ ಕೇಂದ್ರ ಸರ್ಕಾರ ನೋಟಿಫಿಕೇಶನ್ ಹೊರಡಿಸಿ ಅಲ್ಪಸಂಖ್ಯಾತರ ಮಾನ್ಯತೆ ನೀಡಿತ್ತು. 2014ರಲ್ಲಿ ಈ ಪಟ್ಟಿಗೆ ಜೈನ ಧರ್ಮವನ್ನು ಸೇರಿಸಲಾಗಿದೆ. ಆದರೆ, 2011ರ ಜನಗಣತಿಯ ಪ್ರಕಾರ ಈ 8 ರಾಜ್ಯಗಳಲ್ಲಿ ಅಲ್ಪಸಂಖ್ಯಾತರೆನಿಸಿಕೊಂಡಿರುವ ಮುಸ್ಲಿಂ, ಕ್ರೈಸ್ತರ ಸಂಖ್ಯೆ ಅಧಿಕವಾಗಿದೆ. 2011ರ ಜನಗಣತಿಯ ಪ್ರಕಾರ ಲಕ್ಷದ್ವೀಪದಲ್ಲಿ ಶೇ.2.5, ಮಿಜೊರಾಂ ಶೇ.2.75, ನಾಗಾಲ್ಯಾಂಡ್ ಶೇ.8.75, ಮೇಘಾಲಯ ಶೇ.11.53, ಜಮ್ಮು ಕಾಶ್ಮೀರ ಶೇ. 28.44, ಅರುಣಾಚಲ ಪ್ರದೇಶ ಶೇ.29, ಮಣಿಪುರ ಶೇ. 31.39 ಮತ್ತು ಪಂಜಾಬ್ನಲ್ಲಿ ಶೇ.38.40 ರಷ್ಟು ಹಿಂದೂಗಳು ವಾಸಿಸುತ್ತಿದ್ದಾರೆ. ಬಹುಸಂಖ್ಯಾತರು ಎಂದು ಗುರುತಿಸಿಕೊಂಡ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದು, ಇದರಿಂದಾಗಿ ಸರ್ಕಾರಿ ಲಾಭಗಳು ತಲುಪಬೇಕಾದ ಜನರಿಗೆ ತಲುಪುತ್ತಿಲ್ಲ. ಹೀಗಾಗಿ, ಈ 8 ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತರ ಮಾನ್ಯತೆ ನೀಡಿ ಎಂದು ಬಿಜೆಪಿ ಮುಖಂಡ ಅಶ್ವಿನಿ ಕುಮಾರ್ ಅವರು ತಮ್ಮ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದರು.
ಸದ್ಯ ದೇಶದ ಒಂಬತ್ತು ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಲು ಕೋರಿದ ಅರ್ಜಿಯ ವಿಚಾರಣೆ ವೇಳೆ ಈ ವಿಚಾರವನ್ನು ಕೇಂದ್ರ ಸ್ಪಷ್ಟಪಡಿಸಿದೆ. ಕೇಂದ್ರ ಸರ್ಕಾರ ಆರು ಸಮುದಾಯಗಳಾದ ಕ್ರಿಶ್ಚಿಯನ್, ಸಿಖ್, ಮುಸ್ಲೀಂ, ಬೌದ್ಧ, ಪಾರ್ಸಿ ಹಾಗೂ ಜೈನರನ್ನು ರಾಷ್ಟ್ರೀಯ ಮಟ್ಟದಲ್ಲಿ ಅಲ್ಪಸಂಖ್ಯಾತರೆಂದು ಅಧಿಸೂಚನೆ ಹೊರಡಿಸಿದೆ. ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಕಡಿಮೆ ಸಂಖ್ಯೆಯಲ್ಲಿರುವ ಹಿಂದೂಗಳನ್ನು ಧಾರ್ಮಿಕ ಅಥವಾ ಭಾಷಾ ಅಲ್ಪಸಂಖ್ಯಾತರೆಂದು ಸೂಚಿಸಲು ಮುಕ್ತವಾಗಿವೆ ಎಂದು ರವಿವಾರ ಸಂಜೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಸುಪ್ರೀಂಕೋರ್ಟ್ ಗೆ ತಿಳಿಸಿದೆ.
