ಆಗಸ್ಟ್ 9ರವರೆಗೂ ಈ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ
ನವದೆಹಲಿ, ಆಗಸ್ಟ್ 06: ಮುಂಗಾರು ಪ್ರಭಾವದಿಂದಾಗಿ ಮುಂದಿನ ಐದು ದಿನಗಳವರೆಗೂ ಹಲವು ರಾಜ್ಯಗಳಲ್ಲಿ ಅಧಿಕ ಮಳೆಯಾಗುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕೆಲವು ರಾಜ್ಯಗಳಲ್ಲಿ ಆಗಸ್ಟ್ 9ರವರೆಗೂ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ರವಾನಿಸಲಾಗಿದೆ.
ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಬಿಹಾರ ಹಾಗೂ ಇನ್ನಿತರ ಈಶಾನ್ಯ ರಾಜ್ಯಗಳಲ್ಲಿ ಮುಂದಿನ ಐದು ದಿನಗಳ ಕಾಲ ಅಧಿಕ ಮಳೆಯಾಗುವ ಮುನ್ಸೂಚನೆ ನೀಡಿದೆ. ಮಧ್ಯಪ್ರದೇಶದಲ್ಲಿ ವ್ಯಾಪಕ ಮಳೆ ಮುಂದುವರೆಯುವುದಾಗಿ ತಿಳಿಸಿದೆ. ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಈಗಾಗಲೇ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದ್ದು, ಭಾರೀ ಹಾನಿ ಸಂಭವಿಸಿದೆ.
ಮುಂದಿನ ಮೂರು ದಿನ ಈ ರಾಜ್ಯಗಳಲ್ಲಿ ಭಾರೀ ಮಳೆ ಎಚ್ಚರಿಕೆ
ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ನಾಗಾಲ್ಯಾಂಡ್, ಮೇಘಾಲಯ ಹಾಗೂ ತ್ರಿಪುರಾದಲ್ಲಿ ಭಾರೀ ಮಳೆಯಾಗಲಿದ್ದು, ಈ ರಾಜ್ಯಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಆಗಸ್ಟ್ 6ರಂದು ಈ ರಾಜ್ಯಗಳಲ್ಲಿ ಭಾರೀ ಪ್ರಮಾಣದ ಮಳೆಯಾಗುವ ಸೂಚನೆ ನೀಡಿದೆ. ಮುಂಗಾರಿನ ಪ್ರಭಾವ ಮಧ್ಯಪ್ರದೇಶ ಹಾಗೂ ಪಶ್ಚಿಮ ಉತ್ತರ ಪ್ರದೇಶದ ಮೇಲೆ ತೀವ್ರವಾಗಲಿದ್ದು, ಅಲರ್ಟ್ ಘೋಷಣೆ ಮಾಡಲಾಗಿದೆ.
ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಹಾಗೂ ಕೇರಳದಲ್ಲಿ ಶುಕ್ರವಾರ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇನ್ನೂ ಯಾವ್ಯಾವ ರಾಜ್ಯಗಳಲ್ಲಿ ಮಳೆಯಾಗಲಿದೆ? ಮುಂದೆ ಓದಿ...
