Maharashtra Assembly Elections 2024: ಬಿಜೆಪಿಗೆ ಶಾಕ್ ನೀಡಿದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್
ಮುಂಬೈ, ಸೆಪ್ಟೆಂಬರ್ 23: ಮಹಾರಾಷ್ಟ್ರ ರಾಜ್ಯ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸುತ್ತಿದೆ. 288 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್ನಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದ್ದು, ರಾಜಕೀಯ ಪಕ್ಷಗಳ ತಯಾರಿ ಜೋರಾಗಿದೆ. ಈ ಚುನಾವಣೆ ದೇಶಾದ್ಯಂತ ಕುತೂಹಲಕ್ಕೆ ಕಾರಣವಾಗಿದೆ. ಚುನಾವಣೆಯಲ್ಲಿ ವಿರೋಧ ಪಕ್ಷಗಳ 'ಮಹಾವಿಕಾಸ್ ಅಘಾಡಿ' ಮೈತ್ರಿಕೂಟದ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಮಾಜಿ ರಾಜ್ಯಪಾಲರು ಘೋಷಣೆ ಮಾಡಿದ್ದಾರೆ. ಇದರಿಂದಾಗಿ ಬಿಜೆಪಿಗೆ ಹಿನ್ನಡೆಯಾಗಿದೆ.
ಮಹಾರಾಷ್ಟ್ರ ರಾಜ್ಯ ವಿಧಾನಸಭೆ ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್, ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್ಸಿಪಿ (ಶರದ್ ಪವಾರ್) ನೇತೃತ್ವದ ಪಕ್ಷಗಳು ಮಹಾವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟವನ್ನು ರಚನೆ ಮಾಡಿಕೊಂಡಿವೆ. ಈಗಾಗಲೇ ಮೈತ್ರಿಕೂಟದ ಸೀಟು ಹಂಚಿಕೆಯ ಚರ್ಚೆಗಳು ನಡೆಯುತ್ತಿವೆ.

ಜಮ್ಮು ಮತ್ತು ಕಾಶ್ಮೀರ ರಾಜ್ಯದ ಕೊನೆಯ ರಾಜ್ಯಪಾಲರಾದ ಸತ್ಯಪಾಲ್ ಮಲಿಕ್ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಕುರಿತು ಮಾತನಾಡಿದ್ದಾರೆ. ಅವರು ಭಾನುವಾರ ಶಿವಸೇನೆ (ಉದ್ಧವ್ ಠಾಕ್ರೆ ಬಣ)ಯನ್ನು ಮುಂಬೈನ ನಿವಾಸದಲ್ಲಿ ಭೇಟಿ ಮಾಡಿದ್ದರು. ಬಿಜೆಪಿ ವಿರುದ್ಧ ಸತ್ಯಪಾಲ್ ಮಲಿಕ್ ಟೀಕೆಗಳನ್ನು ಮಾಡಿದ್ದಾರೆ.
ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಂವಿಧಾನದ 370ನೇ ವಿಧಿ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಕಲ್ಪಿಸಿದ್ದ ವಿಶೇಷ ಸ್ಥಾನಮಾನವನ್ನು 2019ರ ಆಗಸ್ಟ್ 5ರಂದು ರದ್ದುಪಡಿಸಿದೆ. ಈ ಸಂದರ್ಭದಲ್ಲಿ ರಾಜ್ಯಪಾಲರಾಗಿದ್ದ ಸತ್ಯಪಾಲ್ ಮಲಿಕ್ ಬಿಜೆಪಿ ವಿರುದ್ಧ ಸದಾ ಮಾತನಾಡುತ್ತಿದ್ದರು. ಈಗ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಎಂವಿಎ ಮೈತ್ರಿಕೂಟ ಬೆಂಬಲಿಸುವುದಾಗಿ ಹೇಳಿದ್ದಾರೆ.
ಸತ್ಯಪಾಲ್ ಮಲಿಕ್ ಹೇಳಿದ್ದೇನು?; ಭಾನುವಾರ ಮಾತನಾಡಿದ ಸತ್ಯಪಾಲ್ ಮಲಿಕ್, "ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮಹಾವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ಪರವಾಗಿ ಪ್ರಚಾರವನ್ನು ನಡೆಸುತ್ತೇನೆ. ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣವಾಗಿ ಅಳಿಸಿ ಹೋಗಲಿದೆ" ಎಂದು ತಿಳಿಸಿದ್ದಾರೆ.
"ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಲಿದೆ. ಪಕ್ಷ ಸಂಪೂರ್ಣವಾಗಿ ಅಳಿಸಿ ಹೋಗಲಿದೆ. ಶಿವಸೇನೆ (ಉದ್ಧವ್ ಠಾಕ್ರೆ ಬಣ) ಚುನಾವಣೆಯಲ್ಲಿ ಮುಖ್ಯ ಪಾತ್ರವನ್ನು ವಹಿಸಲಿದ್ದಾರೆ, ಯಾರೂ ಚಿಂತಿಸುವ ಅಗತ್ಯವಿಲ್ಲ" ಎಂದು ಸತ್ಯಪಾಲ್ ಮಲಿಕ್ ಹೇಳಿದರು.
ಶನಿವಾರ ಸತ್ಯಪಾಲ ಮಲಿಕ್, 'ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ದೇಶದ ರಾಜಕೀಯದ ಮೇಲೆ ವ್ಯಾಪಕ ಪರಿಣಾಮವನ್ನು ಬೀರಲಿದೆ. ನಾನು ಚುನಾವಣೆಯಲ್ಲಿ ಮಹಾವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟಕ್ಕೆ ಸಂಪೂರ್ಣ ಬೆಂಬಲ ನೀಡಲಿದ್ದೇನೆ, ಅವರ ಪರವಾಗಿ ಪ್ರಚಾರವನ್ನು ಸಹ ನಡೆಸಲಿದ್ದೇನೆ" ಎಂದು ತಿಳಿಸಿದರು.
"ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ದೇಶದ ಜನರಿಗೆ ಒಂದು ದಿಕ್ಕನ್ನು ತೋರಿಸಲಿದೆ. ಇದು ಬಿಜೆಪಿ ಶವಪೆಟ್ಟಿಗೆಗೆ ಕೊನೆಯ ಮೊಳೆಯಾಗಿದೆ. ಅಧಿಕಾರವನ್ನು ಕಳೆದುಕೊಳ್ಳುವ ಭೀತಿಯಲ್ಲಿಯೇ ಮಹಾರಾಷ್ಟ್ರದ ಚುನಾವಣೆಯನ್ನು ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ" ಎಂದು ಮಲಿಕ್ ಟೀಕಿಸಿದರು.
"ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿಯೂ ಬಿಜೆಪಿಗೆ ಹಿನ್ನಡೆಯಾಗಲಿದೆ. ಪಕ್ಷ 20 ಸ್ಥಾನಗಳಲ್ಲಿ ಜಯಗಳಿಸಲಿದೆ. ಕಾಂಗ್ರೆಸ್ 60 ಸ್ಥಾನದಲ್ಲಿ ಗೆಲ್ಲಲಿದೆ. ನಾನು 2019ರ ಪುಲ್ವಾಮಾ ದಾಳಿ ಕುರಿತು ಮತ್ತೊಮ್ಮೆ ತನಿಖೆಗೆ ಒತ್ತಾಯಿಸುತ್ತೇನೆ. ನಮ್ಮ ಸೈನಿಕರ ಸಾವಿಗೆ ಯಾರು ಜವಾಬ್ದಾರಿ? ಎಂಬುದು ಬಹಿರಂಗವಾಗಬೇಕು" ಎಂದರು.
288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 146. ಸದ್ಯ ರಾಜ್ಯದಲ್ಲಿ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್ಸಿಪಿ (ಅಜಿತ್ ಪವಾರ್ ಬಣ) ಸೇರಿರುವ 'ಮಹಾಯುತಿ' ಮೈತ್ರಿಕೂಟದ ಸರ್ಕಾರ ಆಡಳಿತವನ್ನು ನಡೆಸುತ್ತಿದೆ. ಈ ಬಾರಿಯ ಚುನಾವಣೆಯನ್ನು ಸಹ ಮೈತ್ರಿಕೂಟ ಮಾಡಿಕೊಂಡೇ ಎದುರಿಸಲಾಗುತ್ತಿದೆ.
ಮತ್ತೊಂದು ಕಡೆ ಮಹಾರಾಷ್ಟ್ರ ರಾಜ್ಯದ ವಿರೋಧ ಪಕ್ಷಗಳು 'ಮಹಾವಿಕಾಸ್ ಅಘಾಡಿ' ಮೈತ್ರಿಕೂಟ ರಚನೆ ಮಾಡಿಕೊಂಡಿವೆ. 2024ರ ಲೋಕಸಭೆ ಚುನಾವಣೆಯನ್ನು ಮೈತ್ರಿಕೂಟ ಸೀಟು ಹಂಚಿಕೆ ಮಾಡಿಕೊಂಡು ಎದುರಿಸಿತ್ತು. ಕಾಂಗ್ರೆಸ್, ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್ಸಿಪಿ (ಶರದ್ ಪವಾರ್) ನೇತೃತ್ವದ ಪಕ್ಷಗಳ ಮೈತ್ರಿಕೂಟ ಇದಾಗಿದೆ.












Click it and Unblock the Notifications