ಈ ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ನವದೆಹಲಿ, ಜುಲೈ 27: ನೈಋತ್ಯ ಮುಂಗಾರು ಪ್ರಭಾವ ದೇಶಾದ್ಯಂತ ಗೋಚರಿಸುತ್ತಿದ್ದು, ಹಲವು ರಾಜ್ಯಗಳಲ್ಲಿ ಅತಿ ಹೆಚ್ಚಿನ ಮಳೆಯಾಗುತ್ತಿದೆ. ಮಹಾರಾಷ್ಟ್ರ, ದೆಹಲಿ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಉತ್ತರಾಖಂಡದಲ್ಲಿ ಅಧಿಕ ಮಳೆಯಾಗುತ್ತಿದ್ದು, ಜುಲೈ 27ರಂದು ಕೂಡ ಹೆಚ್ಚಿನ ಮಳೆ ಸೂಚನೆ ನೀಡಿದೆ. ಜೊತೆಗೆ ಮಧ್ಯ ಪ್ರದೇಶದ 24 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ನೀಡಿದೆ.
ಒಡಿಶಾ, ಪಶ್ಚಿಮ ಬಂಗಾಳ, ಜಾರ್ಖಂಡ್ ಹಾಗೂ ಬಿಹಾರದಲ್ಲಿ ಜುಲೈ 27ರ ನಂತರ ಎರಡು ದಿನಗಳಲ್ಲಿ ಮಳೆ ಪ್ರಮಾಣ ಹೆಚ್ಚಲಿದೆ. ಜುಲೈ 29ರ ನಂತರ ದೇಶದಲ್ಲಿ ಮುಂಗಾರು ಪ್ರಭಾವ ಗಣನೀಯವಾಗಿ ತಗ್ಗಲಿದೆ ಎಂದು ತಿಳಿಸಿದೆ. ಮಂಗಳವಾರ ಯಾವ ಯಾವ ರಾಜ್ಯಗಳಲ್ಲಿ ಹೆಚ್ಚಿನ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ? ಮುಂದಿದೆ ವಿವರ...
ಇನ್ನೂ ಎರಡು ದಿನ ಮಳೆ ಮುಂದುವರಿಕೆ
ಇದೀಗ ಮಂಗಳವಾರ ಹಿಮಾಚಲ ಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ ಹಾಗೂ ಜಾರ್ಖಂಡ್ನಲ್ಲಿ ಅತಿ ಹೆಚ್ಚಿನ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರೊಂದಿಗೆ ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರದಲ್ಲಿಯೂ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರೆಯುವುದಾಗಿ ಎಚ್ಚರಿಕೆ ನೀಡಿದೆ.
ಜುಲೈ 26ರಿಂದ 29ರವರೆಗೂ ಈ ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ
ಜುಲೈ 29ರವರೆಗೂ ಈ ರಾಜ್ಯಗಳಲ್ಲಿ ಮಳೆ
ನೈಋತ್ಯ ಮಧ್ಯಪ್ರದೇಶದಲ್ಲಿ ಚಂಡಮಾರುತದಂಥ ಪ್ರಭಾವ ಕಾಣಿಸಿಕೊಳ್ಳಲಿದೆ. ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ ಹಾಗೂ ಉತ್ತರ ಪ್ರದೇಶದಲ್ಲಿ ಜುಲೈ 29ರವರೆಗೂ ಭಾರೀ ಮಳೆಯಾಗಲಿದೆ. ಆನಂತರ ಮಳೆ ಪ್ರಮಾಣ ಗಣನೀಯವಾಗಿ ತಗ್ಗಲಿದೆ ಎಂದು ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪ್ರಭಾವ
ಬಂಗಾಳ ಕೊಲ್ಲಿಯ ಉತ್ತರ ಭಾಗದಲ್ಲಿ ಚಂಡಮಾರುತ ಪ್ರಸರಣವಿದ್ದು, ಜುಲೈ 28ಕ್ಕೆ ಇದರ ಪ್ರಭಾವ ನೆರೆಹೊರೆಯ ರಾಜ್ಯಗಳ ಮೇಲೆ ಗೋಚರಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ರವಾನಿಸಿದೆ.
"ಮಹಾ"ಮಳೆಯಲ್ಲಿ 164 ಮಂದಿ ಸಾವು; ನೂರಾರು ಮಂದಿ ಕಣ್ಮರೆ
ಸೋಮವಾರದಿಂದ ಮಹಾರಾಷ್ಟ್ರದಲ್ಲಿ ಮಳೆ ಸ್ವಲ್ಪ ತಗ್ಗಿದೆ. ಆದರೆ ಇದುವರಗೂ ಮಳೆಗೆ ಸಂಬಂಧಿಸಿದ ಅವಘಡಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 192ಕ್ಕೆ ಏರಿಕೆಯಾಗಿದೆ. ಸೋಮವಾರ 28 ಮೃತದೇಹಗಳು ದೊರೆತಿವೆ.
ಕರ್ನಾಟಕದ ಕರಾವಳಿ ಪ್ರದೇಶಗಳಿಗೆ ಯೆಲ್ಲೋ ಅಲರ್ಟ್
ಮುಂದಿನ ಎರಡು ದಿನ ಬೆಂಗಳೂರು ನಗರ ಪ್ರದೇಶದಲ್ಲಿ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಂಗಳವಾರ ಹಾಗೂ ಬುಧವಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.