ಈ ವಾರವಿಡೀ ಕೆಲ ರಾಜ್ಯಗಳಿಗೆ ಅಧಿಕ ಮಳೆ ಮುನ್ಸೂಚನೆ
ನವದೆಹಲಿ, ಸೆಪ್ಟೆಂಬರ್ 07: ನೈಋತ್ಯ ಮುಂಗಾರು ಚುರುಕಾಗಿದ್ದು, ಈ ವಾರದಲ್ಲಿ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ನೈಋತ್ಯ ಮುಂಗಾರು ಪ್ರಭಾವದಿಂದಾಗಿ ದಕ್ಷಿಣ, ಪಶ್ಚಿಮ ಹಾಗೂ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವುದಾಗಿ ಮುನ್ಸೂಚನೆ ನೀಡಿದೆ.
ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಈ ಅವಧಿಯಲ್ಲಿ ಅಧಿಕ ಮಳೆಯಾಗುವುದಾಗಿ ತಿಳಿಸಲಾಗಿದೆ. ಸೆಪ್ಟೆಂಬರ್ 7ರಿಂದ ದೇಶದ ಹಲವು ಭಾಗಗಳಲ್ಲಿ ಮಳೆ ಚುರುಕು ಪಡೆಯಲಿರುವುದಾಗಿ ಇಲಾಖೆ ತಿಳಿಸಿದೆ.

ಪಶ್ಚಿಮ ದಿಕ್ಕಿನಿಂದ ಮಾರುತಗಳು ವಾಯವ್ಯ ದಿಕ್ಕಿನೆಡೆಗೆ ಚಲಿಸಲಿದ್ದು, ವಾಯುಭಾರ ಕುಸಿತವಾಗಲಿದೆ. ಇದರ ಪ್ರಭಾವದಿಂದಾಗಿ ದಕ್ಷಿಣ ಒಡಿಶಾ, ಆಂಧ್ರದ ಕರಾವಳಿ, ತೆಲಂಗಾಣ, ವಿದರ್ಭಾ ಹಾಗೂ ಛತ್ತೀಸ್ಗಡದಲ್ಲಿ ಮಂಗಳವಾರ ಅಧಿಕ ಮಟ್ಟದಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಮಧ್ಯ ಮಹಾರಾಷ್ಟ್ರ, ಉತ್ತರ ಕೊಂಕಣ, ಗುಜರಾತ್ನಲ್ಲಿ ಸೆಪ್ಟೆಂಬರ್ 7-9ರವರಗೆ, ಉತ್ತರ ಕೊಂಕಣದಲ್ಲಿ ಸೆಪ್ಟೆಂಬರ್ 7-8ರವರೆಗೆ ಹಾಗೂ ಮಧ್ಯ ಮಹಾರಾಷ್ಟ್ರ, ಗುಜರಾತ್ನಲ್ಲಿ ಸೆಪ್ಟೆಂಬರ್ 8ರಂದು, ತೆಲಂಗಾಣದಲ್ಲಿ ಸೆಪ್ಟೆಂಬರ್ 7ರಂದು ಅತ್ಯಧಿಕ ಮಳೆಯಾಗುವುದಾಗಿ ತಿಳಿಸಿದೆ.
ವಾಯವ್ಯ ಭಾರತದಲ್ಲಿ ಈ ಅವಧಿಯಲ್ಲಿ ವ್ಯಾಪಕ ಮಳೆಯಾಗಲಿದ್ದು, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪಂಜಾಬ್, ಜಮ್ಮು ಹಾಗೂ ರಾಜಸ್ಥಾನದಲ್ಲಿ ಸೆಪ್ಟೆಂಬರ್ 7-9ರವರೆಗೂ ಮಳೆ ಮುಂದುವರೆಯುವುದಾಗಿ ತಿಳಿಸಲಾಗಿದೆ.

ದಕ್ಷಿಣ ಭಾರತದಲ್ಲಿ ಈ ವಾರವಿಡೀ ಗುಡುಗು ಮಿಶ್ರಿತ ಭಾರೀ ಮಳೆಯಾಗಲಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಅಧಿಕ ಮಳೆಯಾಗುವುದಾಗಿ ತಿಳಿಸಿದೆ. ಅರಬ್ಬೀ ಸಮುದ್ರದಿಂದ ಬೀಸುವ ಶೀತ ಮಾರುತಗಳು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಹೆಚ್ಚಿನ ಮಳೆಗೆ ಕಾರಣವಾಗಲಿದೆ ಎಂದು ಹೇಳಿದೆ.
ತೆಲಂಗಾಣ ಮತ್ತು ಕರಾವಳಿ, ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಂಗಳವಾರ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬುಧವಾರ ಕರಾವಳಿ ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಮಾತ್ರ ಹಳದಿ ಅಲರ್ಟ್ ಘೋಷಿಸಲಾಗಿದೆ.
ಸೆಪ್ಟೆಂಬರ್ ತಿಂಗಳಿನಲ್ಲಿ ಅಧಿಕ ಮಳೆ ಮುನ್ಸೂಚನೆ
ಸೆಪ್ಟೆಂಬರ್ ತಿಂಗಳಿನಲ್ಲಿ ದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ದಾಖಲಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ ಹಾಗೂ ಆಗಸ್ಟ್ ತಿಂಗಳಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಪ್ರಮಾಣದಲ್ಲಿ ಮಳೆ ದಾಖಲಾಗಿತ್ತು. ಎರಡು ತಿಂಗಳಿನಲ್ಲಿ ಬಿಟ್ಟು ಬಿಟ್ಟು ಮಳೆಯಾಗಿ ದೀರ್ಘಕಾಲ ಬಿಡುವನ್ನೂ ಪಡೆದುಕೊಂಡಿತ್ತು. ಇದೀಗ ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆ ಪ್ರಮಾಣ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ ತಿಂಗಳಿಗೆ ಹೋಲಿಸಿದರೆ ಮುಂಗಾರಿನ ಕೊನೆಯ ತಿಂಗಳಾದ ಸೆಪ್ಟೆಂಬರ್ನಲ್ಲಿ ಹೆಚ್ಚಿನ ಮಳೆ ದಾಖಲಾಗಬಹುದು.
ಕರ್ನಾಟಕದಲ್ಲಿ ಮಳೆ:
ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 7 ರಿಂದ 9ರವರೆಗೆ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ಇನ್ನೂ ಕೆಲವು ದಿನ ಮಳೆ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ರಾಯಚೂರು, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.












Click it and Unblock the Notifications