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಸೂಚನೆ; ಜಲಾಶಯಗಳ ನೀರಿನ ಮಟ್ಟ
ಮುಂದಿನ ಐದು ದಿನಗಳವರೆಗೂ ಮಳೆ ಮುಂದುವರಿಕೆ
ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆ ಮುಂದುವರೆಯಲಿದೆ. ಒಡಿಶಾ ಹಾಗೂ ಜಾರ್ಖಂಡ್ನಲ್ಲಿ ಶುಕ್ರವಾರ ಹೆಚ್ಚಿನ ಮಳೆಯಾಗಲಿದೆ. ಬಿಹಾರದಲ್ಲಿ ಆಗಸ್ಟ್ 7 ಹಾಗೂ 9ರಂದು ಅಧಿಕ ಮಳೆಯಾಗುವುದಾಗಿ ಎಚ್ಚರಿಕೆ ನೀಡಲಾಗಿದೆ. ಮುಂದಿನ ಐದು ದಿನಗಳವರೆಗೂ ಮಧ್ಯಪ್ರದೇಶದಲ್ಲಿ ಮಳೆ ನಿಲ್ಲುವುದಿಲ್ಲ ಎಂದು ತಿಳಿಸಿದ್ದು, ಮಧ್ಯ ಪ್ರದೇಶದ ಪಶ್ಚಿಮ ಭಾಗದ ಜಿಲ್ಲೆಗಳಲ್ಲಿ ಶುಕ್ರವಾರ ಭಾರೀ ಮಳೆಯಾಗಲಿದೆ. ಆನಂತರ ಅಲ್ಲಿ ಮಳೆ ತಗ್ಗಲಿದೆ ಎಂದು ಮುನ್ಸೂಚನೆ ನೀಡಿದೆ. ಈಶಾನ್ಯ ರಾಜ್ಯಗಳಲ್ಲಿ ವ್ಯಾಪಕ ಮಳೆ ಮುಂದುವರೆಯುವುದಾಗಿ ತಿಳಿಸಿದೆ. ಆಗಸ್ಟ್ 10ರ ನಂತರ ಮಳೆ ಹೆಚ್ಚಾಗುವುದಾಗಿ ತಿಳಿಸಿದೆ.
ಆಗಸ್ಟ್ 9ರವರೆಗೂ ಈ ರಾಜ್ಯಗಳಲ್ಲಿ ಮಳೆ ನಿಲ್ಲುವುದಿಲ್ಲ
ಮುಂದಿನ ಐದು ದಿನಗಳ ಕಾಲ ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಅರುಣಾಚಲ ಪ್ರದೇಶದಲ್ಲಿ ಉತ್ತಮ ಮಳೆಯಾಗಲಿದೆ. ಉತ್ತರಾಖಂಡ ಹಾಗೂ ಉತ್ತರಪ್ರದೇಶದಲ್ಲಿ ಕೂಡ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಸ್ಥಾನ, ಪಂಜಾಬ್, ಹರಿಯಾಣ, ಜಮ್ಮು ಹಾಗೂ ಕಾಶ್ಮೀರದಲ್ಲಿ ಆಗಸ್ಟ್ 9ರವರೆಗೂ ಸಾಧಾರಣ ಮಳೆಯಾಗುವುದಾಗಿ ತಿಳಿಸಿದೆ. ಆಗಸ್ಟ್ 10ರವರೆಗೂ ಉತ್ತರ ಪ್ರದೇಶ ಹಾಗೂ ಉತ್ತರಾಖಂಡದ ಉತ್ತರ ಭಾಗಗಳಲ್ಲಿ ಮಳೆ ಮುಂದುವರೆಯುವುದು ಎಂದು ಹೇಳಿದೆ.
ಕೇರಳ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆ
ದಕ್ಷಿಣ ಭಾರತದಲ್ಲಿಯೂ ಮುಂಗಾರು ಮಳೆ ಹೆಚ್ಚಾಗುವ ಸೂಚನೆ ನೀಡಲಾಗಿದ್ದು, ಕರ್ನಾಟಕ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕೊಂಕಣ ಗೋವಾ, ಮಹಾರಾಷ್ಟ್ರದ ಮಧ್ಯಭಾಗದ ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಿನಲ್ಲಿ ಸಾಧಾರಣಕ್ಕಿಂತ ಹೆಚ್ಚಿನ ಮಳೆಯಾಗುವುದಾಗಿ ಸೂಚನೆ ನೀಡಲಾಗಿದೆ. ಕೇರಳ ಹಾಗೂ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 6ರಂದು ಅಧಿಕ ಮಳೆ ಮುನ್ಸೂಚನೆ ನೀಡಲಾಗಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಅಲರ್ಟ್
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಶುಕ್ರವಾರ ಅಧಿಕ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನಿಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸೂಚನೆ ನೀಡಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವುದಾಗಿ ತಿಳಿಸಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರುವುದಾಗಿ ತಿಳಿಸಿದೆ. ಇನ್ನೂ ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆ ವಾತಾವರಣವಿರುವುದಾಗಿ ಮಾಹಿತಿ ನೀಡಿದೆ.