Rain Alert: ಇನ್ನೆರಡು ದಿನ ಬಿಸಿಲು ಆಮೇಲೆ ಭರ್ಜರಿ ಮಳೆ; ಹವಾಮಾನ ಇಲಾಖೆ ಹೇಳಿದ್ದೇನು?
ಭಾರತದ ಪೂರ್ವ ಮತ್ತು ಪರ್ಯಾಯ ದ್ವೀಪದ ಕೆಲವು ಭಾಗಗಳಲ್ಲಿ ಇನ್ನೆರಡು ದಿನಗಳಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ತೀವ್ರ ಬಿಸಿಲಿನ ಬಳಿಕ ಹಲವು ಭಾಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದ್ದು, ಮಳೆ ಬಗ್ಗೆ ಭರವಸೆ ಹೆಚ್ಚಿಸಿದೆ.
ಏಪ್ರಿಲ್ 9 ರವರೆಗೆ ತೀವ್ರ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ಮಳೆಗೂ ಮುನ್ನ ಎರಡು ದಿನ ಶಾಖದ ಅಲೆಯನ್ನು ಎದುರಿಸಬೇಕಿದೆ.

ಕರ್ನಾಟಕದ ಉತ್ತರ ಒಳನಾಡಿನ ಪ್ರದೇಶ, ಒಡಿಶಾ, ಗಂಗಾನದಿ ಪಶ್ಚಿಮ ಬಂಗಾಳ, ಜಾರ್ಖಂಡ್, ವಿದರ್ಭ, ಆಂಧ್ರಪ್ರದೇಶದ ಕರಾವಳಿ ಮತ್ತು ಯಾನಂ, ರಾಯಲಸೀಮಾ ಮತ್ತು ತೆಲಂಗಾಣದಲ್ಲಿ ಎರಡು ದಿನ ಶಾಖದ ಅಲೆಯ ಪರಿಸ್ಥಿತಿ ಇರುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಈ ರಾಜ್ಯಗಳಲ್ಲಿ ಮಳೆ ಮುನ್ಸೂಚನೆ
ಏಪ್ರಿಲ್ 7ರಿಂದ ತಮಿಳುನಾಡು, ಪುದುಚೇರಿ, ಕೇರಳ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ತ್ರಿಪುರಾ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಗಂಗಾನದಿ ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಕರ್ನಾಟಕದ ಉತ್ತರ ಒಳನಾಡು, ರಾಯಲಸೀಮಾ, ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂನಲ್ಲಿ ಶಾಖದ ಅಲೆಯ ಪರಿಸ್ಥಿತಿಗಳು ಮುಂದುವರಿದಿವೆ ಎಂದು ಐಎಂಡಿ ಹೇಳಿದೆ.
ಗುಡುಗು-ಮಿಂಚು ಸಹಿತ ಮಳೆ
ಮುಂದಿನ ಏಳು ದಿನಗಳಲ್ಲಿ ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಪ್ರತ್ಯೇಕವಾದ ಗುಡುಗು ಮತ್ತು ಮಿಂಚುಗಳೊಂದಿಗೆ ವ್ಯಾಪಕವಾದ ಲಘು ಮತ್ತು ಮಧ್ಯಮ ಮಳೆ ಅಥವಾ ಹಿಮಪಾತ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಯುಗಾದಿ ಬಳಿಕ ರಾಜ್ಯದಲ್ಲಿ ಮಳೆ
ಇನ್ನು ಕರ್ನಾಟಕದಲ್ಲಿ ಯುಗಾದಿ ಹಬ್ಬದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಏಪ್ರಿಲ್ 12ರ ಬಳಿಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್ 13 ಅಥವಾ 14 ರಂದು ಬೆಂಗಳೂರಿನಲ್ಲಿ ಕೂಡ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಬುಧವಾರ ಮತ್ತು ಗುರುವಾರ ಕೊಡಗು ಜಿಲ್ಲೆಯ ವಿವಿಧೆಡೆ ಮಳೆಯಾಗಿದೆ. ಬುಧವಾರ ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆಗಳಲ್ಲಿ ಮಳೆಯಾಗಿತ್ತು. ಭದ್ರಾವತಿ, ದಾವಣಗೆರೆ ಜಿಲ್ಲೆಯಲ್ಲಿ ಕೂಡ ಚದುರಿದಂತೆ ಸಾಧಾರಣ ಮಳೆಯಾಗಿದೆ.












Click it and Unblock the Notifications