ಭಯೋತ್ಪಾದಕರಿಂದ ಹತರಾದ ಪೊಲೀಸರ ಕುಟುಂಬಕ್ಕೆ ನೇಮಕಾತಿ ಪತ್ರ ನೀಡಿದ ಅಮಿತ್ ಶಾ
ಶ್ರೀನಗರ, ಅ.05: ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದನೆ ಸಂಬಂಧಿತ ಹಿಂಸಾಚಾರದಲ್ಲಿ ಹುತಾತ್ಮರಾದ ನಾಲ್ವರು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿಯ ಕುಟುಂಬಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದ್ದಾರೆ.
"ನಾಲ್ವರು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಹುತಾತ್ಮರ ಕುಟುಂಬಗಳಿಗೆ ಶ್ರೀನಗರದ ರಾಜಭವನದಲ್ಲಿ ಗೃಹ ಸಚಿವರು ಉದ್ಯೋಗ ಪತ್ರಗಳನ್ನು ನೀಡಿದರು" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕರಿಂದ ಹತ್ಯೆಗೀಡಾದ ಪೊಲೀಸ್ ಸಿಬ್ಬಂದಿಯ ಕುಟುಂಬಸ್ಥರನ್ನು ಭೇಟಿಯಾದ ಫೋಟೋಗಳನ್ನು ಗೃಹ ಸಚಿವರು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.

"ಭಯೋತ್ಪಾದಕರ ವಿರುದ್ಧದ ಹೋರಾಟದಲ್ಲಿ ಹುತಾತ್ಮರಾದ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿಯ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಅಂತಹ ನಾಲ್ವರು ಹುತಾತ್ಮರ ಕುಟುಂಬಕ್ಕೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಲಾಗಿದೆ" ಎಂದು ಅಮಿತ್ ಶಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಭಯೋತ್ಪಾದನೆಯ ವಿರುದ್ಧ ಹೋರಾಡುವಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರ ಪ್ರಯತ್ನಗಳನ್ನು ಅವರು ಶ್ಲಾಘಿಸಿದ್ದು, ಅವರ ತ್ಯಾಗಕ್ಕೆ ಇಡೀ ದೇಶವು ನಮನ ಸಲ್ಲಿಸುತ್ತದೆ ಎಂದು ಹೇಳಿದ್ದಾರೆ.
ಪೊಲೀಸ್ ಸಿಬ್ಬಂದಿಯ ಕುಟುಂಬದ ಜೊತೆಗೆ ಭಯೋತ್ಪಾದಕರಿಂದ ಹತ್ಯೆಗೀಡಾದ 24 ಜನರ ಕುಟುಂಬಗಳು ಗೃಹ ಸಚಿವರಿಂದ ನೇಮಕಾತಿ ಪತ್ರವನ್ನು ಸ್ವೀಕರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಮಾರ್ಚ್ 18 ರಂದು ಕೂಡ ಭಯೋತ್ಪಾದಕರ ವಿರುದ್ಧ ಹೋರಾಡಿ ಪ್ರಾಣ ತ್ಯಾಗ ಮಾಡಿದ ನಾಲ್ವರು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿಯ ಕುಟುಂಬಕ್ಕೆ ಅಮಿತ್ ಶಾ ಅವರು ಜಮ್ಮುವಿನಲ್ಲಿ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದ್ದರು.
ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಕಳೆದ ವರ್ಷ ಅಕ್ಟೋಬರ್ನಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಗೃಹ ಸಚಿವರು ಮೊದಲ ಬಾರಿ ಭೇಟಿ ನೀಡಿದ್ದರು. ಈ ವೇಳೆ ನೌಗಾಮ್ನಲ್ಲಿ ಭಯೋತ್ಪಾದಕರ ಗುಂಡಿಗೆ ಬಲಿಯಾಗಿದ್ದ ಇನ್ಸ್ಪೆಕ್ಟರ್ ಪರ್ವೈಜ್ ಅಹ್ಮದ್ ಅವರ ಕುಟುಂಬ ಸದಸ್ಯರನ್ನು ಭೇಟಿಯಾಗಿ, ಅಹ್ಮದ್ ಕುಟುಂಬಕ್ಕೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದ್ದರು.












Click it and Unblock the Notifications