"ರಾಜ್ಯ ಸರಕಾರಗಳು ಧಾರ್ಮಿಕ ಅಥವಾ ಭಾಷಾ ಸಮುದಾಯವನ್ನು ರಾಜ್ಯದೊಳಗೆ ಅಲ್ಪಸಂಖ್ಯಾತ ಸಮುದಾಯ ಎಂದು ಘೋಷಿಸಬಹುದು" ಎಂದು ಕೇಂದ್ರ ಸರಕಾರ ಹೇಳಿದೆ. ಮಹಾರಾಷ್ಟ್ರ ಸರ್ಕಾರವು 2016ರಲ್ಲಿ ಯಹೂದಿಗಳನ್ನು ಅಲ್ಪಸಂಖ್ಯಾತ ಸಮುದಾಯವೆಂದು ಸೂಚಿಸಿದೆ ಎಂದು ಕೇಂದ್ರ ಸರಕಾರವು ಬೆಟ್ಟು ಮಾಡಿತ್ತು.
ಕರ್ನಾಟಕ ಸಕರಾಕವು ಉರ್ದು, ತೆಲುಗು, ತಮಿಳು, ಮಲಯಾಳಂ, ಮರಾಠಿ, ತುಳು, ಲಮಾಣಿ, ಹಿಂದಿ, ಕೊಂಕಣಿ ಹಾಗೂ ಗುಜರಾತಿ ಬಾಷೆಗಳನ್ನು ಅಲ್ಪಸಂಖ್ಯಾತರ ಭಾಷೆ ಎಂದು ಘೋಷಸಿದೆ. ಸದರಿ ರಾಜ್ಯದ ನಿಯಮಗಳ ಪ್ರಕಾರ ರಾಜ್ಯಗಳು ಸಂಸ್ಥೆಗಳನ್ನು ಅಲ್ಪಸಂಖ್ಯಾತ ಸಂಸ್ಥೆಗಳೆಮದು ಪ್ರಮಾಣೀಕರಿಸಬಹುದು ಎಂದು ಅಫಿಡವಿಟ್ ಹೇಳುತ್ತದೆ.
ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ರಾಷ್ಟ್ರೀಯ ಆಯೋಗ (ಎನ್ ಸಿಎಂಇಐ) ಕಾಯಿದೆ, 2004 ರ ಸೆಕ್ಷನ್ 2 (ಎಫ್) ನ ಸಿಂಧುತ್ವವನ್ನು ಪ್ರಶ್ನಿಸಿರುವ ದಿಲ್ಲಿ ಬಿಜೆಪಿ ನಾಯಕ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರ ಅರ್ಜಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರ ತನ್ನ ಅಫಿಡೆಫಿಟ್ ಸಲ್ಲಿಸಿದೆ.
ವಿಧಾನಸೌಧದಲ್ಲಿ ಈ ಬಗ್ಗೆ ಸೋಮವಾರ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್ ಅವರು 'ಕೇಂದ್ರದ ನಡೆಯನ್ನು ನಾನು ಸ್ವಾಗತಿಸುತ್ತೇನೆ. ಬಹುಸಂಖ್ಯಾತರು ಹಾಗೂ ಅಲ್ಪಸಂಖ್ಯಾತರು ಎಲ್ಲ ರಾಜ್ಯದಲ್ಲಿ ಇದ್ದಾರೆ. ಜಮ್ಮು - ಕಾಶ್ಮೀರ ಹಾಗೂ ಪಂಜಾಬ್ನಲ್ಲಿ ಹಿಂದೂಗಳು ಅಲ್ಪಸಂಖ್ಯಾತರು. ಅವರಿಗೆ ಅಲ್ಪ ಸಂಖ್ಯಾತ ಸ್ಥಾನಮಾನ ಕೊಡುವ ಅಧಿಕಾರ ಆ ರಾಜ್ಯ ಸರ್ಕಾರಗಳಿಗಿದೆ' ಎಂದರು.
ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವ ತಳಮಟ್ಟದ ಜನರಿಗೆ ತಲುಪಬೇಕು. ಈ ಸಂಬಂಧ ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಧಾರ ಸ್ವಾಗತಿಸುತ್ತೇನೆ. ಈ ತೀರ್ಮಾನವನ್ನು ಹಿಂದಿನ ದಿನಗಳಲ್ಲಿಯೇ ತೆಗೆದುಕೊಳ್ಳಬೆಕಿತ್ತು. ಇದೀಗ ಆಗಿದೆ. ಅದಕ್ಕೆ ನನ್ನ ಸ್ವಾಗತ ಎಂದು ಹೇಳಿದರು. ರಾಜ್ಯದಲ್ಲಿ ಹಿಂದೂಗಳು ಅಥವಾ ಇತರ ಧರ್ಮದವರು ಕಡಿಮೆ ಸಂಖ್ಯೆಯಲ್ಲಿ ಇದ್ದರೆ ರಾಜ್ಯಗಳು ಅಂಥವರನ್ನು ಅಲ್ಪಸಂಖ್ಯಾತರು ಎಂದು ಘೋಷಿಸಬಹುದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿದೆ.